ಇಂಫಾಲ: ಚುನಾವಣೆಗೆ ರಾಜ್ಯಗಳನ್ನು ಒಗ್ಗೂಡಿಸುವ ಶಕ್ತಿ ಇದೆ. ಹಲವರು ಮಣಿಪುರ ಒಡೆಯುವ ಕಾರ್ಯ ಮಾಡುತ್ತಿದ್ದು, ಯಾವುದೇ ಕಾರಣಕ್ಕೂ ಈ ಕಾರ್ಯ ನಡೆಯದಂತೆ ನೋಡಿಕೊಳ್ಳುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಇಂಫಾಲದಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, ಮಣಿಪುರದಲ್ಲಿ ಒಳನುಸುಳುವಿಕೆಯ ಪ್ರಯತ್ನಗಳು ನಡೆಯುತ್ತಿವೆ. ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ ಪ್ರತಿಜ್ಞೆ ಮಾಡಿದ್ದೇವೆ. ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸಿ ಮತ್ತು ರಾಜ್ಯವನ್ನು ಒಡೆಯದೆ ಶಾಂತಿ ಸ್ಥಾಪನೆ ಮಾಡುವುದು ನರೇಂದ್ರ ಮೋದಿ ಸರ್ಕಾರದ ಮೊದಲ ಆದ್ಯತೆಯಾಗಿದೆ. ಮಣಿಪುರದ ಭವಿಷ್ಯ ಬದಲಾದಾಗ ದೇಶದ ಭವಿಷ್ಯ ಬದಲಾಗುತ್ತದೆ ಎಂದು ಹೇಳಿದ್ದಾರೆ.
ಮಣಿಪುರದ ಪರಿಸ್ಥಿತಿಯ ಕುರಿತು ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದರು. ಕೇಂದ್ರ ಸರಿಯಾದ ಸಮಯದಲ್ಲಿ ಮಧ್ಯಸ್ಥಿಕೆ ವಹಿಸಿ ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಮಾಡಿದೆ ಎಂದಿದ್ದರು. ಸಂಸತ್ತಿನಲ್ಲಿ ಪ್ರಧಾನಿ, ಭಾರತ ಮಣಿಪುರದೊಂದಿಗಿದೆ. ನಾವು ಒಟ್ಟಾಗಿ ಈ ಸವಾಲಿಗೆ ಪರಿಹಾರವನ್ನು ಕಂಡುಕೊಳ್ಳುತ್ತೇವೆ ಎಂದಿದ್ದರು.