ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಆರ್ಭಟ ಮುಂದುವರೆದಿದ್ದು, ಬೆಂಗಳೂರು, ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೊರೊನಾ ಸಾವಿನ ಸರಣಿ ಮುಂದುವರೆದಿದೆ.
ಬೆಂಗಳೂರಿನಲ್ಲಿ ಕಳೆದ 13 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ 65 ವರ್ಷದ ವೃದ್ಧೆಯೊಬ್ಬರು ಬಲಿಯಾಗಿದ್ದಾರೆ. ಶಿಡ್ಲಘಟ್ಟ ಮೂಲದ ವೃದ್ಧೆ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಅವರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ತಾಲೂಕಿನ ಕಲ್ಕಡ್ಕದ 49 ವರ್ಷದ ವ್ಯಕ್ತಿ ಕೊರೊನಾಗೆ ಉಸಿರು ಚೆಲ್ಲಿದ್ದಾರೆ. ಶನಿವಾರ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕಿಡ್ನಿ ಸಮಸ್ಯೆಯ ಚಿಕಿತ್ಸೆಗಾಗಿ ದಾಖಲಾಗಿದ್ದರು. ಕಿಡ್ನಿ ಜತೆಗೆ ಟಿ.ಬಿ ಹಾಗೂ ಲಿವರ್ನ ಸಮಸ್ಯೆಯಿಂದ ಬಳಲುತ್ತಿದ್ದರು. ಈ ವೇಳೆ ಪರೀಕ್ಷೆ ನಡೆಸಿದಾಗ ಕೋವಿಡ್ ಸೋಂಕು ಇರುವುದು ದೃಢಪಟ್ಟಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ದ.ಕ ಜಿಲ್ಲೆಯಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.
7 ದಿನದ ಹಸುಳೆಗೂ ಕೊರೋನಾ..!
ಮಂಗಳೂರಿನಲ್ಲಿ 7 ದಿನದ ಮಗುವಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಗು ಜನಿಸಿತ್ತು. ಜೂನ್ 28 ರಂದು ಮಗುವಿನ ತಾಯಿಗೆ ಕೊರೋನಾ ಪಾಸಿಟಿವ್ ಆಗಿತ್ತು. ತಾಯಿ ನಂತರ ಹಸುಳೆಗೂ ಕೊರೊನಾ ಬಂದ ಹಿನ್ನೆಲೆಯಲ್ಲಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಗದಗ್ನಲ್ಲಿ ವೃದ್ಧ ಸಾವು
ಗದಗ ಜಿಲ್ಲೆಯಲ್ಲಿ ಕೊರೊನಾ ಅಬ್ಬರ ಮುಂದುವರೆದಿದ್ದು, ಇಂದು 75 ವರ್ಷದ ವೃದ್ಧರೊಬ್ಬರು ಬಲಿಯಾಗಿದ್ದಾರೆ. ಮುಂಡರಗಿ ಪಟ್ಟಣದ ನಿವಾಸಿಯಾಗಿದ್ದ ವೃದ್ಧರು, ಕಳೆದ 10 ದಿನಗಳ ಹಿಂದೆ ಶುಗರ್, ಅಧಿಕ ರಕ್ತದೊತ್ತಡದಿಂದ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಸ್ವ್ಯಾಬ್ ಪರೀಕ್ಷೆ ನಡೆಸಿದಾಗ ಕೋವಿಡ್ ದೃಢಪಟ್ಟಿತ್ತು. ಇಂದು ಬೆಳಗಿನ ಜಾವ ಚಿಕಿತ್ಸೆ ಫಲಿಸದೆ ವೃದ್ಧ ಮೃತಪಟ್ಟಿದ್ದು, ಗದಗ ಜಿಲ್ಲೆಯಲ್ಲಿ ಕೊರೊನಾಗೆ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಸದ್ಯ 115 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.