ಕಾವೇರಿ ವಿವಾದದ ಹಿನ್ನೆಲೆಯಲ್ಲಿ ಆಗಸ್ಟ್ 13ರಂದು ಕರ್ನಾಟಕ ಬಂದ್ಗೆ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬೆನ್ನಲ್ಲೇ, ವಿವಿಧ ಸಂಘಟನೆಗಳಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.
ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣ) ಅಧ್ಯಕ್ಷ ನಾರಾಯಣ ಗೌಡ ಮಾತನಾಡಿ, ಈ ಬಂದ್ಗೆ ಕರವೇ ಬೆಂಬಲ ನೀಡುವುದಿಲ್ಲ ಹಾಗೂ ಭಾಗವಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬಂದ್ಗಿಂತ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರೆ ನಮ್ಮ ಧ್ವನಿ ಕೇಂದ್ರ ಸರ್ಕಾರಕ್ಕೆ ತಲುಪುತ್ತದೆ. ಬಂದ್ ಮಾಡಿದರೆ ರಾಜ್ಯದ ಜನರಿಗೇ ನಷ್ಟವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ದೆಹಲಿಯಲ್ಲಿ ಪ್ರತಿಭಟನೆ ನಡೆಸುವ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸುವುದಾಗಿ ತಿಳಿಸಿದ್ದಾರೆ.
ಇನ್ನೊಂದೆಡೆ, ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ. ರಾವ್ ಅವರು, ಆಗಸ್ಟ್ 13ರ ಬಂದ್ಗೆ ಬೆಂಬಲ ನೀಡುವ ಕುರಿತು ಇನ್ನೂ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.
ಹೋಟೆಲ್, ಬಾರ್, ರೆಸ್ಟೋರೆಂಟ್ ಹಾಗೂ ಬೇಕರಿ ಮಾಲೀಕರ ಜಂಟಿ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ ಅವರು, ನಾಡು-ನುಡಿಯ ಹಿತದ ವಿಚಾರದಲ್ಲಿ ತಮ್ಮ ಬೆಂಬಲ ಸದಾ ಇರುತ್ತದೆ ಎಂದು ಹೇಳಿದ್ದಾರೆ.








