ಮೈಸೂರು ಪ್ರವಾಸದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆದ ಅತ್ಯಂತ ಆಪ್ತ ಹಾಗೂ ಕುತೂಹಲಕಾರಿ ಸಂಭಾಷಣೆಯೊಂದನ್ನು ಬಹಿರಂಗಪಡಿಸುವ ಮೂಲಕ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ನಾಂದಿ ಹಾಡಿದ್ದಾರೆ. ಪ್ರಧಾನಿಗಳು ತಮ್ಮ ಕಿವಿಯಲ್ಲಿ ಪಿಸುಗುಟ್ಟಿದ ಆ ರಹಸ್ಯವೇನು ಎಂಬುದನ್ನು ಸಿಎಂ ಇದೀಗ ಜಗತ್ತಿನ ಮುಂದೆ ತೆರೆದಿಟ್ಟಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ನನ್ನ ಹತ್ತಿರ ಬಂದು ಕಿವಿಯಲ್ಲಿ ಮಹಿಳಾ ಮೀಸಲಾತಿ ವಿಚಾರದಲ್ಲಿ ನಿಮ್ಮ ವೈಯಕ್ತಿಕ ನಿಲುವು ಏನು ಎಂದು ಪ್ರಶ್ನಿಸಿದರು. ಅದಕ್ಕೆ ತಕ್ಷಣವೇ ಉತ್ತರಿಸಿದ ನಾನು, ನಾವು ಮಹಿಳಾ ಮೀಸಲಾತಿಯ ಪರವಾಗಿಯೇ ಇದ್ದೇವೆ ಎಂದು ಸ್ಪಷ್ಟಪಡಿಸಿದೆ ಎಂದು ರಹಸ್ಯವನ್ನು ಬಿಚ್ಚಿಟ್ಟರು.
ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ, ಮಹಿಳಾ ಮೀಸಲಾತಿ ಜಾರಿಯ ವಿಷಯದಲ್ಲಿ ಬಿಜೆಪಿ ಕೇವಲ ರಾಜಕೀಯ ಗಿಮಿಕ್ ಮಾಡುತ್ತಿದೆ ಹೊರತು ಅದಕ್ಕೆ ಯಾವುದೇ ಪ್ರಾಮಾಣಿಕ ಬದ್ಧತೆ ಇಲ್ಲ. ಕಾಂಗ್ರೆಸ್ ಎಂದಿಗೂ ಮಹಿಳಾ ಮೀಸಲಾತಿ ವಿರೋಧಿಯಲ್ಲ. ಆದರೆ ಕೇಂದ್ರ ಸರ್ಕಾರ ಇದನ್ನು ಜಾರಿ ಮಾಡುವ ಹಾದಿಯಲ್ಲಿ ಅನುಸರಿಸುತ್ತಿರುವ ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆಯ ಬಗ್ಗೆ ನಮ್ಮ ತಕರಾರು ಇದೆ. 2023ರಲ್ಲೇ ಈ ವಿಧೇಯಕ ಜಾರಿಗೆ ತರಲು ಅವಕಾಶವಿತ್ತು. ಆದರೆ ಅದನ್ನು ಈಗ ಜನಗಣತಿಯೊಂದಿಗೆ ತಳುಕು ಹಾಕಿ ವಿಳಂಬ ಮಾಡುತ್ತಿರುವುದು ಯಾಕೆ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.
ವಿಶೇಷವಾಗಿ ದಕ್ಷಿಣ ಭಾರತದ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಧ್ವನಿ ಎತ್ತಿದ ಅವರು, ಹೊಸ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆಯಾದರೆ ಕರ್ನಾಟಕಕ್ಕೆ ದೊಡ್ಡ ಮಟ್ಟದ ಹೊಡೆತ ಬೀಳಲಿದೆ. ನಾವು ಜನಸಂಖ್ಯೆಯನ್ನು ಯಶಸ್ವಿಯಾಗಿ ನಿಯಂತ್ರಿಸಿದ್ದೇವೆ, ಆದರೆ ಉತ್ತರ ಭಾರತದ ರಾಜ್ಯಗಳು ಇದನ್ನು ಮಾಡಿಲ್ಲ. ಜನಸಂಖ್ಯೆ ಹೆಚ್ಚಿದೆ ಎಂಬ ಕಾರಣಕ್ಕೆ ಅವರಿಗೆ ಹೆಚ್ಚಿನ ರಾಜಕೀಯ ಪ್ರಾತಿನಿಧ್ಯ ನೀಡಿ, ನಿಯಮ ಪಾಲಿಸಿದ ನಮಗೆ ಅನ್ಯಾಯ ಮಾಡುವುದು ಸರಿಯಲ್ಲ ಎಂದು ಆತಂಕ ವ್ಯಕ್ತಪಡಿಸಿದರು. ಭೌಗೋಳಿಕ ವ್ಯಾಪ್ತಿ ಮತ್ತು ಜನಸಂಖ್ಯೆಯ ಸಮತೋಲನ ಕಾಯ್ದುಕೊಳ್ಳುವುದು ಮುಖ್ಯ ಎಂದು ತಿಳಿಸಿದರು.
ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಬಗ್ಗೆಯೂ ಭವಿಷ್ಯ ನುಡಿದ ಸಿದ್ದರಾಮಯ್ಯ, ತಮಿಳುನಾಡಿನಲ್ಲಿ ಡಿಎಂಕೆ ಜಯಭೇರಿ ಬಾರಿಸಲಿದೆ. ಇನ್ನು ಕಾಂಗ್ರೆಸ್ ಜಾರಿಗೆ ತಂದಿದ್ದ ಜನಪ್ರಿಯ ಗ್ಯಾರಂಟಿ ಯೋಜನೆಗಳನ್ನು ಈ ಹಿಂದೆ ಉಚಿತ ಎಂದು ಟೀಕಿಸುತ್ತಿದ್ದ ಬಿಜೆಪಿಯವರು, ಈಗ ಅನಿವಾರ್ಯವಾಗಿ ಅದೇ ಯೋಜನೆಗಳನ್ನು ನಕಲು ಮಾಡಿ ಚುನಾವಣೆ ಎದುರಿಸುತ್ತಿದ್ದಾರೆ ಎಂದು ಲೇವಡಿ ಮಾಡುವ ಮೂಲಕ ಬಿಜೆಪಿಗೆ ತಿರುಗೇಟು ನೀಡಿದರು.








