ನವದೆಹಲಿ : ಕಾಂಗ್ರೆಸ್ ಪಕ್ಷ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ ಇಂದಿಗೆ 45 ವರ್ಷ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ನಲ್ಲಿ ತುರ್ತುಪರಿಸ್ಥಿತಿ ಸಂದರ್ಭದಲ್ಲಿ ಹೋರಾಡಿದವರಿಗೆ ನಮನ ಸಲ್ಲಿಸಿದ್ದಾರೆ. ಜೊತೆಗೆ 1975ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ದೇಶದಲ್ಲಿ ಹೇರಿದ್ದ ತುರ್ತು ಪರಿಸ್ಥಿತಿಯ ವಿರುದ್ಧ ಹೋರಾಡಿದ ಎಲ್ಲರ ತ್ಯಾಗವನ್ನು ಮರೆಯುವುದಿಲ್ಲ ಎಂದು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಇಂದಿಗೆ 45 ವರ್ಷಗಳ ಹಿಂದೆ ತುರ್ತು ಪರಿಸ್ಥಿತಿ ಹೇರಲಾಗಿತ್ತು. ಭಾರತದ ಪ್ರಜಾಪ್ರಭುತ್ವದ ರಕ್ಷಣೆಗಾಗಿ ಹೋರಾಡಿದ, ಚಿತ್ರಹಿಂಸೆ ಅನುಭವಿಸಿದ ಎಲ್ಲರಿಗೂ ನನ್ನ ನಮನಗಳು’ ಎಂದು ಉಲ್ಲೇಖಿಸಿದ್ದಾರೆ. ಈ ಎಲ್ಲರ ತ್ಯಾಗ, ಹೋರಾಟವನ್ನು ದೇಶ ಎಂದಿಗೂ ಮರೆಯುವುದಿಲ್ಲ ಎಂದು ಬರೆದುಕೊಂಡಿದ್ದಾರೆ.
आज से ठीक 45 वर्ष पहले देश पर आपातकाल थोपा गया था। उस समय भारत के लोकतंत्र की रक्षा के लिए जिन लोगों ने संघर्ष किया, यातनाएं झेलीं, उन सबको मेरा शत-शत नमन! उनका त्याग और बलिदान देश कभी नहीं भूल पाएगा। pic.twitter.com/jlQVJQVrsX
— Narendra Modi (@narendramodi) June 25, 2020
ಜೂನ್ 25, 1975ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ದೇಶದಲ್ಲಿ ತುರ್ತುಪರಿಸ್ಥಿತಿ ಹೇರಿದ್ದರು. 1977ರ ಮಾರ್ಚ್ 21ರವರೆಗೆ ಬರೋಬ್ಬರಿ 21 ತಿಂಗಳ ಕಾಲ ತುರ್ತುಪರಿಸ್ಥಿತಿ ಇತ್ತು. ಈ ಅವಧಿಯಲ್ಲಿ ದೇಶದ ನ್ಯಾಯಾಂಗ ವ್ಯವಸ್ಥೆ, ಪತ್ರಿಕಾ ಸ್ವಾತಂತ್ರ್ಯದಿಂದ ಹಿಡಿದು ಎಲ್ಲವನ್ನೂ ಇಂದಿರಾ ಗಾಂಧಿ ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದರು. ಇಂದಿರಾ ಗಾಂಧಿ ಅವರ ಈ ನಡೆಯನ್ನು ಖಂಡಿಸಿ, ದೇಶದಾದ್ಯಂತ ಹೋರಾಟಗಳು ನಡೆದವು. ಈ ವೇಳೆ ಹಲವರನ್ನು ಬಂಧಿಸಲಾಗಿತ್ತು.