ರಾಜ್ಯದಲ್ಲಿ ಮಾನ್ಸೂನ್ ಚುರುಕು : ಮಲೆನಾಡು ಭಾಗದಲ್ಲಿ ಆರೆಂಜ್ ಅಲರ್ಟ್
ಬೆಂಗಳೂರು : ರಾಜ್ಯದಲ್ಲಿ ಮಾನ್ಸೂನ್ ಚುರುಕುಗೊಂಡಿದ್ದು, ಹಲವೆಡೆ ಭಾರಿ ಮಳೆಯಾಗುತ್ತಿದೆ. ಅದರಲ್ಲೂ ಉತ್ತರ ಕನ್ನಡ , ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಹಿನ್ನೆಲೆ ಜೂನ್ 17, 18ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಜೂನ್ 19 ಹಾಗೂ 20 ರವರೆಗೆ ಸಾಧಾರಣ ಮಳೆಯಾಗಲಿರುವುದರಿಂದ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ.
ಇನ್ನು ಕೊಟ್ಟಿಗೆಹಾರದಲ್ಲಿ 22 ಸೆಂ.ಮೀ ಮಳೆಯಾಗಿದೆ. ನಿಪ್ಪಾಣಿ 14 ಸೆಂ.ಮೀ, ಶೃಂಗೇರಿಯಲ್ಲಿ 12 ಸೆಂ.ಮೀ ಮಳೆಯಾಗಿದೆ.
ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿಯೂ ಇಂದು ಮತ್ತು ನಾಳೆ ವ್ಯಾಪಕ ಮಳೆಯಾಗಲಿದೆ. ಜೂನ್ 19 ರಿಂದ 20ರವರೆಗೆ ಕೆಲವು ಸ್ಥಳಗಳಲ್ಲಿ ಮಾತ್ರ ಮಳೆಯಾಗಲಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಜೂನ್ 17ರವರೆಗೆ ಭಾರಿ ಮಳೆ ಆಗಲಿರುವುದರಿಂದ ಆರೆಂಜ್ ಅಲರ್ಟ್ ಕೊಡಲಾಗಿದೆ.
ಜೂನ್ 18 ರಂದು ಎಲ್ಲೋ ಅಲರ್ಟ್ ಕೊಡಲಾಗಿದೆ. ಇದಲ್ಲದೆ ಬೆಳಗಾವಿ, ಬೀದರ್, ಕಲಬುರ್ಗಿ ಜಿಲ್ಲೆಗಳಿಗೆ ಇಂದು ಮತ್ತು ನಾಳೆಗೆ ಎಲ್ಲೋ ಅಲರ್ಟ್ ಕೊಡಲಾಗಿದೆ.