2 ಸಾವಿರಕ್ಕೂ ಹೆಚ್ಚು ಗ್ರಾಮಗಳು ಕಂದಾಯ ಗ್ರಾಮಗಳಾಗಿ ಘೋಷಣೆ
ರಾಜ್ಯದಲ್ಲಿ 2 ಸಾವಿರಕ್ಕೂ ಹೆಚ್ಚು ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ರಾಜ್ಯ ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಗ್ರಾಮಸ್ಥರು ಸೂಚಿಸಿದ ಹೆಸರಿನಲ್ಲಿ ಗ್ರಾಮದ ಅಧಿಸೂಚನೆ ಹೊರಡಿಸುವುದಾಗಿ ತಿಳಿಸಿದರು.
ಸದಸ್ಯರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಚಿವರು, ದರ್ಕಾಸ್ತು ಭೂಮಿಯ ಪೋಡಿ ಸಮಸ್ಯೆಗಳನ್ನು ಶೀಘ್ರವೇ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗುವುದು. ಈ ಸಮಸ್ಯೆ ಹತ್ತಾರು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಇದರಿಂದ ಸಮೀಕ್ಷೆ ಕಾರ್ಯ ವಿಳಂಬವಾಗುತ್ತಿದೆ. ಹೊಸದಾಗಿ 3 ಸಾವಿರ ಪರವಾನಗಿ ಪಡೆದ ಸರ್ವೇಯರ್ ಗಳಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಪಹಣಿ ಸೇರಿದಂತೆ ಇತರ ಕಂದಾಯ ದಾಖಲೆಗಳಲ್ಲಿರುವ ಸಣ್ಣಪುಟ್ಟ ಲೋಪಗಳನ್ನು ತಿದ್ದುಪಡಿ ಮಾಡಲು ಕೆಳಹಂತದ ಅಧಿಕಾರಿಗಳಿಗೆ ಅಧಿಕಾರ ನೀಡಲಾಗುವುದು ಎಂದು ಅಶೋಕ ಹೇಳಿದರು.
ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಮನೆ ಕಳೆದುಕೊಂಡವರಿಗೆ ಕೇಂದ್ರ ಸರ್ಕಾರದ ಎನ್ ಡಿಆರ್ ಎಫ್ ಅಡಿ 95 ಸಾವಿರದ 100 ರೂಪಾಯಿ ಪರಿಹಾರ ನೀಡಲಾಗುವುದು. ಅದಕ್ಕೆ ರಾಜ್ಯ ಸರ್ಕಾರ 4 ಲಕ್ಷದ 4 ಸಾವಿರದ 900 ರೂಪಾಯಿ ಸೇರಿಸಿ ಒಟ್ಟು 5 ಲಕ್ಷ ರೂಪಾಯಿ ಪರಿಹಾರ ವಿತರಿಸಲಾಗುತ್ತಿದೆ ಎಂದರು.