ದಸರಾ ಉತ್ಸವ ಉದ್ಘಾಟಿಸಲಿರುವ ಎಂ.ಎಸ್.ಕೃಷ್ಣ ಜೀವನ ಹಾಗೂ ರಾಜಕೀಯ ಹಾದಿ
ಬೆಂಗಳೂರು : ಈ ಬಾರಿಯ ದಸರಾವನ್ನು ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ಉದ್ಘಾಟಿಸಲಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ. “ಅಕ್ಟೋಬರ್ 7ರಿಂದ ಆರಂಭವಾಗಲಿರುವ ನಾಡಹಬ್ಬದಸರಾ ಮಹೋತ್ಸವವನ್ನು ಉದ್ಘಾಟಿಸಲು ಹಿರಿಯ ಮುತ್ಸದ್ಧಿ, ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ.ಕೃಷ್ಣ ರವರಿಗೆ ಆಹ್ವಾನ ನೀಡಲು ರಾಜ್ಯಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಟ್ವೀಟ್ ನಲ್ಲಿದೆ.
ಇನ್ನು ಅಕ್ಟೋಬರ್ ಏಳರಿಂದ ಹದಿನೈದರ ತನಕ ದಸರಾ ನಡೆಯಲಿದ್ದು, 15 ರಂದು ಅರಮನೆ ಮೈದಾನದಲ್ಲಿ ಜಂಬೂ ಸವಾರಿ ಇರಲಿದೆ.
ಎಸ್.ಎಂ.ಕೃಷ್ಣ ಅವರ ಪರಿಚಯ
1932ರಲ್ಲಿ ಮಂಡ್ಯ ಜಿಲ್ಲೆ ಸೋಮನಹಳ್ಳಿಯಲ್ಲಿ ಎಸ್.ಎಂ.ಕೃಷ್ಣ ಅವರು ಜನಿಸಿದರು. ಬಾಲ್ಯವಿದ್ಯಾಭ್ಯಾಸ ಮುಗಿಸಿ ಮೈಸೂರು ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದರು. ಬಳಿಕ ಬೆಂಗಳೂರಿನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದರು. ಅಮೆರಿಕದ ಸದರ್ನ್ ಮೆಥಡಿಸ್ಟ್ ವಿವಿಯಲ್ಲಿ ಕಾನೂನು ಅಭ್ಯಾಸ ಮಾಡಿದರು. ಇದಾದ ನಂತರ ಬೆಂಗಳೂರಿನ ರೇಣುಕಾಚಾರ್ಯ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ.
1962ರಲ್ಲಿ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾದರು. 1968ರಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಗೊಂಡರು. 1971ರಲ್ಲಿ ಮತ್ತೊಮ್ಮೆ ಸಂಸದರಾದರು.
1972ರಲ್ಲಿ 1977 ರಲ್ಲಿ ಕರ್ನಾಟಕದ ವಿಧಾನ ಪರಿಷತ್ತಿಗೆ ಚುನಾಯಿತರಾದರು. 1977ರಲ್ಲಿ ವಾಣಿಜ್ಯ, ಉದ್ಯಮ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿ ಆಯ್ಕೆಯಾದರು. 1983ರಲ್ಲೂ ಉದ್ಯಮ ಖಾತೆ ಸಚಿವರಾಗಿದರು. 1984 ರಲ್ಲಿ ವಿತ್ತ ಖಾತೆಯ ಸಚಿವರಾಗಿದ್ದ ಎಸ್.ಎಂ.ಕೃಷ್ಣ, 1989 ರಿಂದ 1992ರ ವರೆಗೆ ವಿಧಾನಸಭೆಯ ಸ್ಪೀಕರ್ ಆಗಿ ನೇಮಕವಾಗಿದ್ದರು.
ಇದಾದ ಬಳಿಕ 1992 ರಿಂದ 1994ರ ವರೆಗೆ ಕರ್ನಾಟಕದ ಉಪ-ಮುಖ್ಯಮಂತ್ರಿಯಾಗಿ ನೇಮಕವಾಗಿದ್ದ ಎಸ್.ಎಂ ಕೃಷ್ಣ, 1996 ರಲ್ಲಿ ರಾಜ್ಯಸಭೆಗೆ ನೇಮಕಗೊಂಡರು.
ಇನ್ನು 1999 ರಲ್ಲಿ ಕರ್ನಾಟಕದ 16ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. 1999ರಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿದ್ದರು. ನಂತರ 2004- 2008ರವರೆಗೆ ಮಹಾರಾಷ್ಟ್ರ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದರು. 2008-2014ರವರೆಗೆ ಕರ್ನಾಟಕದ ರಾಜ್ಯಸಭಾ ಸದಸ್ಯರಾದರು.
2009 – 2012ರವರೆಗೆ ವಿದೇಶಾಂಗ ಸಚಿವರಾಗಿ ಕಾರ್ಯ ನಿರ್ವಹಣೆ ಮಾಡಿದರು.
ಬಳಿಕ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿಕೊಂಡರು. ಈಗ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದಾರೆ.









