ಮೈಸೂರು, : ಇಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಮೈಸೂರಿನ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಬರ ಪರಿಶೀಲನೆ ನಡೆಸಿದ ಬಳಿಕ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ, ವಿವಿಧ ವಿಷಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ಸ್ಪಷ್ಟ ಸೂಚನೆಗಳನ್ನು ನೀಡಿದರು.
ಈ ಸಭೆಯ ಪ್ರಧಾನ ಉದ್ದೇಶ ಬರದ ಕುರಿತು ಪರಿಶೀಲನೆ ಮಾಡುವುದೇ ಆಗಿದೆ. ಸರ್ಕಾರ ಬರ ನಿರ್ವಹಣೆಯ ಕುರಿತು ಬಹಳ ಗಂಭೀರವಾಗಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು ಬರವನ್ನು ಹಗುರ ಮನಸ್ಥಿತಿಯಾಗಿ ಪರಿಗಣಿಸಬಾರದು. ಜನರ ಮೂಲಭೂತ ಅವಶ್ಯಕತೆಗಳಾದ ಕುಡಿಯುವ ನೀರು, ಆಹಾರ, ಜೀವನೋಪಾಯಕ್ಕೆ ಅಗತ್ಯವಿರುವ ಉದ್ಯೋಗ, ಆರೋಗ್ಯ ಜಾನುವಾರುಗಳಿಗೆ ಮೇವು, ನೀರು ಮುಂತಾದವುಗಳನ್ನು ನೋಡಿಕೊಳ್ಳುವುದಾಗಿದೆ. ಇದನ್ನು ಕಂದಾಯ ಇಲಾಖೆಯು ಇತರೆ ಸಂಬಂಧಿತ ಇಲಾಖೆಗಳ ಜೊತೆ ಸೇರಿ ಜನ-ಜಾನುವಾರುಗಳಿಗೆ ಯಾವುದೇ ಸಮಸ್ಯೆಯಾಗದಂತೆ ಪರಿಸ್ಥಿತಿಯನ್ನು ನಿಭಾಯಿಸಬೇಕಾಗಿದೆ ಎಂದು ಹೇಳಿದರು.
ಜೂನ್ನಿಂದ ಆಗಸ್ಟ್ ಅಂತ್ಯದವರೆಗೆ ಮೈಸೂರಿನಲ್ಲಿ ವಾಡಿಕೆ ಮಳೆ 310 ಮಿ.ಮೀ ಆಗಬೇಕಿತ್ತು, ಆದರೆ ಕೇವಲ 140 ಮಿ.ಮೀ ಮಳೆಯಾಗಿದೆ. ಅಂದರೆ, ಶೇ. 55 ರಷ್ಟು ತೀವ್ರ ಮಳೆ ಕೊರತೆ ಉಂಟಾಗಿದ್ದು, ಜಿಲ್ಲೆಯು ಕೊರತೆ ಪಟ್ಟಿಯಲ್ಲಿದೆ. ಮೈಸೂರು ಜಿಲ್ಲೆಯಲ್ಲಿ ಜೂನ್ನಲ್ಲಿ ಶೇ. 56, ಜುಲೈನಲ್ಲಿ ಶೇ. 61 ಮತ್ತು ಆಗಸ್ಟ್ನಲ್ಲಿ ಶೇ. 45ರಷ್ಟು ಮಳೆ ಕೊರತೆ ದಾಖಲಾಗಿದೆ. ಮೈಸೂರು ಜಿಲ್ಲೆಯ 8 ತಾಲೂಕುಗಳನ್ನು (ಹೆಗ್ಗಡದೇವನಕೋಟೆ, ಹುಣಸೂರು, ಕೆ.ಆರ್. ನಗರ, ಮೈಸೂರು, ನಂಜನಗೂಡು, ಸಾಲಿಗ್ರಾಮ, ಸರಗೂರು, ಟಿ. ನರಸೀಪುರ) ‘ತೀವ್ರ’ (Severe) ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ ಎಂದು ತಿಳಿಸಿದರು.
ಮೈಸೂರಿನಲ್ಲಿ ಜುಲೈ-2026 ರಿಂದ ಈಚೆಗೆ ಕೇವಲ 1.91 ಲಕ್ಷ ಮಾನವ ದಿನಗಳಷ್ಟು ಮಾತ್ರ ಉದ್ಯೋಗಗಳನ್ನು ಸೃಷ್ಟಿಸಲಾಗಿದೆ. ಆದರೆ ಕಳೆದ ವರ್ಷ ಇದೇ 2 ತಿಂಗಳುಗಳಲ್ಲಿ 4.33 ಲಕ್ಷ ಉದ್ಯೋಗಗಳನ್ನು ಸೃಜಿಸಲಾಗಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಶೇ.55 ರಷ್ಟು ಕಡಿಮೆಯಾಗಿದೆ. ಉತ್ತಮ ಮಳೆ ಬಂದ ವರ್ಷ 4.33 ಲಕ್ಷ ಉದ್ಯೋಗ ಸೃಷ್ಟಿಯಾದರೆ ಈ ವರ್ಷ ಯಾಕೆ ಇಷ್ಟು ಕಡಿಮೆಯಾಗಿದೆ. ಜನರು ಉದ್ಯೋಗ ಕೇಳುತ್ತಿಲ್ಲವೇ? ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ಅವರ ಅಧೀನ ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಅಷ್ಟೇ ಅಲ್ಲದೇ, ಮೈಸೂರಿನಲ್ಲಿ ಕೃಷಿ ಬೆಳೆ ವಿಮೆಯೂ ಕಡಿಮೆಯಾಗಿದೆ. ರಾಜ್ಯದಲ್ಲಿ 49.64 ಲಕ್ಷ ರೈತರ ಅರ್ಜಿಗಳಿಗೆ ಹಾಗೂ 33,17,167 ಹೆಕ್ಟೇರ್ ಭೂಮಿಗೆ ಬೆಳೆ ವಿಮೆ ಮಾಡಿಸಲಾಗಿದೆ. ಆದರೆ ಮೈಸೂರಿನಲ್ಲಿ ಕೇವಲ 20,836 ಜನ 8,046 ಹೆಕ್ಟೇರ್ ಪ್ರದೇಶಕ್ಕೆ ಮಾತ್ರ ನೋಂದಾಯಿಸಿಕೊಂಡಿದ್ದಾರೆ. ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಯಾಕಿಷ್ಟು ನಿರ್ಲಕ್ಷ್ಯ ಮಾಡುತ್ತಿದ್ದಾರೆ? ರೈತರಿಗೆ ಉತ್ತೇಜನ ನೀಡುವ ಕೆಲಸಗಳನ್ನು ಯಾಕೆ ಮಾಡಲಿಲ್ಲ? ಬೇಜವಾಬ್ದಾರಿತನ ತೋರಿದರೆ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.
ನಿಮ್ಮ ಅಧಿಕಾರಿಗಳು ಹೇಳಿರುವಂತೆ ನಿಮ್ಮ ಬಳಿ 33 ವಾರಗಳಿಗೆ ಸಾಕಾಗುವಷ್ಟು ಮೇವಿನ ದಾಸ್ತಾನು ಇದೆ. ಈ ಮಾಹಿತಿ ಸರಿಯಿದೆಯೇ ಎಂದು ಪರಿಶೀಲಿಸಿಕೊಳ್ಳಬೇಕಾಗಿದೆ. ಯಾವ ಯಾವ ರೈತರ ಬಳಿ ಕೊಳವೆ ಬಾವಿಗಳಿವೆಯೊ ಅವರಿಗೆ ಮೇವಿನ ಬೀಜಗಳನ್ನು ನೀಡಿ ಮೇವು ಬೆಳೆಯುವಂತೆ ಉತ್ತೇಜನೆ ನೀಡಬೇಕು ಎಂದು ತಿಳಿಸಿದರು.
ನಾವು ಈಗಾಗಲೇ ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗಗಳ ಪರಿಶೀಲನಾ ಸಭೆಗಳನ್ನು ಮಾಡಿ ಮುಗಿಸಿದ್ದೇವೆ. ಸ್ವತಃ ನಾನು ಬೆಳಗಾವಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಪರಿಶೀಲನೆ ನಡೆಸಿದ್ದೇನೆ. ಸ್ಥಳ ಪರಿಶೀಲನೆ ಮಾಡಿದ್ದೇನೆ ಎಂದರು.
ಮೈಸೂರು ಜಿಲ್ಲೆಯಲ್ಲಿ 6 ತಾಲೂಕುಗಳ 14 ಗ್ರಾಮ ಪಂಚಾಯತಿಗಳಲ್ಲಿ ಸಮಸ್ಯೆಯಿದ್ದು, 6 ಗ್ರಾಮಗಳಿಗೆ 6 ಟ್ಯಾಂಕರ್ಗಳ ಮೂಲಕ ಹಾಗೂ 9 ಗ್ರಾಮಗಳಿಗೆ 10 ಖಾಸಗಿ ಬೋರ್ವೆಲ್ಗಳ ಮೂಲಕ ನೀರು ಒದಗಿಸಲಾಗುತ್ತಿದೆ. ಮೈಸೂರು ಜಿಲ್ಲೆಯ 3 ನಗರ ಸ್ಥಳೀಯ ಸಂಸ್ಥೆಗಳ (ULBs) 13 ವಾರ್ಡ್ಗಳಿಗೆ 14 ಟ್ಯಾಂಕರ್ಗಳನ್ನು ಬಳಸಲಾಗುತ್ತಿದೆ. ಮೈಸೂರು ಜಿಲ್ಲೆಯಲ್ಲಿ ಒಟ್ಟಾರೆ 33 ವಾರಗಳಿಗೆ ಆಗುವಷ್ಟು 7,04,890 ಟನ್ ಮೇವು ಲಭ್ಯವಿದೆ. ಮೈಸೂರು (25 ವಾರ), ಹುಣಸೂರು (25 ವಾರ) ಹಾಗೂ ಪಿರಿಯಾಪಟ್ಟಣ (26 ವಾರ) ತಾಲೂಕುಗಳಲ್ಲಿ ಲಭ್ಯತೆ ಕಡಿಮೆಯಿದೆ. ಮೇವಿನ ಕಿಟ್ಗಳನ್ನು ವಿತರಿಸಲು ಪಶುಸಂಗೋಪನಾ ಇಲಾಖೆಗೆ ಸರ್ಕಾರ ಈಗಾಗಲೇ ₹25 ಕೋಟಿಗಳನ್ನು ಬಿಡುಗಡೆ ಮಾಡಿದೆ ಎಂದು ಮಾಹಿತಿ ನೀಡಿದರು.
ಎಲ್ಲಾ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಸಾಕಷ್ಟು ಹಣವಿದೆ. ಈ ಅನುದಾನವನ್ನು ಸರ್ಕಾರದ ಮಾರ್ಗಸೂಚಿಯಂತೆ ಕುಡಿಯುವ ನೀರು ಮತ್ತು ಇತರೆ ತುರ್ತು ಪರಿಹಾರ ಕಾರ್ಯಗಳಿಗೆ ತಕ್ಷಣವೇ ಬಳಸಿ. ಅನುದಾನಕ್ಕಾಗಿ ಕಾಯುವ ನೆಪವೊಡ್ಡಿ ಪರಿಹಾರ ಕಾರ್ಯ ವಿಳಂಬ ಮಾಡಬೇಡಿ ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.








