ಮುಂಬೈ, ಮೇ 26 : ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದ ನಾರಾಯಣ್ ರಾಣೆ ಅವರು ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕು ಎಂದು ರಾಜ್ಯಪಾಲ ಬಿ. ಎಸ್. ಕೋಶಿಯಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಉದ್ದವ್ ಠಾಕ್ರೆ ನೇತೃತ್ವದ ಶಿವಸೇನೆ ಸರ್ಕಾರ ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಸೋಂಕು ನಿಭಾಯಿಸುವಲ್ಲಿ ವಿಫಲವಾಗಿದೆ. ಈ ಅಂಶವನ್ನು ಪರಿಗಣಿಸಿ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು. ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದ ನಾರಾಯಣ್ ರಾಣೆ ಅವರು ರಾಜ್ಯಪಾಲ ಬಿ. ಎಸ್. ಕೋಶಿಯಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ನಾರಾಯಣ್ ರಾಣೆ , ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅನಾನುಭವಿಯಾಗಿದ್ದು, ಸರ್ಕಾರ ನಡೆಸುವ ಸಾಮರ್ಥ್ಯವಿಲ್ಲ. ಇವರಿಗೆ ಆಡಳಿತವನ್ನು ಸರಿಯಾಗಿ ನಿಭಾಯಿಸಲು ಸಾಧ್ಯವಿಲ್ಲ. ಆದ್ದರಿಂದ ರಾಜ್ಯಪಾಲರು ಮಧ್ಯಪ್ರವೇಶಿಸಿ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿಗಳ ಆಡಳಿತ ಹೇರಬೇಕು ಎಂದು ತಿಳಿಸಿದರು.
ಕೊರೋನಾ ಸಂಕಷ್ಟ ಪರಿಸ್ಥಿತಿಯಲ್ಲಿ ಎನ್.ಸಿ.ಪಿ, ಶಿವಸೇನೆ ಮತ್ತು ಕಾಂಗ್ರೆಸ್ ನ ಮಹಾ ವಿಕಾಸ್ ಅಘಾಡಿ ಸರ್ಕಾರ ಆಡಳಿತಾತ್ಮಕ ವ್ಯವಹಾರಗಳಲ್ಲಿ ಗೊಂದಲ ಸೃಷ್ಟಿಸುತ್ತಿದೆ.
ರಾಜ್ಯದ ಸ್ಥಳೀಯ ಮತ್ತು ಸರ್ಕಾರಿ ಸಂಸ್ಥೆಗಳು ನಡೆಸುತ್ತಿರುವ ಆಸ್ಪತ್ರೆಗಳ ಸ್ಥಿತಿ ಕರುಣಾಜನಕವಾಗಿದ್ದು, ಇವುಗಳ ಉಸ್ತುವಾರಿಯನ್ನು ಮಿಲಿಟರಿ ವಹಿಸಿಕೊಳ್ಳಬೇಕು. ಆರೋಗ್ಯ ರಕ್ಷಣೆಯ ಪರಿಸ್ಥಿತಿಯನ್ನು ಸುಧಾರಣೆ ಮಾಡಲೂ ಸಹಾಯ ಮಾಡಬೇಕು ಎಂದು ಹೇಳಿದರು. ಇಲ್ಲಿಯವರೆಗೆ ಮಹಾರಾಷ್ಟ್ರದಲ್ಲಿ 52,667 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 1,695 ಮಂದಿ ಸಾವನ್ನಪ್ಪಿದ್ದಾರೆ.