ಗುಜರಾತ್ನ ಕೆವಾಡಿಯಾದಲ್ಲಿ ಕ್ರೀಡಾ ಸಚಿವರ ರಾಷ್ಟ್ರೀಯ ಸಮ್ಮೇಳನ
ಗುಜರಾತ್ : ಯುವ ಸಬಲೀಕರಣ ಮತ್ತು ಕ್ರೀಡೆಗೆ ದೇಶದ ಜಿಡಿಪಿಯ ಒಂದರಷ್ಟು ಅನುದಾನವನ್ನು ಮೀಸಲಿಡುವಂತೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಸಲಹೆ ನೀಡಿದ್ದಾರೆ.
ಗುಜರಾತ್ ನ ಕೆವಾಡಿಯಾದಲ್ಲಿ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರುಗಳ ರಾಷ್ಟ್ರೀಯ ಸಮ್ಮೇಳನ ನಡೆಯುತ್ತಿದ್ದು ಸಚಿವ ಡಾ.ನಾರಾಯಣಗೌಡ ಪಾಲ್ಗೊಂಡಿದ್ದಾರೆ. ಈ ಸಮ್ಮೇಳನದಲ್ಲಿ ದೇಶದಲ್ಲಿ ಕ್ರೀಡೆ ಅಭಿವೃದ್ಧಿ ಹಾಗೂ ಕ್ರೀಡಾ ಚಟುವಟಿಕೆಗಳ ಉತ್ತೇಜನ ಸೇರಿದಂತೆ ಹಲವು ವಿಚಾರಗಳ ಕುರಿತು ಸಮಗ್ರವಾಗಿ ಚರ್ಚಿಸಲಾಗುತ್ತಿದೆ.

ಸಮ್ಮೇಳನದಲ್ಲಿ ಭಾಗವಹಿಸಿರುವ ಸಚಿವ ಡಾ.ನಾರಾಯಣಗೌಡ ಅವರು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸುಧಾರಣೆಗೆ ಸಂಬಂಧಿಸಿದಂತೆ ಹಲವು ವಿಚಾರಗಳ ಬಗ್ಗೆ ಪ್ರಸ್ತಾಪಿಸಿದರು. ಜೊತೆಗೆ ಯುವ ಸಬಲೀಕರಣ ಮತ್ತು ಕ್ರೀಡೆಗೆ ದೇಶದ ಜಿಡಿಪಿಯ ಒಂದರಷ್ಟು ಅನುದಾನವನ್ನು ಮೀಸಲಿಡುವಂತೆ ಸಚಿವರು ಸಲಹೆ ನೀಡಿದರು.
ಇದರ ಜೊತೆಗೆ ರಾಜ್ಯದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಕೈಗೊಂಡಿರುವ ಹಲವು ಯೋಜನೆಗಳ ಬಗ್ಗೆಯೂ ಕ್ರೀಡಾ ಸಚಿವರುಗಳ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಸ್ತಾಪಿಸಿದರು. ರಾಜ್ಯದಲ್ಲಿ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಕ್ರೀಡಾಕೂಟವನ್ನು ಯಶಸ್ವಿಯಾಗಿ ನೆರವೇರಿಸಿದ್ದು, ಇದಕ್ಕೆ ರಾಜ್ಯ ಸರ್ಕಾರದಿಂದ ಕೈಗೊಂಡಿದ್ದ ಕ್ರಮಗಳ ಬಗ್ಗೆ ವಿವರಿಸಿದರು. ಇದಲ್ಲದೇ, ಅಮೃತ ಕ್ರೀಡಾ ದತ್ತು ಯೋಜನೆ, ಕ್ರೀಡಾ ಅಂಕಣ ಯೋಜನೆ ಸೇತಿದಂತೆ ಕ್ರೀಡೆ ಹಾಗೂ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸಲು ರೂಪಿಸಿರುವ ಯೋಜನೆಗಳ ಬಗ್ಗೆ ರಾಷ್ಟ್ರೀಯ ಸಮ್ಮೇಳನದಲ್ಲಿ ಸಚಿವ ಡಾ.ನಾರಾಯಣಗೌಡ ಅವರು ಮಾಹಿತಿ ನೀಡಿದರು.








