MODI | ʼಆಪರೇಷನ್ ಕಮಲವನ್ನೇ ರಾಷ್ಟ್ರೀಕರಣʼ | ಕಿರಾತಕ ರಾಜಕಾಣಕ್ಕೆ ಮೋದಿ ಮೌನ ಸಮ್ಮತಿ
ಬೆಂಗಳೂರು : ʼಆಪರೇಷನ್ ಕಮಲವನ್ನೇ ರಾಷ್ಟ್ರೀಕರಣʼ ಮಾಡಿದ ಕಿರಾತಕ ರಾಜಕಾರಣಕ್ಕೆ ಮೌನಸಮ್ಮತಿ ತೋರಿದವರು ಮೋದಿ ಅವರಲ್ಲವೇ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ “ಕುಟುಂಬ ಆಧರಿತ ಪಕ್ಷಗಳು ದೇಶಕ್ಕೆ ಮತ್ತು ಯುವಜನರ ಪಾಲಿಗೆ ದೊಡ್ಡ ಶತ್ರು. ಇದು ರಾಜಕಾರಣದ ದೊಡ್ಡ ಸಮಸ್ಯೆಯೂ ಹೌದು” ಎಂಬ ಹೇಳಿಕೆಗೆ ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ..
ಜಾತಿ, ಧರ್ಮ, ಸಂಸ್ಕೃತಿ, ಭಾಷೆ, ಆಹಾರ, ವ್ಯಾಪಾರ ಇತ್ಯಾದಿಗಳ ಮೂಲಕ ವಿವಿಧತೆಯಲ್ಲಿ ಏಕತೆ ಸಾಧಿಸಿದ್ದ ಭಾರತದ ಭಾವೈಕ್ಯತೆಯ ಬುಡಕ್ಕೆ ಕೊಡಲಿ ಹಾಕಿದವರು ಯಾರು? ಪ್ರಜಾಸತ್ತೆಯ ಅಖಂಡ ರಕ್ಷಕನಾದ ಸಂವಿಧಾನಕ್ಕೇ ಅಪಚಾರವೆಸಗಿ ʼಆಪರೇಷನ್ ಕಮಲʼವೆಂಬ ಅನೈತಿಕ ರಾಜಕಾರಣ ಆರಂಭ ಮಾಡಿದ್ದು ಯಾರು?
ಕರ್ನಾಟಕದಲ್ಲಿ ಎರಡು ಸಲ ಬಿಜೆಪಿ ಸರಕಾರ ಬಂದಿದ್ದು ಹೇಗೆ? ರಾಜಮಾರ್ಗದಲ್ಲಿ ಬಂತಾ? ಇಲ್ಲ, ಶಾಸಕರನ್ನು ಸಂತೆಯಲ್ಲಿ ರಾಸುಗಳಂತೆ ನಿರ್ಲಜ್ಜವಾಗಿ ಖರೀದಿಸಿದ್ದರಿಂದಲೇ ಬಂದ ʼಅಕ್ರಮ ಸರಕಾರʼವಿದು!! ಪ್ರಧಾನಿಯವರು ಇದನ್ನು ನಿರಾಕರಿಸುತ್ತಾರಾ ಎಂದು ಕುಟುಕಿದ್ದಾರೆ.
https://twitter.com/hd_kumaraswamy/status/1530075634202214400?s=20&t=zwXei8vfQY13grmPkr5XdQ
ಮೋದಿ ಅವರು ಈ ನೀತಿಹೀನ ಸರಕಾರಕ್ಕೆ ಅಧಿಕೃತ ಮುದ್ರೆ ಒತ್ತಿದ್ದು ಸುಳ್ಳಾ? ಕೋಟಿ ಕೋಟಿ ಲೂಟಿ ಹೊಡೆದು ಅಕ್ಕಪಕ್ಕದ ಪಕ್ಷಗಳ ಶಾಸಕರನ್ನು ಎಗರಿಸಿಕೊಂಡು ಹೋಗಿದ್ದು ದೇಶಕ್ಕೆ ಒಳ್ಳೆಯದಾ? ಯುವಜನರಿಗೆ ದಾರಿದೀಪವಾ? ಈ ಬಗ್ಗೆ ಮೋದಿ ಅವರ ಮನ್ ಕೀ ಬಾತ್ ಮೌನವಾಗಿದೆ! ಏಕೆ?
ʼಆಪರೇಷನ್ ಕಮಲವನ್ನೇ ರಾಷ್ಟ್ರೀಕರಣʼ ಮಾಡಿದ ಕಿರಾತಕ ರಾಜಕಾರಣಕ್ಕೆ ಮೌನಸಮ್ಮತಿ ತೋರಿದವರು ಮೋದಿ ಅವರಲ್ಲವೇ? ಜನಾದೇಶದಂತೆ ರಚನೆಯಾಗಿದ್ದ ಮಧ್ಯಪ್ರದೇಶದ ಸರಕಾರವನ್ನು ಕೆಡವಿದ್ದು ಇವರ ಪಕ್ಷವೇ ಅಲ್ಲವೆ ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.








