ಮಾರ್ಚ 24 ರಂದು ನೂತನ ಶಾಸಕರ ಸಭೆ
ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಗೆದ್ದಿದ್ದು, ಮಾರ್ಚ್ 24 ರಂದು ಹೊಸದಾಗಿ ಚುನಾಯಿತರಾದ ಶಾಸಕರು ಸಭೆ ಸೇರಲಿದ್ದಾರೆ.
ಈ ಸಭೆ ಲಖನೌನಲ್ಲಿ ನಡೆಯಲಿದ್ದು, ಶಾಸಕಾಂಗ ಪಕ್ಷದ ಸಭೆಯಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ತಮ್ಮ ನಾಯಕ ಎಂದು ಘೋಷಣೆ ಮಾಡಲಿದ್ದಾರೆ. ಬಳಿಕ ಅವರು ರಾಜಭವನಕ್ಕೆ ಭೇಟಿ ನೀಡಿ ಸರ್ಕಾರ ರಚನೆಗೆ ಅವಕಾಶ ಕೇಳಲಿದ್ದಾರೆ.
ಈ ಮೂಲಕ ಅವರು ಸತತ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಉಪಾಧ್ಯಕ್ಷ ರಘುವರ್ ದಾಸ್ 24ರಂದು ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ವೀಕ್ಷಕರಾಗಿ ಪಾಲ್ಗೊಳ್ಳಲಿದ್ದಾರೆ.
ಪಕ್ಷದ ಮೂಲಗಳ ಪ್ರಕಾರ, ಯೋಗಿ ಆದಿತ್ಯನಾಥ್ ಅವರು ಶಾಸಕಾಂಗ ಪಕ್ಷದ ನಾಯಕರಾಗಿ ಔಪಚಾರಿಕವಾಗಿ ಆಯ್ಕೆಯಾದ ನಂತರ, ರಾಜಭವನಕ್ಕೆ ತೆರಳಿ ಔಪಚಾರಿಕವಾಗಿ ಸರ್ಕಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ. ನಂತರ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಯೋಗಿ ಆದಿತ್ಯನಾಥರಿಗೆ ಸರ್ಕಾರ ರಚಿಸಲು ಆಹ್ವಾನ ನೀಡಲಿದ್ದಾರೆ.
ಮಾರ್ಚ್ 25 ರಂದು ಇಕಾನಾ ಸ್ಟೇಡಿಯಂನಲ್ಲಿ ಯೋಗಿ ಆದಿತ್ಯನಾಥ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಉನ್ನತ ನಾಯಕರು ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.