ಬೆಂಗಳೂರು: ರಾಜ್ಯದಲ್ಲಿನ ಯಾವುದೇ ಸಮುದಾಯಕ್ಕೂ ಅನ್ಯಾಯವಾಗಬಾರದು ಎಂಬುವುದು ನಮ್ಮ ಸರ್ಕಾರದ ಉದ್ಧೇಶ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಪಂಚಮಸಾಲಿ ಲಿಂಗಾಯತರ ಮೀಸಲಾತಿ ವಿಚಾರವಾಗಿ ಸಮುದಾಯದ ನಾಯಕರುಗಳ ಜೊತೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಸಭೆಯ ನಂತರ ಮಾತನಾಡಿದ ಅವರು, ಕಾಲಮಿತಿಯಲ್ಲಿ ಮೀಸಲಾತಿ ಬೇಕೆಂದರೆ ಅದು ಸಾಧ್ಯವಾಗುವುದಿಲ್ಲ. ಈ ಕುರಿತು ಈಗಾಗಲೇ ಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ. ಬಿಜೆಪಿ ಸರ್ಕಾರ ತರಾತುರಿಯಲ್ಲಿ ಬೇರೆ ಸಮಾಜಗಳಿಗೆ ನೋವಾಗುವಂತೆ ತೀರ್ಮಾನ ಮಾಡಿತ್ತು. ನಂತರ ಆ ಸರ್ಕಾರವೇ ನಾವು ಯಾವುದೇ ಮೀಸಲಾತಿ ಜಾರಿ ಮಾಡುವುದಿಲ್ಲ ಎಂದು ನ್ಯಾಯಾಲಯದಲ್ಲಿ ಅಫಿಡವಿಟ್ ಸಲ್ಲಿಸಿತ್ತು. ಈ ವಿಚಾರ ನ್ಯಾಯಾಲಯದಲ್ಲಿರುವಾಗ ನಾವು ಹಸ್ತಕ್ಷೇಪ ಮಾಡಲು ಬರುವುದಿಲ್ಲ ಎಂದಿದ್ದಾರೆ.
ಸದ್ಯ ಚುನಾವಣಾ ನೀತಿ ಸಂಹಿತೆ ಇದೆ. ಹೀಗಾಗಿ ಮುಂದಿನ ದಿನಗಳಲ್ಲಿ ಸಭೆ ಕರೆದು ತೀರ್ಮಾನಿಸಲಾಗುವುದು. ಮುಂದಿನ ದಿನಗಳಲ್ಲಿ ನಾವು ಅವರ ವಿಚಾರವನ್ನು ಪರಿಗಣಿಸುತ್ತೇವೆ ಎಂದಿದ್ದಾರೆ.