ಲಖನೌ : ಆಗಸ್ಟ್ 5 ರಂದು ರಾಮಮಂದಿರ ನಿರ್ಮಾಣಕ್ಕೆ ಅಧಿಕೃತ ಚಾಲನೆ ಸಿಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಭೂಮಿ ಪೂಜೆ ನೆರವೇರಿಸಲಿದ್ದಾರೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಕೇಂದ್ರದ ಮಾಜಿ ಸಚಿವ ಉಮಾ ಭಾರತಿ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಸೇರಿದಂತೆ ಹಲವರಿಗೆ ಭೂಮಿ ಪೂಜೆಗೆ ಆಹ್ವಾನ ನೀಡಲಾಗಿದೆ. ಆದ್ರೆ ರಾಮಮಂದಿರ ನಿರ್ಮಾಣದ ಕನಸು ಕಂಡು ಹೋರಾಡಿದ, ಬಾಬ್ರಿ ಮಸೀದಿ ದ್ವಂಸ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿರುವ ಎಲ್ ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಇಬ್ಬರಿಗೂ ಈ ಕಾರ್ಯಕ್ರಮಕ್ಕೆ ಭಾಗಿಯಾಗಲು ಆಹ್ವಾನ ಇಲ್ಲ ಎಂದು ತಿಳಿದು ಬಂದಿದೆ.
ಕಾರಣ ಏನಿರಬಹುದು..?
ದೇಶದಲ್ಲಿ ಕೊರೊನಾ ವೈರಸ್ ಆರ್ಭಟ ಜೋರಾಗಿದೆ. ಈ ಹಿನ್ನೆಲೆ 92 ವರ್ಷದ ಎಲ್ ಕೆ ಅಡ್ವಾಣಿ ಹಾಗೂ 86 ವರ್ಷದ ಮುರಳಿ ಮನೋಹರ್ ಜೋಶಿ ಇಬ್ಬರು ರಾಮ ಮಂದಿರ ಭೂಮಿ ಪೂಜೆ ಸಮಾರಂಭದಲ್ಲಿ ಭಾಗಿಯಾಗುತ್ತಿಲ್ಲ ಎಂದು ತಿಳಿದು ಬಂದಿದೆ. ಆದ್ರೆ ಈ ಇಬ್ಬರು ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮವನ್ನು ವೀಕ್ಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.