ಮಂಗಳವಾರ ಅಲ್ಲ, ಇಂದು ಸಂಜೆ ಅಥವಾ ನಾಳೆ ಬೆಂಗಳೂರು ಲಾಕ್..!?
ಬೆಂಗಳೂರು : ನಗರದಲ್ಲಿ ಕೊರೊನಾ ಅಬ್ಬರ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಹುಚ್ಚು ಕುದುರೆಯಂತೆ ನಗರದಲ್ಲಿ ಓಡುತ್ತಿರುವ ಕೊರೊನಾಗೆ ಕಡಿವಾಣ ಹಾಕಲು ಸರ್ಕಾರ ಸರ್ಕಸ್ ನಡೆಸುತ್ತಿದೆ. ಈ ಮಧ್ಯೆ ನಿನ್ನೆ ಬೆಂಗಳೂರಲ್ಲಿ ಕೊರೊನಾ ಸ್ಫೋಟವಾಗಿದ್ದು, ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ನಗರದಲ್ಲಿ ಕೊರೊನಾ ಪರಿಸ್ಥಿತಿ ಕೈ ಮೀರಿದೆ ಎಂದು ಒಪ್ಪಿಕೊಂಡಿದ್ದಾರೆ. ಅಲ್ಲದೆ ನಗರದಲ್ಲಿ ಬಿಗಿ ಕ್ರಮ ಕೈಗೊಳ್ಳದಿದ್ದರೇ ಸಮಸ್ಯೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಇನ್ನು ಮಂಗಳವಾರ ಬೆಂಗಳೂರು ಲಾಕ್ ಆಗುವ ಬಗ್ಗೆ ಮಾಧ್ಯಮಗಳು ವರದಿ ಮಾಡುತ್ತಿವೆ. ಆದ್ರೆ ಸುಧಾಕರ್ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಬೆಂಗಳೂರು ನಗರದಲ್ಲಿ ವಿಶೇಷ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ. ಇಲ್ಲದೇ ಹೋದರೆ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಲಿದೆ. ನಾಳೆಯ ಸಭೆಯಲ್ಲಿ ಚರ್ಚೆ ಮಾಡಿ ಕಠಿಣ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ಅಂದ್ರೆ ನಾಳೆ ಸೋಮವಾರ ಬೆಂಗಳೂರಲ್ಲಿ ಕಠಿಣ ನಿಯಮಗಳು ಜಾರಿ ಆಗುವುದು ಪಕ್ಕಾ ಎಂದಾಯ್ತು. ತಜ್ಞರ ಪ್ರಕಾರ ಬೆಂಗಳೂರಲ್ಲಿ ಕೊರೊನಾಗೆ ಬ್ರೇಕ್ ಹಾಕಲು ಚೈನ್ ಲಿಂಕ್ ಕಟ್ ಮಾಡೋದು ಅನಿವಾರ್ಯವಾಗಿದೆ. ಹೀಗಾಗಿ ಕನಿಷ್ಠ ಅಂದರೂ 1 ವಾರ ಲಾಕ್ ಡೌನ್ ವಿಧಿಸಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ನಾಳೆಯೇ ಕಠಿಣ ನಿಯಮಗಳು ಜಾರಿಯಾಗುವ ಎಲ್ಲಾ ಸಾಧ್ಯತೆಗಳಿವೆ.