ಹುಬ್ಬಳ್ಳಿ: ನಗರದ ಇಎಸ್ ಐ ಆಸ್ಪತ್ರೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದ ಸಿಬ್ಬಂದಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಹುಬ್ಬಳ್ಳಿ-ಕಾರವಾರ ರಸ್ತೆಯಲ್ಲಿರುವ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಯಲ್ಲಿ ಕಳೆದ ಮೂರು ವರ್ಷಗಳಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿತ್ತು. ಆದರೆ, ಈ ಬಾರಿ ಅವಕಾಶ ನೀಡಿರಲಿಲ್ಲ. ಆಸ್ಪತ್ರೆ ಆವರಣದಲ್ಲಿದ್ದ ಶಾಶ್ವತ ಮೂರ್ತಿಗೆ ಪೂಜೆ ನಡೆಸಲಾಗುತ್ತಿತ್ತು.
ಇದಕ್ಕೆ ಆಸ್ಪತ್ರೆ ಮುಖ್ಯಸ್ಥ ಯೂನಿಸ್ ನಜ್ಮಿ ಕಾರಣ, ಅವರು ಮುಸ್ಲಿಂ ಎನ್ನುವ ಕಾರಣಕ್ಕೆ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಿಲ್ಲ ಎಂಬ ಆರೋಪ ಸಹ ಕೇಳಿ ಬಂದಿತ್ತು. ಈ ಸುದ್ದಿ ತಿಳಿಯುತ್ತಿದ್ದಂತೆ, ಹಿಂದೂಪರ ಸಂಘಟನೆಗಳು, ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಆಸ್ಪತ್ರೆಗೆ ನುಗ್ಗಿ ತಾವೇ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ ಪೂಜೆ ಮಾಡಿದ್ದರು.
ಆದರೆ, ಈಗ ಆಸ್ಪತ್ರೆ ಅಧೀಕ್ಷಕ ನಜ್ಮಿ ಹಿಂದೂಪರ ಸಂಘಟನೆಗಳ ಜೊತೆ ಸೇರಿ ಹಬ್ಬ ಮಾಡಿರುವ ಸಿಬ್ಬಂದಿ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ. ನಮ್ಮ ಮೇಲಿನ ಅಧಿಕಾರಿಗಳ ಗಮನಕ್ಕೆ ತಂದೇ ನೋಟಿಸ್ ನೀಡಲಾಗಿದೆ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ. ಈ ನೋಟಿಸ್ ಗೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಬೇಸರ ವ್ಯಕ್ತಪಡಿಸಿದ್ದಾರೆ.








