ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕ ತಂದಿದೆ ಎಂದು ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸೋಂಕು ಪತ್ತೆಯಾದ ಶೇ.90 ಕ್ಕೂ ಹೆಚ್ಚು ಮಂದಿಗೆ ರೋಗದ ಲಕ್ಷಣಗಳು ಕಾಣಿಸುತ್ತಿಲ್ಲ. ತೀವ್ರತರವಾದ ದುಷ್ಪರಿಣಾಮ ಬೀರದೇ ಇರುವುದು ಸಮಾಧಾನಕರ ವಿಚಾರ. ಆದ್ರೆ ಹಿರಿಯರು ಹಾಗೂ ಕಾಯಿಲೆಗಳು ಇರುವವರನ್ನ ಜೋಪಾನವಾಗಿ ನೋಡಿಕೊಳ್ಳಬೇಕು. ಅವರು ಮುಂಜಾಗ್ರತಾ ಕ್ರಮಗಳನ್ನ ವಹಿಸಿದರೆ ಕೊರೊನಾದಿಂದ ಪಾರಾಗಬಹುದು ಎಂದು ತಿಳಿಸಿದರು.
ಇನ್ನು ಶೀಘ್ರದಲ್ಲೇ ಸರ್ಕಾರದಿಂದ ಹೊಸ ಮಾರ್ಗಸೂಚಿಗಳನ್ನ ಕೊಡುತ್ತಿದ್ದೇವೆ. ರಾಜ್ಯದಲ್ಲಿ ದೊಡ್ಡಮಟ್ಟದಲ್ಲಿ ಕೋವಿಡ್ ಕೇರ್ ಸೆಂಟರ್ ಮಾಡಲಾಗುತ್ತಿದೆ ಎಂದು ತಿಳಿಸಿದ ಸಚಿವರು, ಕೊರೊನಾ ಪಾಸಿಟಿವ್ ಆಗಿದ್ದು ರೋಗದ ಲಕ್ಷಣ ಇಲ್ಲದವರಿಗೆ ಚಿಕಿತ್ಸೆ ನೀಡಲಾಗುತ್ತದೆ. ಲಕ್ಷಣ ಇರುವವರಿಗೆ ಸಾಮಾನ್ಯ ಆಸ್ಪತ್ರೆಗಳಲ್ಲೇ ಚಿಕಿತ್ಸೆ ಕೊಡಿಸಲಾಗುತ್ತದೆ ಅದಕ್ಕೂ ಸಹ ಮಾರ್ಗಸೂಚಿ ಸಿದ್ಧಪಡಿಸಿದ್ದೇವೆ ಎಂದು ಮಾಹಿತಿ ನೀಡಿದರು.