ನವದೆಹಲಿ: ಎರಡು ವಾರದ ಹಿಂದಷ್ಟೇ ಬಿಹಾರ ವಿಧಾನಸಭೆ ಚುನಾವಣೆ ಗೆದ್ದು ಬಿಜೆಪಿ ಬೀಗುತ್ತಿದ್ದರೆ, ಸದ್ಯದಲ್ಲಿಯೇ ಪಶ್ಚಿಮ ಬಂಗಾಳ, ತಮಿಳುನಾಡು ಸೇರಿದಂತೆ ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆಗಳೂ ಬರುತ್ತಿವೆ. ಬಿಹಾರ ನಂತರ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ದೇಶದ ಎಲ್ಲಾ ರಾಜಕೀಯ ಪಕ್ಷಗಳು ಚುನಾವಣೆಗೆ ಸಜ್ಜಾಗಲೇಬೇಕಿದೆ.
ಈ ಹಿನ್ನೆಲೆಯಲ್ಲಿ ಒಂದು ರಾಷ್ಟ್ರ, ಒಂದೇ ಬಾರಿ ಚುನಾವಣೆ ಯಾಕಾಗಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಸ್ತಾಪಿಸಿದ್ದು, ಪರ-ವಿರುದ್ಧ ಚರ್ಚೆಗೆ ಪುಷ್ಠಿ ನೀಡಿದೆ.

ದೇಶದಲ್ಲಿ ಪ್ರತಿವರ್ಷ ಯಾವುದಾದರೊಂದು ರಾಜ್ಯದ ವಿಧಾನಸಭೆ, ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯಿತಿ…ಹೀಗೆ ಚುನಾವಣೆಗಳು ನಡೆಯುತ್ತಲೇ ಇರುತ್ತದೆ. ಚುನಾವಣೆಗೆಂದೇ ಚುನಾವಣಾ ಆಯೋಗವೂ ಪ್ರತಿ ವರ್ಷ ನೂರಾರು ಕೋಟಿ ಹಣವನ್ನು ಖರ್ಚು ಮಾಡುತ್ತದೆ.
ಹೀಗಾಗಿ ಚುನಾವಣೆಗೆ ಖರ್ಚಾಗುವ ಹಣವನ್ನು ಉಳಿಸುವ ಸಲುವಾಗಿ ಒಂದು ದೇಶ, ಒಂದು ಚುನಾವಣೆ ಎಂಬ ವಾದ ಕಳೆದ ಹಲವು ವರ್ಷಗಳಿಂದ ಚಾಲ್ತಿಯಲ್ಲಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಸಹ ಆಗಾಗ ಈ ಬಗ್ಗೆ ಉಲ್ಲೇಖಿಸುತ್ತಲೇ ಬಂದಿದ್ದಾರೆ. ಈಗ ಮತ್ತೆ ದೇಶಾದ್ಯಂತ ಪ್ರತಿ ತಿಂಗಳು ಚುನಾವಣೆಗಳು ನಡೆಯುತ್ತಿರುವುದರಿಂದ ಸಮಯ ಮತ್ತು ಹಣ ಎರಡು ವ್ಯರ್ಥವಾಗಿ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗುತ್ತಿದೆ. ಹಾಗಾಗಿ ಒಂದು ರಾಷ್ಟ್ರ, ಒಂದು ಚುನಾವಣೆ ಭಾರತಕ್ಕೆ ಅಗತ್ಯತೆ ಇದೆ ಎಂದು ಮನದ ಇಂಗಿತವನ್ನು ಪ್ರಧಾನಿ ನರೇಂದ್ರ ಮೋದಿ ಹೊರಹಾಕಿದ್ದಾರೆ.

80ನೇ ಅಖಿಲ ಭಾರತ ಅಧ್ಯಕ್ಷರ ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಕೆಲವು ತಿಂಗಳಿಗೊಮ್ಮೆ ವಿವಿಧ ಸ್ಥಳಗಳಲ್ಲಿ ವಿವಿಧ ಚುನಾವಣೆಗಳು ನಡೆಯುತ್ತಲೇ ಇರುತ್ತವೆ. ಇದು ಅಭಿವೃದ್ಧಿ ಕಾರ್ಯಗಳ ಮೇಲೆ ಪರಿಣಾಮ ಬೀರುತ್ತಿದೆ ಎಂದು ಎಲ್ಲರಿಗೂ ತಿಳಿದಿದೆ. ಆದ್ದರಿಂದ ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ಆಳವಾದ ಅಧ್ಯಯನ ಮತ್ತು ಚರ್ಚೆ ನಡೆಸುವುದು ಅತ್ಯಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.
ಲೋಕಸಭೆ, ವಿಧಾನಸಭೆ ಮತ್ತು ಪಂಚಾಯತ್ ಚುನಾವಣೆಗಳಿಗೆ ಒಂದೇ ಮತದಾರರ ಪಟ್ಟಿ ಮಾಡುವುದು ಉತ್ತಮ, ಪ್ರತ್ಯೇಕ ಮತದಾರರ ಪಟ್ಟಿಗಳಿಂದ ಸಂಪನ್ಮೂಲಗಳು ವ್ಯರ್ಥವಾಗುತ್ತಿದೆ ಎಂದು ಸಲಹೆ ನೀಡಿದ್ದಾರೆ.
ಆದರೆ, ಬಿಜೆಪಿ ಮತ್ತು ಪ್ರಧಾನಿ ಮೋದಿ ಅವರ ಈ ಚಿಂತನೆಯನ್ನು ಪ್ರತಿಪಕ್ಷಗಳು ಕಟುವಾಗಿ ಟೀಕಿಸಿವೆ. ಇದು ಭಾರತದ ಒಕ್ಕೂಟ ವ್ಯವಸ್ಥೆಗೆ ಮಾರಕ, ಇದು ಪ್ರಜಾಪ್ರಭುತ್ವ ವಿರೋಧಿ ಚಿಂತನೆ. ಸಂವಿಧಾನದ ವಿರುದ್ಧ ಮತ್ತು ಅಪ್ರಾಯೋಗಿಕ. ಈ ಯೋಜನೆ ಮೂಲಕ ಸಂಸತ್ತಿನ ಪ್ರಜಾಪ್ರಭುತ್ವವನ್ನು ಬದಲಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಸಿಪಿಎಂ ಆರೋಪಿಸಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








