ಬೆಂಗಳೂರು: ಕರ್ನಾಟಕ್ಕೆ ಅನ್ಯಾಯವಾಗಿದೆ. ದೇಶದ ಜನರ ಗಮನ ಸಳೆಯುವುದಕ್ಕಾಗಿ ಪ್ರತಿಭಟನೆ ನಡೆಸಿದ್ದೇವೆ. ಈ ಚಳವಳಿ ರಾಜಕೀಯೇತರ ಚಳವಳಿ. ಕನ್ನಡಿಗರ ಹಿತ ಕಾಯುವುದಕ್ಕಾಗಿ ಈ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.
ದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಕನ್ನಡಿಗರಿಗೆ ಅನ್ಯಾಯ ಮಾಡುತ್ತಿದೆ. ಈ ಅನ್ಯಾಯದ ವಿರುದ್ಧ ನಾವು ಪ್ರತಿಭಟನೆ ಮಾಡುತ್ತಿದ್ದೇವೆ. ಇದು ಯಾವುದೇ ಪಕ್ಷದ ವಿರುದ್ಧ ಅಲ್ಲ. ರಾಜ್ಯಕ್ಕೆ ಹಾಗೂ ದೇಶವಾಸಿಗಳಿಗೆ ಆಗುತ್ತಿರುವ ಅನ್ಯಾಯ. ಕೇಂದ್ರ ಸರ್ಕಾರದ ಗಮನಕ್ಕೆ ತರುವುದಕ್ಕಾಗಿ ಈ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಮಾತನಾಡಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಮಾತು ತಪ್ಪಿದ್ದಾರೆ. 26 ಜನ ಬಿಜೆಪಿ ಸಂಸದರು ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ ಮೌನ ವಹಿಸಿದ್ದಾರೆ. ಇವರಿಗೆ ರಾಜ್ಯದ ಹಿತ ಇಲ್ಲ. ಸ್ವಾರ್ಥ ಮಾತ್ರ ಇದೆ. ರಾಜ್ಯಕ್ಕೆ ಇಷ್ಟೆಲ್ಲ ಅವಮಾನವಾಗುತ್ತಿದ್ದರೂ ನಾಚಿಕೆ ಬಿಟ್ಟು ಪ್ರತಿಭಟನೆ ಮಾಡುತ್ತಿದ್ದಾರೆ. ಕನ್ನಡಿಗರಿಗೆ ಎಷ್ಟೇ ಮೋಸವಾಗುತ್ತಿದೆ ಎಂದು ನಾವು ತಿಳಿಸಿ ಹೇಳಿದ್ದೇವು. ಆದರೆ, ಅದು ಅವರಿಗೆ ಕೇಳಿಸಿಲ್ಲ. ಹೀಗಾಗಿ ಕೂಗಿ ಹೇಳುವುದಕ್ಕಾಗಿ ಈ ಪ್ರತಿಭಟನೆ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಸಚಿವರು, ಶಾಸಕರು, ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.