ಜೈಪುರ, ಜುಲೈ 13: ರಾಜಸ್ತಾನದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ವಿರುದ್ಧ ಬಹಿರಂಗವಾಗಿ ಬಂಡಾಯ ಸಾರಿರುವ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್, ಸರ್ಕಾರ ಅಲ್ಪಮತಕ್ಕೆ ಕುಸಿದಿದೆ ಎಂದು ಘೋಷಿಸಿದ ಕೆಲವೇ ಸಮಯದಲ್ಲಿ ಕಾಂಗ್ರೆಸ್ ನಾಯಕ ಅವಿನಾಶ್ ಪಾಂಡೆ ಪ್ರತಿಕ್ರಿಯೆ ನೀಡಿದ್ದಾರೆ.
ಇಂದು ಬೆಳಗ್ಗೆ ಮುಖ್ಯಮಂತ್ರಿಗಳ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವಿನಾಶ್ ಪಾಂಡೆ ಈಗಾಗಲೇ ಮುಖ್ಯಮಂತ್ರಿಗಳಿಗೆ ಬೆಂಬಲ ನೀಡುವುದಾಗಿ 109 ಶಾಸಕರು ಸಹಿ ಹಾಕಿದ್ದಾರೆ ಎಂದು
ತಿಳಿಸಿದ್ದಾರೆ. ಅಷ್ಟೇ ಅಲ್ಲ ಇನ್ನೂ ಕೆಲವು ಶಾಸಕರು ಗೆಹ್ಲೊಟ್ ಜೊತೆ ಸಂಪರ್ಕದಲ್ಲಿದ್ದು ಅವರು ಕೂಡ ಪತ್ರಕ್ಕೆ ಸಹಿ ಹಾಕಲಿದ್ದಾರೆ ಎಂದು ರಾಜಸ್ತಾನದ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿರುವ ಅವಿನಾಶ್ ಪಾಂಡೆ ಹೇಳಿದ್ದಾರೆ.
ಇಂದು ಬೆಳಗ್ಗೆ 10.30ಕ್ಕೆ ಆರಂಭವಾಗಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕಡ್ಡಾಯವಾಗಿ ಹಾಜರಾಗುವಂತೆ ಪಕ್ಷದ ಎಲ್ಲಾ ಶಾಸಕರಿಗೆ ವಿಪ್ ಜಾರಿ ಮಾಡಲಾಗಿದೆ ಎಂದು ತಿಳಿಸಿದ ಅವರು ವಿಪ್ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ದೆಹಲಿಯಿಂದ ನಿನ್ನೆ ಜೈಪುರ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದ ಸಂದರ್ಭದಲ್ಲಿ ಅವಿನಾಶ್ ಪಾಂಡೆ ಅವರನ್ನು
ಸುದ್ದಿಗಾರರು ಸಚಿನ್ ಪೈಲಟ್ ಅವರು ದೆಹಲಿಗೆ ಹೋಗಿದ್ದಾರೆ, ನೀವು ಭೇಟಿ ಮಾಡಿದ್ದೀರಾ ಎಂದು ಪ್ರಶ್ನಿಸಿದ್ದು, ಅವರು ದೆಹಲಿಯಲ್ಲಿದ್ದಾರೆಯೇ? ನನಗೆ ಗೊತ್ತಿರಲಿಲ್ಲ. ದೆಹಲಿಯಲ್ಲಿ ನಾನು ಅವರನ್ನು ಭೇಟಿ ಮಾಡಲಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಇಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ನಿವಾಸದಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಭಾಗವಹಿಸುವುದಿಲ್ಲ ಎಂದು ಹೇಳಲಾಗುತ್ತಿದೆ.