ಬೆಂಗಳೂರು : ನಿರ್ಲಜ್ಜ, ಭ್ರಷ್ಟ ಬಿಜೆಪಿ ಸರ್ಕಾರ ತೊಲಗಿದಾಗಲೆ ಜನರಿಗೆ ನೆಮ್ಮದಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. BJP saaksha tv
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯ ಪಾಲನೆ ಮಾಡಿದೆ. ಪಕ್ಷದಿಂದ ತಲಾ ಒಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ, ಐದು ಜನ ಹಿಂದುಳಿದ ವರ್ಗದ, ಮಹಿಳಾ ಅಭ್ಯರ್ಥಿ, ಇಬ್ಬರು ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇವೆ.
ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಸಂವಿಧಾನಕ್ಕೆ 73 ಹಾಗೂ 74 ನೇ ತಿದ್ದುಪಡಿ ಮಾಡಿ ಮೊದಲ ಬಾರಿ ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ, ಮಹಿಳೆಯರಿಗೆ ಮೀಸಲಾತಿ ಕಲ್ಪಿಸಿದರು. ಅದನ್ನು ವಿರೋಧಿಸಿದ್ದು ಬಿಜೆಪಿ ಎಂದು ಆರೋಪಿಸಿದರು.
ಬಿಜೆಪಿಯ ರಾಜ್ಯಸಭಾ ಸದಸ್ಯರಾಗಿದ್ದ ರಾಮಾ ಜೋಯಿಸ್ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ವಿರೋಧಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ಅವರ ಮನವಿಯನ್ನು ತಿರಸ್ಕರಿದ್ದರಿಂದ ಇಂದು ಮೀಸಲಾತಿ ಸೌಲಭ್ಯ ಉಳಿದಿದೆ. ಬಿಜೆಪಿಗೆ ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಐದು ವರ್ಷಗಳಿಗೊಮ್ಮೆ ಸ್ಥಳೀಯ ಸಂಸ್ಥೆಗಳಿಗೆ ಕಡ್ಡಾಯವಾಗಿ ಚುನಾವಣೆ ನಡೆಯುವಂತೆ ಕಾನೂನು ತಂದವರು ಮಾಜಿ ಪ್ರಧಾನಿ ರಾಜೀವ್ ಗಾಂಧಿ. ಬಿಜೆಪಿ ಸರ್ಕಾರ ಸೋಲಿನ ಭಯದಿಂದ ತಾಲೂಕು, ಜಿಲ್ಲಾ ಪಂಚಾಯತ್ ಚುನಾವಣೆಯನ್ನು ಮುಂದೂಡಿದೆ.
ರಾಜ್ಯ ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಿರ್ಧಾರದಿಂದಾಗಿ ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾನ ಮಾಡಲು ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರಿಗೆ ಅವಕಾಶವೇ ಇಲ್ಲದಂತಾಗಿದೆ. ಸರ್ಕಾರ ಸಂವಿಧಾನದ ನಿಯಮಗಳನ್ನು ಉಲ್ಲಂಘಿಸಿರುವುದು ಇದರಿಂದ ಸ್ಪಷ್ಟವಾಗುತ್ತದೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ, ಮಾಹಿತಿ ಹಕ್ಕು, ಆಹಾರ ಭದ್ರತಾ ಕಾಯ್ದೆ, ಶಿಕ್ಷಣ ಹಕ್ಕು ಕಾಯ್ದೆ ಜಾರಿಗೆ ತಂದದ್ದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸರ್ಕಾರ. ಇವೆಲ್ಲವನ್ನೂ ಹಾಳುಗೆಡಹುತ್ತಿರುವುದೇ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಸಾಧನೆ ಎಂದು ಆಕ್ರೋಶ ಹೊರಹಾಕಿದರು.
ಬಿಜೆಪಿ ಆಡಳಿತದಲ್ಲಿ ಬಡರೈತ ಇನ್ನಷ್ಟು ಬಡವನಾಗುತ್ತಿದ್ದಾನೆ, ಅದಾನಿ, ಅಂಬಾನಿಯಂತವರ ಆಸ್ತಿ ದುಪ್ಪಟ್ಟಾಗುತ್ತಿದೆ. ಬಡವರ ಉಚಿತ ಅಕ್ಕಿಯ ಪ್ರಮಾಣ ಕಡಿಮೆ ಮಾಡುತ್ತಾರೆ, ರೈತರ ಸಾಲ ಮನ್ನಾ ಮಾಡಲ್ಲ, ಉದ್ಯಮಿಗಳ ಸಾಲ ಮನ್ನಾ ಮಾಡಿ, ಕಾರ್ಪೊರೇಟ್ ತೆರಿಗೆ ಇಳಿಕೆ ಮಾಡ್ತಾರೆ. ಹಾಗಾದರೆ ಬಿಜೆಪಿ ಸರ್ಕಾರ ಯಾರ ಪರವಾಗಿದೆ?
2019ರ ಅತಿವೃಷ್ಟಿಗೆ ಇಲ್ಲಿಯವರೆಗೆ ಪರಿಹಾರ ನೀಡಿಲ್ಲ. ನಾನು ಬೆಳಗಾವಿಗೆ ಹೋಗಿದ್ದಾಗ ಮನೆ, ಬೆಳೆ ಕಳೆದುಕೊಂಡಿದ್ದ ನೂರಾರು ಮಹಿಳೆಯರು ಬಂದು ಸರ್ಕಾರದಿಂದ ನಯಾಪೈಸೆ ಪರಿಹಾರ ಸಿಕ್ಕಿಲ್ಲ, ದಯವಿಟ್ಟು ನೀವೇ ಏನಾದ್ರೂ ಮಾಡಬೇಕು ಎಂದು ಮನವಿ ಮಾಡಿದ್ರು. ಬಿಜೆಪಿ ಅವರಿಗೆ ಪರಿಹಾರ ಕೊಡಲು ಇನ್ನೆಷ್ಟು ವರ್ಷ ಬೇಕು?
ಕೊರೊನಾ ರೋಗಿಗಳಿಗೆ ಸರ್ಕಾರ ಆಸ್ಪತ್ರೆ, ಆಕ್ಸಿಜನ್ ವ್ಯವಸ್ಥೆಯನ್ನು ಮಾಡಿಲ್ಲ, ಸತ್ತವರಿಗೆ ಪರಿಹಾರ ನೀಡಿಲ್ಲ, ಸತ್ತವರ ಸಂಖ್ಯೆಯಲ್ಲೂ ಸುಳ್ಳು ಹೇಳಿದ್ರು, ಔಷಧಿ, ವೆಂಟಿಲೇಟರ್, ಮಾಸ್ಕ್ ಖರೀದಿಯಲ್ಲಿ ಭ್ರಷ್ಟಾಚಾರ ಎಸಗಿದ್ದರು. ಇಂತಹಾ ನಿರ್ಲಜ್ಜ, ಭ್ರಷ್ಟ ಬಿಜೆಪಿ ಸರ್ಕಾರ ತೊಲಗಿದಾಗಲೆ ಜನರಿಗೆ ನೆಮ್ಮದಿ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.