BJP ಮೇಲಿನ ಜನರ ವಿಶ್ವಾಸ ಸಾಕ್ಷಿ ಸಮೇತ ಸಾಬೀತು
ದೊಡ್ಡಬಳ್ಳಾಪುರ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿದ ಪ್ರಯುಕ್ತ ದೊಡ್ಡಬಳ್ಳಾಪುರದಲ್ಲಿ ಸಮಾವೇಶ ನಡೆಯಲಿದೆ.
ಮೂರು-ನಾಲ್ಕು ಜಿಲ್ಲೆಗಳಿಂದ ಲಕ್ಷಾಂತರ ಜನರು ಸಮಾವೇಶಕ್ಕೆ ಆಗಮಿಸುವ ನಿರೀಕ್ಷೆ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ದೊಡ್ಡಬಳ್ಳಾಪುರದ ಬಿಜೆಪಿ ಕಚೇರಿಯಲ್ಲಿ ಮುಖಂಡರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ಬಿಜೆಪಿ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷವಾಗುತ್ತಾ ಬಂದಿದೆ.
ಬಸವರಾಜ ಬೊಮ್ಮಾಯಿಯವರು ಸಿಎಂ ಆಗಿ ಅಧಿಕಾರ ಸ್ವೀಕರಿಸಿ ಜುಲೈ 28 ಕ್ಕೆ ಒಂದು ವರ್ಷವಾಗಲಿದೆ. ಈ ಪ್ರಯುಕ್ತ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಹೊರ ವಲಯದಲ್ಲಿ ಸಮಾವೇಶ ನಡೆಸಲು ಸ್ಥಳ ನಿಗದಿ ಮಾಡಲಾಗಿದೆ.
ಬಿಜೆಪಿಯು ಸರ್ವವ್ಯಾಪಿ, ಸರ್ವಸ್ಪರ್ಶಿ ಆಡಳಿತ ನೀಡುತ್ತಿದೆ ಎಂಬುದನ್ನು ಸಾಬೀತು ಮಾಡಿದೆ. ಯುವಜನರು, ಮಹಿಳೆಯರು, ರೈತರು ಸೇರಿದಂತೆ ಪ್ರತಿ ಜನವರ್ಗಕ್ಕೆ ಅನುಕೂಲ ಮಾಡಿಕೊಡಲಾಗಿದೆ.

ಎಷ್ಟೇ ಆರ್ಥಿಕ ದುಃಸ್ಥಿತಿ ಇದ್ದರೂ ಕೋವಿಡ್ ಸಾಂಕ್ರಾಮಿಕವನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಯಶಸ್ವಿಯಾಗಿ ನಿರ್ವಹಣೆ ಮಾಡಿದೆ. ಕೋವಿಡ್ನಿಂದಾದ ಸಮಸ್ಯೆಗಳನ್ನು ನಿವಾರಿಸಿ ಇಡೀ ವ್ಯವಸ್ಥೆಯನ್ನು ಪುನಶ್ಚೇತನ ಮಾಡಲಾಗುತ್ತಿದೆ.
ಪಕ್ಕದ ಶ್ರೀಲಂಕಾ ಲಾಕ್ಡೌನ್ ಬಳಿಕ ದಿವಾಳಿಯಾಗಿದೆ. ಆದರೆ ಅಮೆರಿಕ ಬಳಿಕ ಅತ್ಯಂತ ವೇಗದ ಆರ್ಥಿಕ ಪ್ರಗತಿ ಕಾಣುತ್ತಿರುವ ದೇಶಗಳಲ್ಲಿ ಭಾರತ ಒಂದಾಗಿದೆ.
ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಕಾರಣ. ಹಾಗೆಯೇ ರಾಜ್ಯದ ಆರ್ಥಿಕ ಪ್ರಗತಿಗೆ ಹಿಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮರ್ಥ ಆಡಳಿತ ಕಾರಣ ಎಂದರು.
ಈ ಭಾಗದಲ್ಲಿ ಬಿಜೆಪಿ ಶಾಸಕರು ಅತಿ ಕಡಿಮೆ ಸಂಖ್ಯೆಯಲ್ಲಿದ್ದಾರೆ. ಆದರೂ ಜನರ ಭಾವನೆಗೆ ಪೂರಕವಾಗಿ ಇಲ್ಲಿ ಸಮಾವೇಶ ನಡೆಸಲು ಅವಕಾಶ ದೊರೆತಿದೆ.
ಜನರು ಹೆಚ್ಚಿನ ಸಂಖ್ಯೆಯಲ್ಲಿ, ಹುಮ್ಮಸ್ಸಿನಲ್ಲಿ ಪಾಲ್ಗೊಂಡು ಸರ್ಕಾರದೊಂದಿಗೆ ಹಾಗೂ ಪಕ್ಷದೊಂದಿಗೆ ನಾವಿದ್ದೇವೆ ಎಂದು ತೋರಿಸಿಕೊಡಲಿದ್ದಾರೆ. ಜನರು ಬಿಜೆಪಿ ಮೇಲೆ ಹೇಗೆ ವಿಶ್ವಾಸ ಇರಿಸಿದ್ದಾರೆ ಎಂಬುದು ಸಾಕ್ಷಿ ಸಮೇತ ಸಾಬೀತಾಗಲಿದೆ ಎಂದರು.