ಕೊರೊನಾ ನಿರ್ವಹಣೆ ಕುರಿತು ಎಲ್ಲಾ ರಾಜ್ಯಗಳ ಅಧಿಕಾರಿಗಳ ಜೊತೆ ಪಿಎಂ ಸಂವಾದ Corona
ನವದೆಹಲಿ : ಭಾರತದಲ್ಲಿ ಕೊರೊನಾ ಎರಡನೇ ಅಲೆಯ ಅಬ್ಬರ ಮುಂದುವರೆದಿದ್ದು, ಹಳ್ಳಿ ಹಳ್ಳಿಗೂ ಸೋಂಕು ವಕ್ಕರಿಸಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಜನರು ಕಂಗಾಲಾಗಿದ್ದಾರೆ.
ಈ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಹಾಗೂ ಜಿಲ್ಲೆಗಳ ಅಧಿಕಾರಿಗಳ ಜೊತೆ ವರ್ಚುವಲ್ ಸಂವಾದ ನಡೆಸಲಿದ್ದಾರೆ.
ಕೋವಿಡ್ ನಿರ್ವಹಣೆ ಕುರಿತು ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯಗಳ ಹಾಗೂ ಜಿಲ್ಲೆಗಳ ಅಧಿಕಾರಿಗಳ ಜೊತೆ ವರ್ಚುವಲ್ ಸಂವಾದ ನಡೆಸಲಿದ್ದಾರೆ.
ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ) ಪ್ರಕಟಣೆ ಪ್ರಕಾರ, ಕರ್ನಾಟಕ, ಬಿಹಾರ, ಅಸ್ಸೋಂ, ಚಂಡೀಗಢ, ತಮಿಳುನಾಡು, ಉತ್ತರಾಖಂಡ, ಮಧ್ಯಪ್ರದೇಶ, ಗೋವಾ, ಹಿಮಾಚಲ ಪ್ರದೇಶ ಮತ್ತು ದೆಹಲಿ ರಾಜ್ಯಗಳಲ್ಲಿನ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿಗಳು ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಕೆಲ ರಾಜ್ಯಗಳ ಮುಖ್ಯಮಂತ್ರಿಗಳೂ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.