ಬೆಂಗಳೂರಲ್ಲಿ ಪುಂಡರ ಪುಂಡಾಟ- ಕೆ.ಜಿ.ಹಳ್ಳಿ-ಡಿ.ಜೆ.ಹಳ್ಳಿ ಗಲಭೆಯ ಹಿಂದಿದೆಯಾ ರಾಜಕೀಯ ದುರುದ್ದೇಶ ?
ಬೆಂಗಳೂರಲ್ಲಿ ಪುಡರ ಪುಂಡಾಟ- ಫೇಸ್ ಬುಕ್ ಪೋಸ್ಟರ್ ವಿಚಾರದಲ್ಲಿ ನಡೆದಿದ್ದ ಡಿ.ಜೆ.ಹಳ್ಳಿ -ಕೆ.ಜಿ ಹಳ್ಳಿ ಗಲಭೆ ಪ್ರಕರಣದ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳಿಂದ ರಾಜ್ಯ ಸರ್ಕಾರಕ್ಕೆ ಪ್ರಾಥಮಿಕ ವರದಿ ಸಲ್ಲಿಕೆಯಾಗಿದೆ.
ಕಾವಲ್ ಭೈರ ಸಂದ್ರಲ್ಲಿರುವ ಪುಲಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಹಚ್ಚಿದ್ದ ದುಷ್ಕರ್ಮಿಗಳು ನಂತರ ಶಾಸಕರ ಅಕ್ಕ ಪಕ್ಕದ ಮನೆಗಳಿಗೆ ನುಗ್ಗಿ ದಾಂದಲೆ ನಡೆಸಿದ್ದರು. ಅಲ್ಲದೆ ರಸ್ತೆಯಲ್ಲಿ ಸಿಕ್ಕ ವಾಹನಗಳ ಮೇಲೂ ಬೆಂಕಿ ಹಚ್ಚಿದ್ದರು. ಬಳಿಕ ಕೆ.ಜಿ.ಹಳ್ಳಿ ಪೊಲೀಸ್ ಸ್ಟೇಷನ್ ಬಳಿಯೂ ಗಲಾಟೆ ಮಾಡಿ ಬೆಂಕಿ ಹಚ್ಚುವ ಪ್ರಯತ್ನ ನಡೆಸಿದ್ದರು.
ಈ ಬಗ್ಗೆ ರಾಜ್ಯ ಸರ್ಕಾರ ಉನ್ನತ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ನೀಡುವಂತೆ ಸೂಚಿಸಿದೆ. ಈ ಬಗ್ಗೆ ಪೊಲೀಸ್ ಅಧಿಕಾರಿಗಳು ವರದಿ ನೀಡಿದ್ದಾರೆ. ಗಲಭೆಯಲ್ಲಿ ಮತೀಯ ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಜೊತೆಗೆ ಕೆಲವು ರಾಜಕೀಯ ಮುಖಂಡರು ಕೂಡ ಭಾಗಿಯಾಗಿರುವ ಬಗ್ಗೆ ಮಾಹಿತಿ ನೀಡಲಾಗಿದೆ. ರಾಜಕೀಯ ಲಾಭಕ್ಕಾಗಿ ರಾಜಕೀಯ ಮುಖಂಡರು ಗಲಭೆಗೆ ಪರೋಕ್ಷವಾಗಿ ಬೆಂಬಲ ನೀಡಿದ್ದಾರೆ. ಅದ್ರಲ್ಲೂ ಮುಂಬರುವ ಬಿಬಿಎಂಪಿ ಚುನಾವಣೆಯನ್ನು
ಮುಂದಿಟ್ಟುಕೊಂಡು ಮತೀಯ ಸಂಘಟನೆಗಳ ಜೊತೆಗೆ ಶಾಮೀಲಾಗಿದ್ದಾರೆ ಎಂಬುದರ ಬಗ್ಗೆಯೂ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ.
ಇನ್ನು ಗಲಭೆಯಲ್ಲಿ ಹೊರಗಿನಿಂದ ಕಿಡಿಗೇಡಿಗಳು ಬಂದಿದ್ದರು. ಇವರ ಜೊತೆ ಸ್ಥಳೀಯ ದುಷ್ಕರ್ಮಿಗಳು ಭಾಗಿಯಾಗಿರುವುದರಿಂದ ಪರಿಸ್ಥಿತಿ ಕೈ ಮೀರಿ ಹೋಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಅದೇ ರೀತಿ ರಾಜ್ಯ ಸರ್ಕಾರ ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಯವರಿಂದಲೂ ಮಾಹಿತಿ ಸಂಗ್ರಹಿಸಿದೆ.
ಒಟ್ಟಿನಲ್ಲಿ ಫೇಸ್ ಬುಕ್ ಪೋಸ್ಟ್ ಅನ್ನು ನೆಪವಾಗಿಟ್ಟುಕೊಂಡು ರಾಜಕೀಯ ದುರುದ್ದೇಶದಿಂದ ಈ ಗಲಭೆ ನಡೆಸಲಾಗಿದೆ. ಅಲ್ಲದೆ ಇದು ಪೂರ್ವನಿಯೋಜಿತವಾಗಿ ನಡೆಸಿರುವ ಕೃತ್ಯ ಎಂದು ಹೇಳಲಾಗುತ್ತಿದೆ.








