ತಮ್ಮದೇ ಪಕ್ಷದ ಸಚಿವರ ವಿರುದ್ಧ ಪ್ರತಾಪ್ ಸಿಂಹ ಗರಂ
ಮೈಸೂರು : ಸಂಸದ ಪ್ರತಾಪ್ ಸಿಂಹ ತಮ್ಮದೇ ಪಕ್ಷದ ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ಫುಲ್ ಗರಂ ಆಗಿದ್ದು, ಪ್ರವಾಸೋದ್ಯಮ ಇಲಾಖೆಯವರು ಬಣ್ಣದ ಕಾಗೆ ಹಾರಿಸಬಾರದು ಎಂದು ಟಾಂಗ್ ನೀಡಿದ್ದಾರೆ.
ಮೈಸೂರಿನಲ್ಲಿ ಹೆಲಿಟೂರಿಸಂ ಪ್ರಸ್ತಾವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಪ್ರತಾಪ್ ಸಿಂಹ, ಪ್ರವಾಸೋದ್ಯಮ ಇಲಾಖೆಯವರು ಬಣ್ಣದ ಕಾಗೆ ಹಾರಿಸಬಾರದು. ಮಂಡ್ಯದಲ್ಲಿ ಡಿಸ್ನಿಲ್ಯಾಂಡ್, ಮೈಸೂರಿನಲ್ಲಿ ಹೆಲಿ ಟೂರಿಸಂ ಮಾಡ್ತೀವಿ ಅಂತಾರೆ. ಇಂಥವೆಲ್ಲ ನಾವೂ ತುಂಬಾ ನೋಡಿದ್ದೇವೆ. ಎರಡು ಸಲ ಪ್ರಚಾರಕ್ಕೆ ಅಂತ ಮಾತಾಡ್ತಾರೆ. ಎರಡು ವರ್ಷ ಆದ್ಮೇಲೆ ಸಚಿವರು ಬದಲಾಗುತ್ತಾರೆ. ಆ ಮೇಲೆ ಎಲ್ಲವೂ ಮರೆತು ಹೋಗುತ್ತೆ. ಹೆಲಿ ಟೂರಿಸಂ ಅನ್ನುವ ಪದ ಮಾತ್ರ ಕೇಳಿದ್ದೇವೆ. ಆ ಯೋಜನೆ ರೂಪುರೇಷೆ ಏನು..?, ನಿಮ್ಮ ಬಳಿ ವಿಷನ್ ಡಾಕ್ಯುಮೆಂಟ್ ಎಲ್ಲಿದೆ..?, ಯಾವ ಘನಕಾರ್ಯ ಮಾಡ್ತೀರಿ ಅಂತ ನಮಗೂ ಹೇಳಿ ಎಂದು ಖಾರವಾಗಿ ಮಾತನಾಡಿದ್ದಾರೆ.
ಮೈಸೂರಿನಿಂದ ಕಾರವಾರ, ಬಳ್ಳಾರಿ, ಬೆಂಗಳೂರಿಗೆ ಹೆಲಿಕಾಪ್ಟರ್ ಸೇವೆ ಶುರು ಮಾಡುತ್ತೇವೆ ಅಂತೀರಿ. ಮೈಸೂರಿನಿಂದ ಕಾರವಾರಕ್ಕೆ ಹೋಗಿ ನೋಡುವುದು ಏನಿದೆ ಎಂದು ಪ್ರಶ್ನಿಸಿದರು. ದಸರಾ ಸಂದರ್ಭದಲ್ಲಿ ಮಾಡುವ ಹೆಲಿರೈಡ್ ಗೇ ಜನರ ಬರೋದಿಲ್ಲ. ಯೋಜನೆ ರೂಪಿಸುವ ಮುನ್ನ ಇದೆಲ್ಲವನ್ನೂ ಗಮನಿಸಬೇಕು. ಹೆಲಿ ಟೂರಿಸಂಗೆ ನನ್ನ ವಿರೋಧ ಇದೆ. ಈ ಸಂಬಂಧ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಿಎಂ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.