ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸ್ವಾತಂತ್ರ್ಯ ದಿನಾಚರಣೆ ಮುನ್ನಾ ದಿನ ದೇಶವನ್ನುದ್ದೇಶಿಸಿ ಮಾತನಾಡಿದರು. ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹರಡಿರುವ ಸಮಯದಲ್ಲಿ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವಂತೆ ಜನರಿಗೆ ಮನವಿ ಮಾಡಿದರು.
ಹೊಸದಿಲ್ಲಿ, ಅಗಸ್ಟ್ 15: ದೇಶ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿದ್ದು ನಿಮ್ಮ ಆರೋಗ್ಯ ವನ್ನು ಗಮನದಲ್ಲಿಟ್ಟುಕೊಂಡು ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾರತೀಯರಲ್ಲಿ ಮನವಿ ಮಾಡಿದ್ದಾರೆ. ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಆಚರಿಸಬೇಕಿದೆ ಎಂದು ಮನವಿ ಮಾಡಿದರು.
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದೇಶವನ್ನುದ್ದೇಶಿಸಿ ಮಾತನಾಡಿದ ರಾಮನಾಥ್ ಕೋವಿಂದ್, ಕೊರೋನಾ ವೈರಸ್ ವಿರುದ್ಧ ಹೋರಾಟ, ನವ ಭಾರತ ನಿರ್ಮಾಣ, ಹೊಸ ಶಿಕ್ಷಣ ನೀತಿ, ಸಾಂಸ್ಕೃತಿಕ, ಪಾರಂಪರಿಕ ಹಾಗೂ ಐತಿಹಾಸಿಕ ಪರಂಪರೆಗಳ ಪುನರ್ ಸ್ಥಾಪನೆ ಸೇರಿದಂತೆ ಹತ್ತು ಹಲವು ವಿಚಾರಗಳ ಕುರಿತು ಪ್ರಸ್ತಾಪಿಸಿದರು.

ಪ್ರತಿ ವರ್ಷ ಆಗಸ್ಟ್ 15 ರಂದು ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದ ಹೋರಾಟಗಾರರನ್ನು ನೆನಪಿಸಿಕೊಂಡು ಧ್ವಜಾರೋಹಣ ಮೂಲಕ ಸ್ವಾತಂತ್ರ್ಯ ದಿನಾಚರಣೆ ಆರಂಭಿಸುತ್ತೇವೆ. ಸ್ವಾತಂತ್ರ್ಯ ಸಂಗ್ರಾಮ ಆದರ್ಶದಲ್ಲೇ ಆಧುನಿಕ ಭಾರತ ನಿರ್ಮಾಣವಾಗುತ್ತಿದೆ. ಹೊಸ ಪರಿಕಲ್ಪನೆ, ಹೊಸ ಯೋಜನೆ ಮೂಲಕ ಅತ್ಮ ನಿರ್ಭರ್ ಭಾರತಕ್ಕೆ ಅಡಿಪಾಯ ಹಾಕಲಾಗಿದೆ ಎಂದು ಕೋವಿಂದ್ ಹೇಳಿದರು.
ಕಳೆದ ಕೆಲ ತಿಂಗಳುಗಳಿಂದ ಭಾರತದಲ್ಲಿ ಕೊರೋನಾ ಹೋರಾಟದಲ್ಲಿ ಸಕ್ರಿಯವಾಗಿರುವ ವೈದ್ಯರು, ನರ್ಸ್, ಆಸ್ಪತ್ರೆ ಸಿಬ್ಬಂದಿಗಳು, ಪೊಲೀಸರು, ಸ್ವಯಂ ಸೇವಕರು, ಸರ್ಕಾರಿ ಅಧಿಕಾರಿಗಳು ಸೇರಿದಂತೆ ಈ ಹೋರಾಟದಲ್ಲಿ ಭಾಗಿಯಾಗಿರುವ ಎಲ್ಲರಿಗೂ ಅಭಿನಂದನೆ ತಿಳಿಸಿದರು.

ಕೊರೋನಾ ದಿಂದ ದಿನಗೂಲಿ ನೌಕರರು ಆದಾಯವಿಲ್ಲದೆ ಪರಿತಪಿಸುತಿದ್ದು ಸರಕಾರ ಉಚಿತ ರೇಶನ್ ನೀಡುವ ಯೋಜನೆಯನ್ನು ನವೆಂಬರ್ 2020ರ ವರೆಗೆ ವಿಸ್ತರಿಸಿದೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿದೆ.
ಕೊರೋನಾ ವೈರಸ್ನ ಬಿಕ್ಕಟ್ಟಿನ ನಡುವೆ ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.ಈ ಕಠಿಣ ಪರಿಸ್ಥಿತಿಯಲ್ಲಿ ಸರ್ಕಾರ, ಸಂಘ ಸಂಸ್ಥೆಗಳು, ಭದ್ರತಾ ಪಡೆಗಳು ಸೇರಿದಂತೆ ಹಲವರು ನೆರವಿಗೆ ಧಾವಿಸಿದ್ದಾರೆ. ರಕ್ಷಣಾ ಪಡೆಗಳು ಕುಟುಂಬಗಳನ್ನು ಆಪತ್ತಿನಿಂದ ಪಾರುಮಾಡುತ್ತಿದೆ. ಸಂಕಷ್ಟದ ಪರಿಸ್ಥಿತಿಯಲ್ಲಿ ಎಲ್ಲರೂ ಜೊತೆಯಾಗಿ, ಒಗ್ಗಟ್ಟಾಗಿ ನಿಲ್ಲಬೇಕು ಎಂದಿದ್ದಾರೆ.

ಗಡಿ ಪ್ರದೇಶದಲ್ಲಿ ಭಾರತದ 20 ವೀರ ಯೋಧರು ಹುತಾತ್ಮರಾಗಿದ್ದಾರೆ. ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸುತ್ತೇನೆ. . ಈ ದೇಶ ಗಡಿಯಲ್ಲಿ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡುತ್ತಿರುವ ಎಲ್ಲಾ ವೀರ ಯೋಧರಿಗೆ ಸಲಾಂ ಎಂದು ಕೋವಿಂದ್ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.
ಕುಸಿದ ಆರ್ಥಿಕತೆ ಮೇಲಕ್ಕೆತ್ತಲು ಕೇಂದ್ರ ಸರ್ಕಾರ ಹಲವು ಯೋಜನೆ ಜಾರಿಗೊಳಿಸಿದೆ. ರೈತರು, ಚೇತರಿಸಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಪ್ರಕೃತಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಬದುಕಬೇಕಿದೆ. ಶುಚಿತ್ವಕ್ಕೆ ಆದ್ಯತೆ ನೀಡಬೇಕು ಎಂದು ಕರೆನೀಡಿದರು.
ವಿಜ್ಞಾನ ಹಾಗೂ ತಂತ್ರಜ್ಞಾನವನ್ನು ಬಳಸಿಕೊಂಡು ಹೊಸ ಭಾರತದ ಅಡಿಪಾಯ ನಿರ್ಮಾಣವಾಗುತ್ತಿದ್ದು ಯುವ ಜನಾಂಗಕ್ಕೆ ಭಾರತದ ಭವಿಷ್ಯ ಸುರಕ್ಷಿತ ಅನ್ನೋ ವಿಶ್ವಾಸ ನನಗಿದೆ ಎಂದು ಕೋವಿಂದ್ ಭರವಸೆ ವ್ಯಕ್ತಪಡಿಸಿದ್ದಾರೆ.

ಕೊರೋನಾ ವೈರಸ್ನಿಂದ ಮಕ್ಕಳ ಶಿಕ್ಷಣದ ಕುರಿತು ಚಿಂತಿಸುವ ಅಗತ್ಯವಿಲ್ಲ ಈ ರೀತಿಯ ಪರಿಸ್ಥಿತಿಗಳು ಶಾಶ್ವತವಲ್ಲ. ಮಕ್ಕಳ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ನೂತನ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದೆ. ಯಾವುದೇ ರಾಷ್ಟ್ರವನ್ನು ಬಲಿಷ್ಠ ಮಾಡಲು ಯುವಕರನ್ನು ಸುಶಿಕ್ಷಿತರನ್ನಾಗಿ ಮಾಡಬೇಕು. ಈ ನಿಟ್ಟಿನಲ್ಲಿ ಭಾರತ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದರು.
ಇತ್ತೀಚೆಗೆ ಅಯೋಧ್ಯೆಯಲ್ಲಿ ನಡೆದ ರಾಮ ಮಂದಿರ ಶಿಲಾನ್ಯಾಸ ಪ್ರಸ್ತಾಪಿಸಿ, ಈ ಕ್ಷಣಕ್ಕೆ ನಾವೆಲ್ಲ ಸಾಕ್ಷಿಯಾಗಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು








