ನವದೆಹಲಿ: ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಅವರು ಮಹಿಳೆಯರ ಪರ ದನಿಯತ್ತಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಡಿ ಹೊಗಳಿದ್ದಾರೆ.
ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಕುರಿತು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಜುಲೈ 2 ರಂದು ಸದನದಲ್ಲಿ ಮಹಿಳೆಯರಿಗೆ ಸಂಬಂಧಿಸಿದ ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಿದ್ದಕ್ಕಾಗಿ ಸಮಾಜ ಸೇವಕಿ, ಲೇಖಕಿ ಮತ್ತು ಇನ್ಫೋಸಿಸ್ ಫೌಂಡೇಶನ್ನ ಮಾಜಿ ಅಧ್ಯಕ್ಷೆ ಸುಧಾ ಮೂರ್ತಿ (Sudha Murthy) ಅವರಿಗೆ ಧನ್ಯವಾದ ಎಂದು ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ತಮ್ಮ ಚೊಚ್ಚಲ ಭಾಷಣದಲ್ಲಿ ಎರಡು ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಿದರು. ರಾಜ್ಯಸಭೆಯಲ್ಲಿ ಅಧ್ಯಕ್ಷರ ಭಾಷಣದ ಮೇಲೆ ಮಂಡಿಸಿದ ಧನ್ಯವಾದ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೊರೊನಾ ಅವಧಿಯಲ್ಲಿ ಲಸಿಕೆ ಅಭಿಯಾನ ನಡೆಸಿದಂತೆಯೇ ಗರ್ಭಕಂಠದ ಕ್ಯಾನ್ಸರ್ನಿಂದ ಮಹಿಳೆಯರನ್ನು ರಕ್ಷಿಸಲು ಲಸಿಕೆಯ ಅಗತ್ಯತೆ ಇದೆ ಎಂದು ಹೇಳಿದ್ದಾರೆ.
ನಮ್ಮ ಸಾಮಾಜಿಕ ವ್ಯವಸ್ಥೆಯಲ್ಲಿ ಹೆಣ್ಣಿಗೆ ತನ್ನ ಆರೋಗ್ಯದ ಕಡೆ ಗಮನ ಹರಿಸಲು ಸಾಧ್ಯವಾಗುತ್ತಿಲ್ಲ. ಅವಳು ಆಸ್ಪತ್ರೆಯನ್ನು ತಲುಪಿದಾಗ, ಆಕೆಯ ಗರ್ಭಕಂಠದ ಕ್ಯಾನ್ಸರ್ ಮೂರನೇ ಅಥವಾ ನಾಲ್ಕನೇ ಹಂತದಲ್ಲಿರುತ್ತದೆ. ಆ ಸಂದರ್ಭದಲ್ಲಿ ಅವರನ್ನು ಉಳಿಸುವುದು ಕಷ್ಟವಾಗುತ್ತದೆ. ಹೆಣ್ಣಿನ ಮರಣದ ನಂತರ ಗಂಡನಿಗೆ ಮತ್ತೊಬ್ಬ ಹೆಂಡತಿ ಸಿಗುತ್ತಾಳೆ. ಆದರೆ ಮಕ್ಕಳಿಗೆ ಬೇರೆ ತಾಯಿ ಸಿಗುವುದಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದರು.
ಹೀಗಾಗಿ ಲಸಿಕೆಯ ಅಭಿಯಾನ ನಡೆಸಬೇಕು ಎಂದು ಮನವಿ ಮಾಡಿದ್ದರು. ಅಲ್ಲದೇ, ಇದೇ ವೇಳೆ ಅಜಂತಾ, ಎಲ್ಲೋರಾ ಮತ್ತು ತಾಜ್ ಮಹಲ್ಗೆ ಜನರು ಆಗಾಗ್ಗೆ ಭೇಟಿ ನೀಡುತ್ತಾರೆ. ಆದರೆ ಭಾರತದಲ್ಲಿ 42 ಪಾರಂಪರಿಕ ತಾಣಗಳಿವೆ. ಅವುಗಳು ಹೆಚ್ಚು ಪ್ರಚಾರವಾಗದ ಅಥವಾ ಅವುಗಳ ಬಗ್ಗೆ ಜನರಿಗೆ ತಿಳಿದಿಲ್ಲ. ಅವುಗಳನ್ನು ಅಭಿವೃದ್ಧಿ ಪಡಿಸಿ ನಮ್ಮ ಸಂಸ್ಕೃತಿಯ ಅನಾವರಣ ಮಾಡಬೇಕು ಎಂದು ಮನವಿ ಮಾಡಿದ್ದರು. ಅವರ ಭಾಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.