ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದ ಪ್ರಧಾನಿ Saaksha Tv
ನವದೆಹಲಿ: ಕೊರೊನಾ ಮತ್ತು ಒಮಿಕ್ರಾನ್ ಸೋಂಕು ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಈ ಸೋಂಕು ಇನ್ನಷ್ಟು ತೀವ್ರವಾಗಿ ಹರಡಲಿದೆ ಎಂದು ಆರೋಗ್ಯ ಕ್ಷೇತ್ರದ ತಜ್ಞರು ಹೇಳಿದ್ದಾರೆ. ಕೊರೋನಾ ಮೂರನೇ ಅಲೆ ತೀವ್ರವಾಗಿ ಹೆಚ್ಚುತ್ತಿರುವುದು ಆತಂಕ ಹೆಚ್ಚಿಸಿದೆ. ಇದನ್ನು ನಿಯಂತ್ರಿಸುವ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ.
ಅಲ್ಲದೇ ಸೋಂಕು ಹೆಚ್ಚುತ್ತಿರುವ ಹಿನ್ನಲೇ ಜನವರಿ 9 ರಂದು ಪ್ರಧಾನಿ ನರೇಂದ್ರ ಮೋದಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದರು. ಈ ಮಹತ್ವದ ಸಭೆಯಲ್ಲಿ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಮುನ್ಸುಖ್ ಭಾಯ್ ಮಾಂಡೋವಿಯಾ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಖಾತೆ ಸಚಿವೆ ಭಾರತಿ ಪ್ರವೀಣ್ ಪವಾರ್ ಹಾಗೂ ಇನ್ನೀತರ ಅಧಿಕಾರಿಗಳು ಭಾಗಿಯಾಗಿದ್ದರು.
ಅದೇ ರೀತಿ ಇಂದು ಸಂಜೆ 4.30ಕ್ಕೆ ನಡೆಯುವ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಕೊರೋನಾ ಸೋಂಕು ಯಾವ್ಯಾವ ರಾಜ್ಯಗಳಲ್ಲಿ ಎಷ್ಟು ಪ್ರಮಾಣದಲ್ಲಿದೆ? ಸೋಂಕು ನಿಯಂತ್ರಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ? ದಿನದ ಮತ್ತು ವಾರದ ಪಾಸಿಟಿವ್ ರೇಟ್ ಹೇಗಿದೆ? ಸೋಂಕಿನಿಂದ ಸಾಯುವವರ ಪ್ರಮಾಣ ಹೇಗಿದೆ? ಎಂದು ಕುಲಂಕುಶ ವರದಿ ಪಡೆಯಲಾಗುತ್ತದೆ.
ಹಾಗೇ ಹೆಚ್ಚುತ್ತಿರುವ ಒಮಿಕ್ರಾನ್ ಸೋಂಕು ಹರಡುವಿಕೆ ಪ್ರಮಾಣ ಹೇಗಿದೆ? ಕೊರೋನಾ ಮತ್ತು ಓಮೈಕ್ರಾನ್ ಸೋಂಕು ಹರಡುವಿಕೆ ತಡೆಯಲು ಮುಂದೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳು ಯಾವುವು ಎಂಬ ವಿಷಯಗಳ ಬಗ್ಗೆ ಸಮಗ್ರವಾದ ಸಮಾಲೋಚನೆ ನಡೆಯಲಿದೆ. ಇದೇ ವೇಳೆ ಮುಖ್ಯಮಂತ್ರಿಗಳಿಂದ ರಾಜ್ಯಗಳ ಪರಿಸ್ಥಿತಿ ಮತ್ತು ಅವು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದು ತಿಳಿದುಬಂದಿದೆ.