ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗ್ರಾ.ಪಂ.ನೌಕರರ ಪ್ರತಿಭಟನೆ
ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಗ್ರಾಮ ಪಂಚಾಯತಿ ನೌಕರರ ಸಂಘ ಬುಧವಾರ ಬೆಂಗಳೂರಿನಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿತು.
ಸಾವಿರಾರು ಸಂಖ್ಯೆಯಲ್ಲಿ ಸೇರಿರುವ ಪ್ರತಿಭಟನಾಕಾರರು ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ವಿಧಾನಸೌಧದವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದರು.
ಗ್ರಾಮ ಪಂಚಾಯತಿ ನೌಕರರಿಗೆ 10 ರಿಂದ 15 ತಿಂಗಳುಗಳಿಂದ ಸರ್ಕಾರ ವೇತನ ನೀಡಿಲ್ಲ. 2021 ಸೆಪ್ಟೆಂಬರ್ ತಿಂಗಳಲ್ಲಿ ಸರ್ಕಾರದ ನಿಧಿಯಿಂದ ಇಎಫ್ ಎಂಎಸ್ ಮೂಲಕ ವೇತನ ನೀಡಲು ರಾಜ್ಯ ಸರ್ಕಾರ ಆದೇಶ ಮಾಡಿತ್ತು. ಆದ್ರೆ ಗ್ರಾಮಪಂಚಾಯಿತಿ ನೌಕರರಿಗೆ ಇಲ್ಲಿಯವರೆಗೆ ವೇತನ ಬಿಡುಗಡೆ ಸರಿಯಾಗಿ ಆಗುತ್ತಿಲ್ಲ ಎಂದು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದರು.
ಗ್ರಾಮ ಪಂಚಾಯತಿ ನೌಕರರ ಬೇಡಿಕೆಗಳು
ತಿಂಗಳಿಗೆ ಸರಿಯಾಗಿ ವೇತನ ಬಿಡುಗಡೆ ಮಾಡಬೇಕು..
ವೇತನಕ್ಕಾಗಿ 700 ಕೋಟಿ ಹಣ ಬಿಡುಗಡೆ ಮಾಡಬೇಕು.
10 ವರ್ಷ ಮೇಲ್ಪಟ್ಟವರಿಗೆ ಪ್ರಮೋಷನ್ ಗಾಗಿ ಅರ್ಹತಾ ಪರೀಕ್ಷೆ ರದ್ದುಗೊಳಿಸಬೇಕು
ಪಿಂಚಣಿ ಫೈಲ್ ರೆಡಿ ಇದೆ ಪಿಂಚಣಿ ನೀಡುವ ಆದೇಶ ಆಗಬೇಕು
ಪ್ರತಿಭಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಗ್ರಾಮ ಪಂಚಾಯತ್ ನೌಕರರ ಸಂಘದ ಉಪಾಧ್ಯಕ್ಷ ಎಂಬಿ ನಾಡಗೌಡ, ಸುಮಾರು 10-12 ತಿಂಗಳಿಂದ ಸಂಬಳ ಬಂದಿಲ್ಲ. ಗ್ರಾಮಪಂಚಾಯ್ತಿ ಮುಂಭಾಗದಲ್ಲಿ 10 ಜನ ನೌಕರರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಮ್ಮನ್ನ ಕೊರೊನಾ ವಾರಿಯರ್ಸ್ ಎಂದು ಘೋಷಣೆ ಮಾಡಿದ್ದಾರೆ. ನಮ್ಮ 80 ನೌಕರರು ಕೊರೊನಾಗೆ ಬಲಿಯಾಗಿದ್ದಾರೆ. 30 ಲಕ್ಷ ರುಪಾಯಿ ಪರಿಹಾರ ಘೋಷಣೆ ಮಾಡಿದ್ರು. ಆದ್ರೆ ಇಲ್ಲಿಯವರೆಗೆ ಯಾವುದೇ ಪರಿಹಾರ ಕೊಟ್ಟಿಲ್ಲ. ನಮ್ಮ 4 ಬೇಡಿಕೆಗಳನ್ನು ಈಡೇರಿಸುವವರೆಗೆ ಅನಿರ್ದಿಷ್ಟಾವದಿ ಮುಷ್ಕರ ಮುಂದುವರಿಯುತ್ತದೆ ಎಂದು ಎಚ್ಚರಿಕೆ ನೀಡಿದರು.