ರೈಲ್ವೆ ಇಲಾಖೆಯಿಂದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಲಿಫ್ಟ್ ಹಸ್ತಾಂತರ
ಮೈಸೂರು : ಚಾಮುಂಡೇಶ್ವರಿ ದೇವಸ್ಥಾನದ ರಥಕ್ಕೆ ದೇವರನ್ನು ಕೂರಿಸುವ ಲಿಫ್ಟ್ ಅನ್ನು ರೈಲ್ವೆ ಇಲಾಖೆಯಿಂದ ದೇವಸ್ಥಾನಕ್ಕೆ ಹಸ್ತಾಂತರಿಸಲಾಗಿದೆ.
ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ರಥಕ್ಕೆ ದೇವರನ್ನು ಕೂರಿಸುವ ಲಿಫ್ಟ್ ಅನ್ನು ರೈಲ್ವೆ ಇಲಾಖೆ ದೇವಸ್ಥಾನಕ್ಕೆ ಹಸ್ತಾಂತರಿಸುವ ಕಾರ್ಯಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಸಂಸದರಾದ ಪ್ರತಾಪ್ ಸಿಂಹ ಮಾತನಾಡಿ, ಚಾಮುಂಡೇಶ್ವರಿ ದೇವಸ್ಥಾನದ ರಥಕ್ಕೆ ದೇವರನ್ನು ಕೂರಿಸಲು ಲಿಫ್ಟ್ ಅವಶ್ಯಕತೆ ತುಂಬಾ ಇದೆ.
ಬಹಳ ವರ್ಷಗಳಿಂದ ಶಿಥಿಲಾವಸ್ಥೆಯಿಂದಿತ್ತು. ಹೀಗಾಗಿ ಇದರ ದುರಸ್ತಿ ಇಲ್ಲವೇ ಹೊಸ ಲಿಫ್ಟ್ ಬೇಕೆಂದು ಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ದೀಕ್ಷಿತ್ ಅವರು ಮನವಿ ಕೊಡುತ್ತಲೇ ಬಂದಿದ್ದಾರೆ.
ಇದಕ್ಕಾಗಿ 5.50 ಲಕ್ಷ ರೂ. ಅನುದಾನ ಬೇಕಿತ್ತು. ಉಸ್ತುವಾರಿ ಸಚಿವರು ಇದರ ಬಗ್ಗೆ ಆಸಕ್ತಿ ತೋರಿ ಅನುದಾನ ಕೊಡಿಸಿದ್ದು, ಇದೀಗ ಲಿಫ್ಟ್ ದೇವಸ್ಥಾನದ ಬಳಕೆಗೆ ಲಭ್ಯವಾಗಿದೆ ಎಂದು ಹೇಳಿದರು.
ಬೆಟ್ಟದ ಮಳಿಗೆಗಳಿಗೆ ಸಂಬಂಧಪಟ್ಟಂತೆ ಉಸ್ತುವಾರಿ ಸಚಿವರಾದ ಸೋಮಶೇಖರ್ ಅವರು ಸ್ಥಳಾಂತರ ಹಾಗೂ ಮೂಲ ಸೌಕರ್ಯಕ್ಕೆ ಸಂಬಂಧಪಟ್ಟಂತೆ ಸೂಕ್ತ ನಿರ್ದೇಶನ ನೀಡುತ್ತಿದ್ದಾರೆ ಎಂದು ಸಂಸದರಾದ ಪ್ರತಾಪ್ ಸಿಂಹ ಹೇಳಿದರು.
ಈ ವೇಳೆ ರೈಲ್ವೆ ಇಲಾಖೆ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.