ಬೆಂಗಳೂರು : ಕೊರೊನಾ ವೈರಾಣು ಹರಡುವಿಕೆ ತಡೆಯಲು ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಸಂಕಷ್ಟಕ್ಕೆ ಒಳಗಾಗಿರುವ ಬಡವರಿಗೆ ಮತ್ತು ಕೊರೊನಾ ವಾರಿಯರ್ಸ್ ಗೆ ವಿಧಾನ ಪರಿಷತ್ ಸದಸ್ಯ ಹೆಚ್. ಎಂ. ರಮೇಶ್ ಗೌಡ ಆಹಾರ ಸಾಮಗ್ರಿಗಳನ್ನು ವಿತರಣೆ ಮಾಡಿದರು. ಕಲ್ಯಾಣನಗರದ ಹೆಣ್ಣೂರು ಮಾರುತಿ ಲೇಔಟ್ ನಲ್ಲಿರುವ ಎಚ್ ಎಮ್ ಆರ್ ವಿದ್ಯಾಸಂಸ್ಥೆಗಳ ಆವರಣದಲ್ಲಿ ಕೊರೊನಾ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ಸುಮಾರು ಐದು ಸಾವಿರ ಮಂದಿಗೆ ಆಹಾರ ಧಾನ್ಯದ ಕಿಟ್ ಗಳನ್ನು ನೀಡಲಾಯಿತು.
ಬಡವರು, ಪೊಲೀಸರು, ಆಶಾ ಕಾರ್ಯಕರ್ತೆಯರು, ಪೌರ ಕಾರ್ಮಿಕರು ಸೇರಿದಂತೆ ಲಾಕ್ ಡೌನ್ ನಿಂದ ಸಂಕಷ್ಟಕ್ಕೀಡಾಗಿರುವವರಿಗೆ ಆಹಾರದ ಕಿಟ್ ಗಳನ್ನು ವಿತರಿಸಿದ ಬಳಿಕ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಹೆಚ್. ಎಂ. ರಮೇಶ್ ಗೌಡ, ತಮ್ಮ ಜೀವದ ಹಂಗು ತೊರೆದು ಕೋವಿಡ್ ವಿರುದ್ಧ ಹೋರಾಟ ನಡೆಸುತ್ತಿರುವ ಕೊರೊನಾ ವಾರಿಯರ್ಸ್ ಗಳ ಸಂಕಷ್ಟಕ್ಕೆ ಸ್ಪಂದಿಸುವ ಉದ್ದೇಶದಿಂದ ಆಹಾರ ಧಾನ್ಯ ನೀಡಲಾಗುತ್ತಿದೆ. ಸಂಕಷ್ಟದಲ್ಲಿರುವವರಿಗೆ ಮಾನವೀಯ ನೆಲೆಗಟ್ಟಿನಲ್ಲಿ ಎರಡನೇ ಬಾರಿಗೆ ಆಹಾರದ ಕಿಟ್ ನೀಡಿದ್ದೇವೆ. ಈಗಾಗಲೇ ಒಂದು ಬಾರಿ ಇದೇ ರೀತಿ ಆಹಾರದ ಕಿಟ್ ನೀಡಲಾಗಿತ್ತು ಎಂದರು. ಈ ಸಂದರ್ಭದಲ್ಲಿ ಬೆಂಗಳೂರು ಪೂರ್ವ ಡಿಸಿಪಿ ಶರಣಪ್ಪ ಉಪಸ್ಥಿತರಿದ್ದರು.








