ಗಣರಾಜ್ಯೋತ್ಸವ ಹಿಂಸಾಚಾರ ಪ್ರಕರಣ – ಬಂಧಿತ 83 ಜನರಿಗೆ 2 ಲಕ್ಷ ರೂ. ಪರಿಹಾರ ಘೋಷಣೆ..! ನವದೆಹಲಿ : ಗಣರಾಜ್ಯೋತ್ವದ ದಿನ ಕೆಂಪುಕೋಟೆಯಲ್ಲಿ ನಡೆದ ಹಿಂಸಾಚಾರ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಅನೇಕರು ಈ ವೇಳೆ ಪ್ರಾಣ ಕಳೆದುಕೊಂಡಿದ್ರು.. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ 83 ಮಂದಿಗೆ ಪಂಜಾಬ್ ಸರ್ಕಾರ 2 ಲಕ್ಷ ರೂಪಾಯಿಗಳ ಪರಿಹಾರ ನೀಡಲಾಗುವುದು ಎಂದು ಘೋಷಣೆ ಮಾಡಿದೆ..
ಈ ಬಗ್ಗೆ ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಘೋಷಿಸಿದ್ದಾರೆ. ಟ್ರ್ಯಾಕ್ಟರ್ ರ್ಯಾಲಿಯ ಸಂದರ್ಭ ದೆಹಲಿಯ ಕೆಂಪು ಕೋಟೆಯಲ್ಲಿ ಹಿಂಸಾಚಾರ ಸಂಭವಿಸಿತ್ತು. ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬೆಂಬಲ ನೀಡುವ ನನ್ನ ಸರ್ಕಾರದ ನಿಲುವನ್ನು ಪುನರುಚ್ಚರಿಸುತ್ತಿದ್ದೇನೆ.ಜನವರಿ 26ರಂದು ದೆಹಲಿಯಲ್ಲಿ ಟ್ರ್ಯಾಕ್ಟರ್ ರ್ಯಾಲಿ ನಡೆಸಿದ್ದಕ್ಕಾಗಿ ದೆಹಲಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ 83 ಮಂದಿಗೆ ₹2 ಲಕ್ಷ ಪರಿಹಾರ ನೀಡಲು ನಾವು ನಿರ್ಧರಿಸಿದ್ದೇವೆ ಎಂದು ಚರಣ್ಜಿತ್ ಸಿಂಗ್ ಚನ್ನಿ ಟ್ವೀಟ್ ಮಾಡಿದ್ದಾರೆ.
ಅಲ್ಲದೇ ನಾವೆಲ್ಲರೂ ಒಟ್ಟಾಗಿ ಪಂಜಾಬ್ ಅನ್ನು ಸಮೃದ್ಧಗೊಳಿಸಬೇಕಾಗಿದೆ. ಪಂಜಾಬ್ ಕೃಷಿ ಪ್ರಧಾನ ರಾಜ್ಯ. ನಮ್ಮದು ಕಾಂಗ್ರೆಸ್ ಸರ್ಕಾರವಾಗಿದ್ದು, ರೈತಪರವಾಗಿದೆ ಎಂದು ಕೂಡ ಹೇಳಿದ್ದಾರೆ.ಕೇಂದ್ರ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಕಳೆದ ವರ್ಷ ನವೆಂಬರ್ 26ರಿಂದ ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಜನವರಿಯಲ್ಲಿ ಕೃಷಿ ಕಾಯ್ದೆಗಳಿಗೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ಆದರೂ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ರೈತರ ಪ್ರತಿಭಟನೆ ಮುಂದುವರಿದಿದೆ.ಪ್ರತಿಭಟನಾನಿರತ ರೈತರು ಗಣರಾಜ್ಯೋತ್ಸವ ದಿನ ದೆಹಲಿಗೆ ಟ್ರ್ಯಾಕ್ಟರ್ ರ್ಯಾಲಿ ಹಮ್ಮಿಕೊಂಡಿದ್ದರು. ರ್ಯಾಲಿ ವೇಳೆ ಪ್ರತಿಭಟನಾ ನಿರತರು ಮತ್ತು ಪೊಲೀಸರ ಮಧ್ಯೆ ಘರ್ಷಣೆ ಸಂಭವಿಸಿತ್ತು. ಈ ವೇಳೆ ಹಲವರನ್ನ ದೆಹಲಿ ಪೊಲೀಸರು ಬಂಧಿಸಿದ್ದರು.