ಬೆಂಗಳೂರು : ಇದು ಇಡೀ ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರ ಕಾರ್ಯಕ್ರಮ. ಯಾವುದೇ ಕಾರಣಕ್ಕೂ ನಾವು ಇದನ್ನು ನಿಲ್ಲಿಸುವುದಿಲ್ಲ. ನೀವು ಏನೇ ಪ್ರಯತ್ನ ಮಾಡಿದರೂ ಕಾನೂನಿನ ಚೌಕಟ್ಟಿನಲ್ಲಿ, ನೀವು ಅನುಮತಿ ಕೊಟ್ಟಾಗಲೇ ಕಾರ್ಯಕ್ರಮ ಮಾಡುತ್ತೇನೆ. ಈಗ ಯೋಜಿಸಿರುವಂತೆ ಕಾರ್ಯಕ್ರಮ ನಡೆಯುತ್ತದೆ. ಕಾರ್ಯಕ್ರಮ ದಿನಾಂಕವನ್ನು ಮುಂದೆ ತಿಳಿಸಲಾಗುವುದು. ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್ 12ರಂದು ಕೆಪಿಸಿಸಿ ಅಧ್ಯಕ್ಷನಾಗಿ ಆಯ್ಕೆಯಾದ ಕ್ಷಣದಿಂದ ಒಂದು ನಿಮಿಷ ವ್ಯಯ ಮಾಡದೇ ಕೆಲಸ ಮಾಡುತ್ತಿದ್ದೇನೆ. ಸಾಂಪ್ರದಾಯಿಕವಾಗಿ ಅಧಿಕಾರ ಸ್ವಿಕರಿಸುವ ಕಾರ್ಯಕ್ರಮ ನಡೆಯಬೇಕಿತ್ತು. ಆ ಕಾರ್ಯಕ್ರಮಕ್ಕೆ ಅನೇಕ ಅಡ್ಡಿ ಬರುತ್ತಿವೆ. ಮೂರು ಬಾರಿ ದಿನಾಂಕ ನಿಗದಿ ಮಾಡಿ ಮುಂದೂಡಿಕೆಯಾಗಿದೆ. ಮೇ 31, ಜೂ 7, ಅನಂತರ ಜೂ.14 ದಿನಾಂಕ ನಿಗದಿಯಾಗಿತ್ತು. ಇದಕ್ಕೆ ಪೊಲೀಸ್ ಆಯುಕ್ತರ ಮೌಕಿಕ ಅನುಮತಿ ಪಡೆಯಲಾಗಿತ್ತು.
7800 ಕಡೆ ಜಾಗ ನಿಗದ ಪಡಿಸಲಾಗಿತ್ತು, ಹೆಚ್ಚುವರಿಯಾಗಿ ಮೂರುವರೆ ಸಾವಿರ ಜಾಗದಲ್ಲಿ ಎಲ್ ಇ ಡಿ ಸ್ಕ್ರೀನ್ ಹಾಕಿ ಒಂದುವರೆ ತಿಂಗಳಿನಿಂದ ತಯಾರಿ ನಡೆಸಿದ್ದರೆ ನಿನ್ನೆ ಸಂಜೆ ಸರ್ಕಾರ ಅನುಮತಿ ನಿರಾಕರಿಸಿದೆ. ಅನುಮತಿ ಕೇಳಿ ಸಿಎಂ, ಮುಖ್ಯಕಾರ್ಯದರ್ಶಿ ಸೇರಿ ಎಲ್ಲರಿಗೂ ಪತ್ರ ಬರೆಯಲಾಗಿತ್ತು. ಯಾವ ರೀತಿ ಕಾರ್ಯಕ್ರಮ ನಡೆಯಲಿದೆ ಎಂದು ವಿವರ ನೀಡಲಾಗಿತ್ತು. ಕೆಪಿಸಿಸಿ ಮುಂದೆ ಸಾಮಾಜಿಕ ಅಂತರ ಕಾಪಾಡಿಕೊಂಡು ಪೆಂಡಾಲ್ ಹಾಕಿ, ನೂರೈವತ್ತು ಜನ ಭಾಗವಹಿಸುವವರಿದ್ದರು. ಅದಕ್ಕೂ ಅನುಮತಿ ನಿರಾಕರಿಸಲಾಗಿದೆ.
ಯಡಿಯೂರಪ್ಪ ನುಡಿದಂತೆ ನಡೆಯುತ್ತಾರೆ, ಕೊಟ್ಟ ಮಾತು ಉಳಿಸಿಕೊಳ್ಳುತ್ತಾರೆ. ಅವರು ಸಣ್ಣ ರಾಜಕಾರಣ ಮಾಡಲ್ಲ ಎಂದುಕೊಂಡಿದ್ದೆ. ರಾಜ್ಯ ಸರ್ಕಾರದ ಸಚಿವರು ಹೋದ ಕಡೆಯಲೆಲ್ಲಾ ಯಾವ ರೀತಿ ಕಾರ್ಯಕ್ರಮ ನಡೆಯುತ್ತಿದೆ ಎಂದು ಗೋತ್ತಿದೆ. ಪದಗ್ರಹಣಕ್ಕೆ ಅನುಮತಿ ನಿರಾಕರಿಸಿರುವುದು ರಾಜಕೀಯ ದಾಖಲೆ. ಅಷ್ಟೇ ಅಲ್ಲ ಕಾಂಗ್ರೆಸ್ ಗೆ ಶಾಸಕಾಂಗ ಸಭೆಗೂ ಅನುಮತಿ ನಿರಾಕರಿಸಿದರು.
ರಾಜ್ಯ ಸರ್ಕಾರ ನಮ್ಮ ಕಾರ್ಯಕ್ರಮಕ್ಕೆ ಅನುಮತಿ ನೀಡಬಹುದಾಗಿತ್ತು. ಆದರೆ ಅನುಮತಿ ಯಾವ ಕಾರಣಕ್ಕೆ ನಿರಾಕರಿಸುತ್ತಿದ್ದಾರೆ ಎಂಬುದು ತಿಳಿಯುತ್ತಿಲ್ಲ. ಇದರಲ್ಲಿ ರಾಜಕೀಯ ದುರುದ್ದೇಶ ಕಾಣುತ್ತಿದೆ. ನಾವು ಕಾನೂನನ್ನು ಗೌರವಿಸುತ್ತೇವೆ. ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವುದಿಲ್ಲ. ಹೀಗಾಗಿ ಅವರು ಅನುಮತಿ ಕೊಟ್ಟಾಗಲೇ ಕಾರ್ಯಕ್ರಮ ಮಾಡುತ್ತೇವೆ.
ಬಿಜೆಪಿಯ ಅನೇಕ ಮುಖಂಡರು ಸಾವಿರಾರು ಜನರನ್ನು ಸೇರಿಸಿ ಕಾರ್ಯಕ್ರಮ ಮಾಡುತ್ತಿದ್ದಾರೆ. ಅವರೇ ಕಾನೂನು ಮಾಡಿ ಅದನ್ನು ಉಲ್ಲಂಘನೆ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮ ಇಲ್ಲ. ನಾವು ಕಾನೂನಾತ್ಮಕವಾಗಿ ಅನುಮತಿ ಕೇಳಿದರೆ ಕೊಡುತ್ತಿಲ್ಲ. ಸರ್ಕಾರದ ಈ ದ್ವಂದ್ವ ನಿಲುವು ಅರ್ಥವಾಗುತ್ತಿಲ್ಲ.
ಪಶ್ಚಿಮ ಬಂಗಾಳ, ಬಿಹಾರದಲ್ಲಿ ಅಲ್ಲಿನ ಬಿಜೆಪಿ ನಾಯಕರು ಮೇಗಾ ರ್ಯಾಲಿ ನಡೆಸಿದ್ದಾರೆ. ಬಿಹಾರದಲ್ಲಿ ಎಪ್ಪತ್ತು ಸಾವಿರ ಎಲ್ ಇ ಹಾಕಿ ಕಾರ್ಯಕ್ರಮ ಮಾಡಿದ್ದಾರೆ. ಅವರಿಗೆ ಒಂದು ನಮಗೆ ಒಂದು ಕಾನೂನು ಇದೆಯಾ? ಎಂದು ಸರ್ಕಾರವನ್ನು ಡಿ.ಕೆ ಶಿವಕುಮಾರ ಪ್ರಶ್ನೆ ಮಾಡಿದ್ದಾರೆ.








