ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವುದು ಎಫ್ ಎಸ್ ಎಲ್ ವರದಿಯಲ್ಲಿ ಸಾಬೀತಾಗಿದೆ. ಹೀಗಾಗಿ ರಾಜ್ಯಸಭೆಗೆ ಆಯ್ಕೆಯಾದ ಸಂಸದ ನಾಸಿರ್ ಹುಸೇನ್ ಪ್ರಮಾಣ ವಚನ ತಡೆ ಹಿಡಿಯಬೇಕೆಂದು ಕೋರಿ 22 ಜನ ನಿವೃತ್ತ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳು ಪತ್ರ ಬರೆದಿದ್ದಾರೆ. ಪತ್ರದಲ್ಲಿ ತನಿಖೆ ಮುಗಿಯುವವರೆಗೂ ಪ್ರಮಾಣ ವಚನ ಬೋಧಿಸಬಾರದು ಎಂದು ಮನವಿ ಮಾಡಿದ್ದಾರೆ.
ನಿವೃತ್ತ ಅಧಿಕಾರಿಗಳು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ನಾಸಿರ್ ಹುಸೇನ್ ಗೆಲುವು ಸಾಧಿಸಿದ್ದರು. ಈ ವೇಳೆ ನಡೆದ ವಿಜಯೋತ್ಸವದ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನದ ಪರ ಘೋಷಣೆ ಕೂಗಿರುವ ಆರೋಪ ಕೇಳಿ ಬಂದಿತ್ತು. ಹೀಗಾಗಿ ಸರ್ಕಾರ ಎಫ್ಎಸ್ಎಲ್ ತನಿಖೆಗೆ ಆದೇಶ ನೀಡಿತ್ತು. ವರದಿಯಲ್ಲಿ ಘೋಷಣೆ ಕೂಗಿರುವುದು ಸಾಬೀತಾಗಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಈ ಪ್ರಕರಣದಲ್ಲಿ ಸಾಂದರ್ಭಿಕ ಸಾಕ್ಷಿಗಳ ಪ್ರಕಾರ ನಾಸಿರ್ ಹುಸೇನ್ ಪಾತ್ರ ನೇರವಾಗಿದೆ. ಅವರ ಬೆಂಬಲಿಗರು ಪಾಕ್ ಪರ ಘೋಷಣೆ ಕೂಗುವ ಮೂಲಕ ರಾಷ್ಟ್ರದ ಹಿತಕ್ಕೆ ಧಕ್ಕೆ ಉಂಟು ಮಾಡಿದ್ದಾರೆ. ಹೀಗಾಗಿ ತನಿಖೆ ಮುಗಿಯುವವರೆಗೂ ಅವರಿಗೆ ಪ್ರಮಾಣ ವಚನ ಬೋಧಿಸಬಾರದು ಎಂದು ಮನವಿ ಮಾಡಲಾಗಿದೆ.