ಆರ್ ಎಸ್ ಎಸ್ ನವ್ರು ಜಾತಿವಾದಿಗಳು, ಅವ್ರ ಮಾತು ಇಲ್ಲಿ ನಡೆಯೋಲ್ಲ
ಹೊಸಪೇಟೆ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ತೀವ್ರಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪರ ಮಠಾಧೀಶರು ಬ್ಯಾಟಿಂಗ್ ಆರಂಭಿಸಿದ್ದಾರೆ. ಈ ಮಧ್ಯೆ ವೀರಶೈವ ಶಿವಯೋಗ ಮಂದಿರ ಸಂಸ್ಥೆಯ ಅಧ್ಯಕ್ಷ ಸಂಗನಬಸವ ಸ್ವಾಮೀಜಿ ಆರ್ ಎಸ್ ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಹೊಸಪೇಟೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದವರು ಜಾತಿವಾದಿಗಳು. ಅವರಿಗೆ ಉದಾರ ಮನಸ್ಸಿಲ್ಲ. ತಮ್ಮದೇ ಹಠ ಸಾಧಿಸಬೇಕೆಂದು ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪನವರನ್ನು ಬದಲಿಸಲು ಹೊರಟಿದ್ದಾರೆ. ಆದರೆ, ಕರ್ನಾಟಕದಲ್ಲಿ ಅವರ ಮಾತು ನಡೆಯೊಲ್ಲ. ಅವರ ಮಾತು ಕೇಳಿಕೊಂಡೇ ಮಹಾರಾಷ್ಟ್ರದಲ್ಲಿ ಬ್ರಾಹ್ಮಣ ಸಮುದಾಯದವರಿಗೆ ಸೇರಿದವರನ್ನು ಮುಖ್ಯಮಂತ್ರಿ ಮಾಡಿದ್ದರು.
ಆದರೆ, ಅದು ಸರಿಯಾಗಿ ನಡೆಯಲಿಲ್ಲ. ಬೇರೆ ಕಡೆ ಆರ್ಎಸ್ಎಸ್ನವರ ಮಾತು ನಡೆಯಬಹುದು. ಆದರೆ, ಕರ್ನಾಟಕದಲ್ಲಿ ನಡೆಯುವುದಿಲ್ಲ. ಅವರ ಮಾತು ಕೇಳಿ ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಬದಲಿಸಿದರೆ ಬಿಜೆಪಿ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
‘ವೀರಶೈವ ಲಿಂಗಾಯತರು ಆರ್ಎಸ್ಎಸ್ ಜೊತೆಗೆ ಹೋಗುತ್ತಿಲ್ಲ ಎಂದ ಶ್ರೀಗಳು, ಲಿಂಗಾಯತರು ಯಾವುದೇ ಆತ್ಮವಂಚನೆ ಮಾಡಿಕೊಳ್ಳುತ್ತಿಲ್ಲ. ಪ್ರಲ್ಹಾದ್ ಜೋಶಿ ಅವರು ಮುಂದಿನ ಮುಖ್ಯಮಂತ್ರಿ ಆಗುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಅದಕ್ಕೆ ಆರ್ಎಸ್ಎಸ್ನವರ ಚಿತಾವಣೆಯೇ ಮುಖ್ಯ ಕಾರಣ ಎಂದು ಆರೋಪಿಸಿದರು.