ಸಿದ್ದರಾಮಯ್ಯ ರಾಮಮಂದಿರಕ್ಕೆ ಹಣ ಕೊಟ್ಟಿರುತ್ತಾರೆ : ಎಸ್.ಟಿ.ಸೋಮಶೇಖರ್
ಮೈಸೂರು: ಶ್ರೀರಾಮ ಮಂದಿರಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಸಹ ದೇಣಿಗೆ ಕೊಟ್ಟಿರುತ್ತಾರೆ. ಆದರೆ ಬಹಿರಂಗವಾಗಿ, ಸಾರ್ವಜನಿಕವಾಗಿ ಅವರು ಹೇಳಿಕೆ ನೀಡುತ್ತಿಲ್ಲ.
ಸರ್ಕಾರ ಸುಗಮವಾಗಿ ಆಡಳಿತ ನಡೆಸುತ್ತಿರುವುದಕ್ಕೆ ಅವರಿಗೆ ಯಾವುದೇ ರೀತಿ ಮಾತನಾಡಲು ಆಗದ್ದರಿಂದ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.
ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ರಥಕ್ಕೆ ದೇವರನ್ನು ಕೂರಿಸುವ ಲಿಫ್ಟ್ ಅನ್ನು ರೈಲ್ವೆ ಇಲಾಖೆ ದೇವಸ್ಥಾನಕ್ಕೆ ಹಸ್ತಾಂತರಿಸುವ ಕಾರ್ಯಕ್ಕೆ ಚಾಲನೆ ನೀಡಿದ ಸಚಿವರು, ಸರ್ಕಾರ ಸುಗಮವಾಗಿ, ದಕ್ಷವಾಗಿ ಹೋಗುತ್ತಿದೆ.
ಮಾತನಾಡಲೂ ಏನೂ ಉಳಿದಿಲ್ಲವಾದ್ದರಿಂದ ಇಂತಹ ಹೇಳಿಕೆ ಕೊಡುತ್ತಿದ್ದಾರೆ. ಇವರು ಬಾಯಿ ಚಪಲಕ್ಕೆ ಲೆಕ್ಕ ಕೇಳುತ್ತಿದ್ದಾರೆ. ಶ್ರೀರಾಮ ಮಂದಿರ ನಿರ್ಮಾಣಕ್ಕೆ ಯಾರೂ ಸಹ ಬಲವಂತವಾಗಿ ದೇಣಿಗೆ ಸಂಗ್ರಹಿಸುತ್ತಿಲ್ಲ.
ಒಂದೇ ಒಂದು ಪೈಸೆ ಸಹ ರಾಮಮಂದಿರಕ್ಕೆ ಉಪಯೋಗವಾಗಲಿದೆ ಹಾಗೂ ಎಲ್ಲವಕ್ಕೂ ಲೆಕ್ಕವನ್ನು ಇಡಲಾಗಿದೆ. ದೇಣಿಗೆ ಸಂಗ್ರಹಿಸಿದ ಮನೆಯ ಸಂಖ್ಯೆ, ಸಹಿ ಪಡೆದು, ಪ್ಯಾನ್ ಸಂಖ್ಯೆಯನ್ನು ನಮೂದಿಸಲಾಗುತ್ತಿದೆ.
ಜೊತೆಗೆ ರಶೀದಿಯನ್ನು ಸಹ ಕೊಡಲಾಗುತ್ತಿದೆ. ಪಕ್ಷಾತೀತವಾಗಿ, ಜಾತ್ಯತೀತವಾಗಿ, ಧರ್ಮಾತೀತವಾಗಿ ದೇಣಿಗೆಯನ್ನು ಜನರು ಸ್ವಯಂಪ್ರೇರಿತರಾಗಿ ಕೊಡುತ್ತಿದ್ದಾರೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಹೀಗಾಗಿಯೇ ವಿರೋಧ ಪಕ್ಷದವರು ಹೇಳಿದಂತೆ ಶ್ರೀರಾಮಮಂದಿರಕ್ಕೆ ನೀಡಿದ ದೇಣಿಗೆಯ ಹಣ ದುರುಪಯೋಗವಾಗಿಲ್ಲ. ಖಂಡಿತವಾಗಿಯೂ ದೇಣಿಗೆಯ ಲೆಕ್ಕ ಸಿಗಲಿದೆ ಎಂದು ಸಹಕಾರ ಸಚಿವರಾದ ಎಸ್ ಟಿ ಸೋಮಶೇಖರ್ ತಿಳಿಸಿದರು.
