ಶ್ರೀಲಂಕಾದಲ್ಲಿ ದ್ರಾವಿಡ್ ಮಾರ್ಗದರ್ಶನದಲ್ಲಿ ಟೀಮ್ ಇಂಡಿಯಾದ ಅಭ್ಯಾಸ ಶುರು..!
ಹೆಡ್ ಕೋಚ್ ರಾಹುಲ್ ದ್ರಾವಿಡ್ ಮಾರ್ಗದರ್ಶನ ಮತ್ತು ಶಿಖರ್ ಧವನ್ ಸಾರಥ್ಯದ ಟೀಮ್ ಇಂಡಿಯಾ ಆಟಗಾರರು ಇಂದಿನಿಂದ ಶ್ರೀಲಂಕಾದಲ್ಲಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.
ಮೂರು ದಿನಗಳ ಕ್ವಾರಂಟೈನ್ ಮುಗಿಸಿದ ಟೀಮ್ ಇಂಡಿಯಾ ಆಟಗಾರರು ದ್ರಾವಿಡ್ ಮಾರ್ಗದರ್ಶನದಲ್ಲಿ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ.
ಶ್ರೀಲಂಕಾ ವಿರುದ್ಧ ಟೀಮ್ ಇಂಡಿಯಾ ಮೂರು ಏಕದಿನ ಮತ್ತು ಮೂರು ಟಿ-ಟ್ವೆಂಟಿ ಪಂದ್ಯಗಳನ್ನು ಆಡಲಿದೆ. ಮೊದಲ ಏಕದಿನ ಪಂದ್ಯ ಜುಲೈ 13ರಂದು ನಡೆಯಲಿದೆ. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಜೈವಿಕ ಸುರಕ್ಷತೆಯಡಿಯಲ್ಲಿ ಈ ಪಂದ್ಯಗಳು ನಡೆಯಲಿವೆ.
ಈ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಆರು ಮಂದಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಕ್ಕೆ ಎಂಟ್ರಿಕೊಡುವುದನ್ನು ಎದುರು ನೋಡುತ್ತಿದ್ದಾರೆ. ಚೇತನ್ ಸಕಾರಿಯಾ, ಕೆ. ಗೌತಮ್, ದೇವದತ್ ಪಡಿಕ್ಕಲ್, ನಿತೇಶ್ ರಾಣಾ, ವರುಣ್ ಚಕ್ರವರ್ತಿ ಮತ್ತು ರುತುರಾಜ್ ಗಾಯಕ್ವಾಡ್ ಅವರಿಗೆ ಇದು ಚೊಚ್ಚಲ ಏಕದಿನ ಮತ್ತು ಟಿ-ಟ್ವೆಂಟಿ ಸರಣಿಯಾಗಲಿದೆ.
ಇನ್ನುಳಿದಂತೆ ಯುವ ಬ್ಯಾಟ್ಸ್ ಮೆನ್ ಗಳಾದ ಪೃಥ್ವಿ ಶಾ, ಸಂಜು ಸಾಮ್ಸನ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶಾನ್ ಅವರಿಗೆ ಈ ಸರಣಿಗಳು ಹೆಚ್ಚು ಮಹತ್ವ ಪಡೆದುಕೊಂಡಿದೆ. ಅಕ್ಟೋಬರ್ ನವೆಂಬರ್ ನಲ್ಲಿ ನಡೆಯಲಿರುವ ಟಿ-ಟ್ವೆಂಟಿ ವಿಶ್ವಕಪ್ ನಲ್ಲಿ ಸ್ಥಾನ ಪಡೆದುಕೊಳ್ಳಲು ಯುವ ಬ್ಯಾಟ್ಸ್ ಮೆನ್ ಗಳು ಉತ್ತಮ ನಿರ್ವಹಣೆ ನೀಡಲೇಬೇಕಾಗಿದೆ.
ಶಿಖರ್ ಧವನ್ (ನಾಯಕ), ಭುವನೇಶ್ವರ್ ಕುಮಾರ್ (ಉಪನಾಯಕ), ಪೃಥ್ವಿ ಶಾ, ದೇವದತ್ ಪಡಿಕ್ಕಲ್, ರುತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶಾನ್, ಸಂಜು ಸಾಮ್ಸನ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ನಿತೇಶ್ ರಾಣಾ, ಯುಜುವೇಂದ್ರ ಚಾಹಲ್, ರಾಹುಲ್ ಚಾಹರ್, ಕೆ. ಗೌತಮ್, ಕೃನಾಲ್ ಪಾಂಡ್ಯ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ದೀಪಕ್ ಚಾಹರ್, ನವದೀಪ್ ಸೈನಿ, ಚೇತನ್ ಸಕಾರಿಯಾ.