2022ರ ವೇಳೆ ಶಿವಮೊಗ್ಗ, ಕಾರವಾರ ವಿಮಾನ ನಿಲ್ದಾಣಗಳು ಕಾರ್ಯಾರಂಭ
ಬೆಂಗಳೂರು : ರಾಜ್ಯದಲ್ಲಿ ಬೀದರ್, ಕಲಬುರಗಿ ವಿಮಾನ ನಿಲ್ದಾಣಗಳು ಕಾರ್ಯಾರಂಭ ಮಾಡಿದ್ದು, ಶಿವಮೊಗ್ಗ, ರಾಯಚೂರು, ವಿಜಯಪುರ, ಕಾರವಾರ ವಿಮಾನ ನಿಲ್ದಾಣಗಳು 2022ರ ವೇಳೆಗೆ ಆರಂಭಗೊಳ್ಳಲಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು, ಹಣಕಾಸು ಸಚಿವರೊಂದಿಗೆ ವರ್ಚುವಲ್ ಸಭೆ ನಡೆಸಿದರು.ಸಭೆಯಲ್ಲಿ ಬಂಡವಾಳ ಹೂಡಿಕೆ ಉತ್ತೇಜನ ಕಾರ್ಯತಂತ್ರ, ಹೂಡಿಕೆ ಆಕರ್ಷಿಸಲು ಸೂಕ್ತ ವಾತಾವರಣ ನಿರ್ಮಾಣ, ಕೋವಿಡ್ ನಂತರದ ಕಾಲಘಟ್ಟದಲ್ಲಿ ಸುಧಾರಣೆ ಆಧರಿತ ಉದ್ಯಮ ಪರಿಸ್ಥಿತಿ, ಅಭಿವೃದ್ಧಿಗೆ ಉತ್ತೇಜನ ಮತ್ತಿತರ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಮಾತನಾಡಿ, ಕೋವಿಡ್ ನಂತರವೂ ದೇಶದ ಆರ್ಥಿಕತೆಯಲ್ಲಿ ರಾಜ್ಯ ಮುಂಚೂಣಿ ಸ್ಥಾನ ಕಾಯ್ದುಕೊಂಡಿದೆ. ಮೂಲಸೌಕರ್ಯಾಭಿವೃದ್ಧಿ ಮತ್ತು ಬಂಡವಾಳ ಹೂಡಿಕೆ ಆಕರ್ಷಣೆಗೆ ನಿರಂತರವಾಗಿ ಕ್ರಮಕೈಗೊಂಡ ಹಿನ್ನಲೆಯಲ್ಲಿ ಕಳೆದ ವರ್ಷ ಅತಿ ಹೆಚ್ಚು ವಿದೇಶಿ ಬಂಡವಾಳ ಹರಿದು ಬಂದಿದೆ. ಭೂ ಸುಧಾರಣಾ ಕಾಯ್ದೆ, ಕಾರ್ಮಿಕ ಕಾಯ್ದೆ ತಿದ್ದುಪಡಿಗಳು , ಅಫಿಡವಿಡ್ ಆಧಾರಿತ ಅನುಮೋದನಾ ಪ್ರಕ್ರಿಯೆ ಮತ್ತಿತರ ಕ್ರಮಗಳಿಂದ ಕೈಗಾರಿಕಾ ಸ್ನೇಹಿ ವಾತಾವರಣ ನಿರ್ಮಾಣವಾಗಿದೆ ಎಂದು ವಿವರಣೆ ನೀಡಿದರು.