ಆರ್ ಸಿಬಿ ತಂಡವು ಪ್ರಸಕ್ತ ಐಪಿಎಲ್ ನಲ್ಲಿ ತಾನಾಡಿದ ಮೊದಲ ಪಂದ್ಯದಲ್ಲಿ ಬಲಿಷ್ಠ ಮುಂಬಯಿ ಇಂಡಿಯನ್ಸ್ ತಂಡವನ್ನು ಸೋಲಿಸಿ ಶುಭಾರಂಭ ಮಾಡಿದ್ದು, ಆತ್ಮವಿಶ್ವಾಸದಲ್ಲಿ ತೇಲುತ್ತಿದೆ. ಸದ್ಯ ಈ ತಂಡಕ್ಕೆ ಆಘಾತ ವ್ಯಕ್ತವಾಗಿದೆ.
ಆರ್ ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ರಜತ್ ಪಾಟಿದಾರ್ ಪಾದದ ನೋವಿನಿಂದಾಗಿ ಐಪಿಎಲ್ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಈ ಹಿಂದೆ ಪಾಟಿದಾರ್ ಐಪಿಎಲ್ನ ಮೊದಲಾರ್ಧದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ವರದಿಯಾಗಿತ್ತು. ಸದ್ಯ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಸಾಕಷ್ಟು ಸಮಯ ತೆಗೆದುಕೊಳ್ಳಲಿದೆ ಎಂದು ವೈದ್ಯರು ಹೇಳಿರುವ ಹಿನ್ನೆಲೆಯಲ್ಲಿ ಐಪಿಎಲ್ನಿಂದ ಹೊರಗುಳಿಯುವ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಕಳೆದ ಸೀಸನ್ ನ ಲ್ಲಿ ಆರ್ಸಿಬಿ ಪರ 3ನೇ ಕ್ರಮಾಂಕದಲ್ಲಿ ಆಡಿದ್ದ ರಜತ್ ಒಟ್ಟು 333 ರನ್ ಬಾರಿಸಿದ್ದರು. ಅಲ್ಲದೆ ಆರ್ಸಿಬಿ ಪರ ಅತ್ಯಧಿಕ ರನ್ ಕಲೆಹಾಕಿದ ಮೂರನೇ ಆಟಗಾರನಾಗಿ ಹೊರಹೊಮ್ಮಿದ್ದರು. ಪ್ರಮುಖ ಆಟಗಾರ ಹೊರಕ್ಕೆ ಉಳಿಯುತ್ತಿರುವುದು ತಂಡಕ್ಕೆ ಭಾರೀ ಹಿನ್ನಡೆ ಉಂಟು ಮಾಡಿದೆ.
ಈಗಾಗಲೇ ಮೊಣಕಾಲಿನ ನೋವಿನಿಂದ ಬಳಲುತ್ತಿರುವ ಜೋಶ್ ಹ್ಯಾಝಲ್ವುಡ್ ಐಪಿಎಲ್ನ ಮೊದಲಾರ್ಧದರಿಂದ ಹೊರಗುಳಿದಿದ್ದಾರೆ. ಹಾಗೆಯೇ ನ್ಯೂಜಿಲೆಂಡ್ ವಿರುದ್ಧ ಸರಣಿ ಆಡುತ್ತಿರುವ ಶ್ರೀಲಂಕಾದ ವನಿಂದು ಹಸರಂಗ ಕೂಡ ಆರ್ಸಿಬಿಯ ಕೆಲ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಇದರ ನಡುವೆ ರಜತ್ ಪಾಟಿದಾರ್ ಕೂಡ ಆರ್ಸಿಬಿ ತಂಡದಿಂದ ಹೊರಬಿದ್ದಿರುವುದು ತಂಡಕ್ಕೆ ಹಿನ್ನಡೆಯನ್ನುಂಟು ಮಾಡಬಹುದು.