ಹಾವೇರಿ: ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ಅಮಾನವೀಯ ಹಾಗೂ ಧರ್ಮನಿಂದನೆಯ ಘಟನೆಯೊಂದು ನಡೆದಿದ್ದು, ದೇವಸ್ಥಾನದ ಗರ್ಭಗುಡಿಯ ಎದುರೇ ಮೂತ್ರ ವಿಸರ್ಜನೆ ಮಾಡಿ ಉದ್ಧಟತನ ತೋರಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವಕನನ್ನು ಮಹಮದ್ ಜಾಫರ್ ಅಬ್ದುಲ್ ರೆಹಮಾನ್ ಕದರಮಂಡಲಿ ಎಂದು ಗುರುತಿಸಲಾಗಿದೆ. ಈ ಘಟನೆಯು ಸ್ಥಳೀಯವಾಗಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಹಿಂದೂ ಸಂಘಟನೆಗಳು ಕಠಿಣ ಕ್ರಮಕ್ಕೆ ಆಗ್ರಹಿಸಿವೆ.
ದೇವಸ್ಥಾನ ಮೈಲಿಗೆ ಮಾಡಿದ ಜಾಫರ್
ಶಿಗ್ಗಾವಿ ಪಟ್ಟಣದ ಟೆಂಪೋ ಸ್ಟ್ಯಾಂಡ್ ಬಳಿ ಇರುವ ಐತಿಹಾಸಿಕ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಈ ಕೃತ್ಯ ನಡೆದಿದೆ. ಆಗಸ್ಟ್ 20ರಂದು ರಾತ್ರಿ 10 ಗಂಟೆಯ ಸುಮಾರಿಗೆ ದೇವಸ್ಥಾನಕ್ಕೆ ನುಗ್ಗಿದ ಜಾಫರ್, ದೇವರ ಮೂರ್ತಿಯ ಎದುರೇ ಮೂತ್ರ ವಿಸರ್ಜನೆ ಮಾಡಿದ್ದಾನೆ. ಪವಿತ್ರ ಶ್ರಾವಣ ಮಾಸದ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯುತ್ತಿದ್ದು, ಭಕ್ತರು ದೇವಸ್ಥಾನವನ್ನು ಅತ್ಯಂತ ಸ್ವಚ್ಛವಾಗಿಟ್ಟುಕೊಂಡಿದ್ದರು. ಇಂತಹ ಪವಿತ್ರ ಸ್ಥಳದಲ್ಲಿ ಜಾಫರ್ ಮಾಡಿದ ಈ ಹೇಯ ಕೃತ್ಯ ಸ್ಥಳೀಯರ ಕಣ್ಣಿಗೆ ಬಿದ್ದಿದೆ.
ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿ
ಜಾಫರ್ ಈ ಕೃತ್ಯ ಎಸಗುತ್ತಿರುವುದನ್ನು ಗಮನಿಸಿದ ದೇವಸ್ಥಾನದ ಬಳಿ ಇದ್ದ ಭಕ್ತರು ಮತ್ತು ಸ್ಥಳೀಯರು ಕೂಡಲೇ ಆತನನ್ನು ಹಿಡಿದು ತರಾಟೆಗೆ ತೆಗೆದುಕೊಂಡಿದ್ದಾರೆ. ಪವಿತ್ರ ಸ್ಥಳವನ್ನು ಮೈಲಿಗೆ ಮಾಡಲು ನಿನಗೆಷ್ಟು ಧೈರ್ಯ ಎಂದು ಪ್ರಶ್ನಿಸಿದಾಗ, ಆರೋಪಿ ಅಲ್ಲಿಂದ ತಪ್ಪಿಸಿಕೊಂಡು ಓಡಲು ಪ್ರಯತ್ನಿಸಿದ್ದಾನೆ. ಆದರೆ ಜಾಗೃತ ನಾಗರಿಕರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸಿದ್ದಪ್ಪ ಶಿವಪ್ಪ ಕಾಳೆ ಎಂಬುವವರು ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಉದ್ದೇಶಪೂರ್ವಕವಾಗಿ ಹಿಂದೂಗಳ ಭಾವನೆಗೆ ಧಕ್ಕೆ ತರುವ ಮತ್ತು ಸಮಾಜದಲ್ಲಿ ಅಶಾಂತಿ ಮೂಡಿಸುವ ಉದ್ದೇಶದಿಂದಲೇ ಜಾಫರ್ ಈ ಕೃತ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರು ದಾಖಲಿಸಿಕೊಂಡ ಪೊಲೀಸರು ತಕ್ಷಣವೇ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ಘಟನೆಯ ಸುದ್ದಿ ಹರಡುತ್ತಿದ್ದಂತೆಯೇ ಶಿಗ್ಗಾವಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಹಿಂದೂ ಸಂಘಟನೆಗಳ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ರಾವಣ ಮಾಸದಲ್ಲಿ ದೇವಸ್ಥಾನವನ್ನು ಮೈಲಿಗೆ ಮಾಡಿರುವುದು ಕ್ಷಮಿಸಲಾರದ ಅಪರಾಧ. ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಲು ಪೊಲೀಸರಿಗೆ ಮನವಿ ಮಾಡಿದ್ದಾರೆ. ಸದ್ಯ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ಶಾಂತಿ ಕಾಪಾಡುವಂತೆ ಮನವಿ ಮಾಡಲಾಗಿದೆ.







