ಬೆಂಗಳೂರು : “ವೈದ್ಯಕೀಯ ಉಪಕರಣ ಖರೀದಿ ಅವ್ಯವಹಾರದ ದಾಖಲೆ ಮುರುಗೇಶ್ ನಿರಾಣಿ ಬಳಿ ಇದೆಯಂತೆ ಎಂಬ ಸಿದ್ದರಾಮಯ್ಯ ಅವರ ಟ್ವೀಟ್ ಗೆ ಸಚಿವ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಸ್ವತಃ ನಿರಾಣಿಯವರೇ ಇದನ್ನು ನಿರಾಕರಿಸಿರುವಾಗ ಸಿದ್ದರಾಮಯ್ಯನವರಿಗೆ ಪ್ರಶ್ನಿಸುವ ಅಧಿಕಾರವೇ ಇಲ್ಲ ಎಂದಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ಖರೀದಿಸಿರುವ ವೈದ್ಯಕೀಯ ಪರಿಕರಗಳಲ್ಲಿ ಹಗರಣ ನಡೆದಿರುವುದಕ್ಕೆ ದಾಖಲೆಗಳು ಸಿದ್ದರಾಮಯ್ಯನವರ ಬಳಿ ಇದ್ದರೆ ಅದನ್ನು ಬಹಿರಂಗಪಡಿಸಲು ತಡವೇಕೆ ಎಂದು ಪ್ರಶ್ನಿಸಿದರು.
ಪರಿಕರಗಳ ಖರೀದಿಯಲ್ಲಿ ಒಂದೇ ಒಂದು ನಯಾಪೈಸೆ ಭ್ರಷ್ಟಾಚಾರ ನಡೆದಿಲ್ಲ. ಎಲ್ಲವೂ ಪಾರದರ್ಶಕವಾಗಿಯೇ ನಡೆದಿದೆ. ಸಿದ್ದರಾಮಯ್ಯನವರು ಕೇವಲ ಆರೋಪ ಮಾಡಬೇಕೆಂಬ ಕಾರಣಕ್ಕಾಗಿ ಆಧಾರರಹಿತ ಆರೋಪ ಮಾಡಿದ್ದಾರೆ. ನಮ್ಮ ಪಕ್ಷದ ಮುಖಂಡರಾದ ಮುರುಗೇಶ್ ನಿರಾಣಿ ಬಳಿ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ಪೆನ್ ಡ್ರೈವ್ ಇಲ್ಲ ಎಂದು ಅವರೇ ಸ್ಪಷ್ಟಪಡಿಸಿದ್ದಾರೆ ಎಂದು ಅಶೋಕ್ ಹೇಳಿದರು.
ಇದೇ ವೇಳೆ ಸಿದ್ದು ಟ್ವೀಟ್ ಬಗ್ಗೆ ಮಾತನಾಡಿದ ಅಶೋಕ್, ಸಾರ್ವಜನಿಕ ಲೆಕ್ಕ ಸಮಿತಿ ನಡಾವಳಿಯಲ್ಲಿ ಇದನ್ನು ಪ್ರಸ್ತಾಪ ಮಾಡಲಾಗಿದ್ದು, ಸಿದ್ದರಾಮಯ್ಯನವರು ಇದನ್ನು ಟ್ವಿಟ್ಟರ್ ನಲ್ಲಿ ಹಾಕಿಕೊಂಡಿದ್ದಾರೆ. ಸ್ವತಃ ನಿರಾಣಿಯವರೇ ಇದನ್ನು ನಿರಾಕರಿಸಿರುವಾಗ ಸಿದ್ದರಾಮಯ್ಯನವರಿಗೆ ಪ್ರಶ್ನಿಸುವ ಅಧಿಕಾರವೇ ಇಲ್ಲ ಎಂದರು.








