ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಹೊಸ ಸಂಚಲನ ಮೂಡಿಸಿದೆ. ವಿರೋಧ ಪಕ್ಷಗಳ ನಾಯಕರಿಗೆ ತಿರುಗೇಟು ನೀಡುವ ಭರದಲ್ಲಿ ಸಿಎಂ ಆಡಿರುವ ಮಾತುಗಳು ಅಧಿಕಾರ ಹಸ್ತಾಂತರದ ಮುನ್ಸೂಚನೆಯೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ನಾಯಕತ್ವ ಬದಲಾವಣೆ ಪಕ್ಕಾನಾ
ಒಂದೆಡೆ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ನನ್ನ ತಂದೆಯೇ ಐದು ವರ್ಷ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಹೇಳಿಕೆ ನೀಡುತ್ತಿದ್ದರೆ, ಇತ್ತ ಸ್ವತಃ ಸಿದ್ದರಾಮಯ್ಯ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಯೇ ಇರುತ್ತಾರೆ ಹಾಗೂ ಈ ಅವಧಿಯನ್ನು ಕಾಂಗ್ರೆಸ್ ಪಕ್ಷವೇ ಪೂರ್ಣಗೊಳಿಸಲಿದೆ ಎಂದು ಸಿಎಂ ಹೇಳಿದ್ದಾರೆ. ಇಲ್ಲಿ ಗಮನಿಸಬೇಕಾದ ಸೂಕ್ಷ್ಮ ವಿಚಾರವೇನೆಂದರೆ, ಸಿದ್ದರಾಮಯ್ಯ ಅವರು ಎಲ್ಲಿಯೂ ನಾನೇ ಪೂರ್ಣಾವಧಿ ಮುಖ್ಯಮಂತ್ರಿ ಎಂದು ಉಲ್ಲೇಖಿಸಿಲ್ಲ. ಇದು ಡಿಕೆ ಶಿವಕುಮಾರ್ ಅವರಿಗೆ ಅಧಿಕಾರ ಬಿಟ್ಟುಕೊಡುವ ಮನಸ್ಸು ಮಾಡಿರುವ ಲಕ್ಷಣವೇ ಎಂಬ ಗುಸುಗುಸು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿದೆ.
ಹಾಲು ಜೇನಿನಂತಹ ಸಂಬಂಧಕ್ಕೆ ಹುಳಿ ಹಿಂಡಬೇಡಿ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ಆರ್.ಅಶೋಕ್ ಮತ್ತು ಎಚ್.ಡಿ.ಕುಮಾರಸ್ವಾಮಿ ಮಾಡಿದ್ದ ಆರೋಪಕ್ಕೆ ಸಿಎಂ ಖಡಕ್ ಆಗಿ ಉತ್ತರಿಸಿದ್ದಾರೆ. ವಿರೋಧ ಪಕ್ಷದ ನಾಯಕರು ನಿರುದ್ಯೋಗಿಗಳಾಗಿದ್ದು, ನನ್ನ ಮತ್ತು ಡಿಕೆಶಿ ನಡುವಿನ ಸಂಬಂಧಕ್ಕೆ ಹುಳಿ ಹಿಂಡಲು ಯತ್ನಿಸುತ್ತಿದ್ದಾರೆ. ನಮ್ಮದು ಹಾಲು-ಜೇನಿನಂತಹ ಸಂಬಂಧ. ನಿಮ್ಮ ಪ್ರಯತ್ನದಿಂದ ನಿಮ್ಮೊಳಗಿನ ಅಸೂಯೆ ಹೊರಬರುತ್ತದೆಯೇ ಹೊರತು ನಮ್ಮ ಸಂಬಂಧ ಕೆಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ಹೈಕಮಾಂಡ್ ಮಾತೇ ಅಂತಿಮ
ತಾವು ಮತ್ತು ಡಿಕೆ ಶಿವಕುಮಾರ್ ಇಬ್ಬರೂ ಹೈಕಮಾಂಡ್ ಆದೇಶಕ್ಕೆ ತಲೆಬಾಗುವವರು ಎಂಬುದನ್ನು ಸಿಎಂ ಪುನರುಚ್ಚರಿಸಿದ್ದಾರೆ. ನಮ್ಮ ಶಾಸಕರು ಯಾರೂ ನನ್ನ ಅಥವಾ ಡಿಕೆಶಿ ಬೆಂಬಲಿಗರಲ್ಲ, ಎಲ್ಲರೂ ಕಾಂಗ್ರೆಸ್ ಪಕ್ಷದ ಬೆಂಬಲಿಗರು. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸುಳ್ಳು ಸುದ್ದಿ ಹಬ್ಬಿಸಿ ಡಿಕೆಶಿಯನ್ನು ಒಲಿಸಿಕೊಳ್ಳುವ ಹಗಲುಗನಸು ಕಾಣುತ್ತಿದ್ದಾರೆ. ಎಷ್ಟೇ ಕಷ್ಟ ಬಂದರೂ ಡಿಕೆ ಶಿವಕುಮಾರ್ ಪಕ್ಷಕ್ಕೆ ನಿಷ್ಠರಾಗಿ ಉಳಿದವರು ಎಂದು ಸಿಎಂ ವಿಪಕ್ಷಗಳಿಗೆ ಟಾಂಗ್ ನೀಡಿದ್ದಾರೆ.
ಗೂಢಚರ್ಯೆ ಸಂಸ್ಕೃತಿ ನಿಮ್ಮದು
ಫೋನ್ ಟ್ಯಾಪಿಂಗ್ ವಿಚಾರವಾಗಿ ತಿರುಗೇಟು ನೀಡಿರುವ ಸಿಎಂ, ಕುಮಾರಸ್ವಾಮಿ ಸಿಎಂ ಆಗಿದ್ದಾಗ ಆದಿಚುಂಚನಗಿರಿ ಶ್ರೀಗಳ ಫೋನ್ ಟ್ಯಾಪ್ ಮಾಡಲಾಗಿತ್ತು ಎಂದು ಸ್ವತಃ ಬಿವೈ ವಿಜಯೇಂದ್ರ ಆರೋಪಿಸಿದ್ದನ್ನು ನೆನಪಿಸಿದ್ದಾರೆ. ಬಿಜೆಪಿಯ ಆಪರೇಷನ್ ಕಮಲ, ರೆಸಾರ್ಟ್ ರಾಜಕಾರಣ ಮತ್ತು ಜೆಡಿಎಸ್ ನ ದ್ವೇಷ ರಾಜಕಾರಣದಿಂದಲೇ ರಾಜ್ಯ ಹಿಂದೆ ಅಸ್ಥಿರತೆ ಕಂಡಿತ್ತು. ಆದರೆ ಈಗ ಜನಾದೇಶ ನಮ್ಮ ಪರವಾಗಿದೆ. ವಿಪಕ್ಷಗಳ ಕುತಂತ್ರ, ಕುಚೇಷ್ಟೆಗಳ ನಡುವೆಯೂ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿರುತ್ತದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ವಿಪಕ್ಷಗಳ ಆರೋಪಕ್ಕೆ ಉತ್ತರಿಸಲು ಹೋದ ಮುಖ್ಯಮಂತ್ರಿಗಳು, ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಯೇ ಇರುತ್ತಾರೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಕುರ್ಚಿ ಬದಲಾವಣೆಯ ಸುಳಿವು ನೀಡಿದರಾ ಎಂಬುದು ಸದ್ಯದ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.








