ಜೆಡಿಎಸ್ ಗೆ ಚೂರಿ ಹಾಕಿದ `ಸಿದ್ದರಾಮಯ್ಯ ಹೀರೋ ಅಲ್ಲ ವಿಲನ್’ : ಹೆಚ್.ಡಿ.ಕುಮಾರಸ್ವಾಮಿ
Siddaramaiah is not a hero : H D Kumaraswamy
ಬೆಂಗಳೂರು : ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಹಾಗೂ ಹೆಚ್ ಡಿ ಕುಮಾರಸ್ವಾಮಿ ನಡುವೆ ಹೀರೋ ವಿಲನ್ ವಾಗ್ಯುದ್ಧ ಮುಂದುವರಿದಿದೆ. ರಾಜರಾಜೇಶ್ವರಿ ನಗರ ಕ್ಷೇತ್ರದ ವ್ಯಾಪ್ತಿಯಲ್ಲಿ ಜೆಡಿಎಸ್ ಅಭ್ಯರ್ಥಿ ವಿ ಕೃಷ್ಣಮೂರ್ತಿ ಪರ ಹೆಚ್ ಡಿ ಕುಮಾರಸ್ವಾಮಿ ಪ್ರಚಾರ ನಡೆಸಿದರು.
ಈ ವೇಳೆ ಜನರನ್ನುದ್ದೇಶಿಸಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದರು. ಈಗ ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ಹೇಳುವ ನಾಯಕರೇ ಈ ಹಿಂದೆ ಅವರಪ್ಪನಾಣೆ ನಾನು ಮುಖ್ಯಮಂತ್ರಿ ಆಗಲ್ಲ ಅಂತಾ ಹೇಳಿದ್ದರು.
ಆದರೆ, ಅವರೇ 2018ರಲ್ಲಿ ನಮ್ಮ ಮನೆ ಬಾಗಿಲಿಗೆ ಬಂದು ನೀವೇ ಮುಖ್ಯಮಂತ್ರಿಯಾಗಿ ಎಂದು ದುಂಬಾಲು ಬಿದ್ದಿದ್ದನ್ನು ಇಡೀ ರಾಜ್ಯ ನೋಡಿದೆ.
ಜೆಡಿಎಸ್ ಪಕ್ಷದಿಂದ ಬೆಳೆದು ಬೆನ್ನಿಗೆ ಚೂರಿ ಹಾಕಿದ ಸಿದ್ದರಾಮಯ್ಯ ಜೆಡಿಎಸ್ ಪಕ್ಷಕ್ಕೆ ಹೀರೋ ಆಗಲು ಸಾಧ್ಯವೇ ಇಲ್ಲ. ಅವರು ಎಂದಿಗೂ ವಿಲನ್. ಕಾಂಗ್ರೆಸ್ ಪಕ್ಷದ ಒಂದು ವರ್ಗಕ್ಕೂ ಸಿದ್ದರಾಮಯ್ಯ ವಿಲನ್ ಆಗಿದ್ದಾರೆ.
ಮುಂದೆ ಸಿದ್ದರಾಮಯ್ಯ ಅವರೇ ಕಾಂಗ್ರೆಸ್ ನಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತ ಸ್ಥಿತಿಗೆ ಬರುವ ಕಾಲ ಬಹಳ ದೂರವಿಲ್ಲ ಎಂದು ವ್ಯಂಗ್ಯವಾಡಿದರು.
ಇದನ್ನೂ ಓದಿ : ಯಡಿಯೂರಪ್ಪ ಮತ್ತು ಮೋದಿ ಎಳೆ ಕಡಸುಗಳಾ? : ಸಿದ್ದರಾಮಯ್ಯ
ತಮ್ಮ ಸಭೆಗೆ ಅಡ್ಡಿಪಡಿಸಿದವರನ್ನು ಬಂಧಿಸಿ ಎಂದು ರಾತ್ರಿವರೆಗೂ ಪ್ರತಿಭಟನೆ ನಡೆಸುವ ಕಾಂಗ್ರೆಸ್ ನಾಯಕರು, ಡಿಜೆ.ಹಳ್ಳಿ, ಕೆಜಿ.ಹಳ್ಳಿ ಗಲಭೆಯಲ್ಲಿ ತಮ್ಮ ಶಾಸಕರ ಮನೆ, ಪೊಲೀಸ್ ಠಾಣೆ ಸುಟ್ಟವರನ್ನು ಬಂಧಿಸಿ ಎಂದು ಧರಣಿ ನಡೆಸಬೇಕಿತ್ತು. ಯಾಕೆ ಪ್ರತಿಭಟನೆ ನಡೆಸಿಲ್ಲ ಎಂದು ಪ್ರಶ್ನಿಸಿದರು.
ಈ ಸಂದರ್ಭ ದಲ್ಲಿ ಜೆಡಿಎಸ್ ಅಭ್ಯರ್ಥಿ ವಿ. ಕೃಷ್ಣಮೂರ್ತಿ, ಮಳವಳ್ಳಿ ಶಾಸಕ ಅನ್ನದಾನಿ, ಪರಿಷತ್ ಸದಸ್ಯ ರಮೇಶ್ ಗೌಡ, ಮಾಜಿ ಪರಿಷತ್ ಸದಸ್ಯ ಟಿ.ಎನ್.ಶರವಣ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಸೇರಿ ಅನೇಕ ಮುಖಂಡರಿದ್ದರು.
ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ : ಸಿದ್ದರಾಮಯ್ಯ ಹೇಳಿದ್ದೇನು..?
ಅಕ್ಟೋಬರ್ 4 ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಿದ್ದರಾಮಯ್ಯ, “ಮೊನ್ನೆ ಯಾಕೋ ಕುಮಾರಸ್ವಾಮಿ ಶಿರಾಗೆ ಬಂದು ಅಳ್ತಾ ಇದ್ನಪ್ಪ. ವಿಷ ಕೊಡಿ ಮತ್ತೊಂದು ಕೊಡಿ ಅಂತಿದ್ದ.
ಇದೇನು ಹೊಸತಲ್ಲ ದೇವೇಗೌಡರ ಕಾಲದಿಂದಲೂ ಹೀಗೆ ನಡೆದುಕೊಂಡು ಬಂದಿದೆ. ಕಮಾರಸ್ವಾಮಿ ಅದನ್ನು ಮುಂದುವರಿಸಿದ್ದಾರೆ ಅಷ್ಟೇ. ನನ್ನ ಪ್ರಕಾರ ಜೆಡಿಎಸ್ ಒಂದು ಪಕ್ಷವೇ ಅಲ್ಲ.
ರಾಜಕೀಯದಲ್ಲಿ ಜನ ಸೇವೆ ಮಾಡಬೇಕು. ಅದನ್ನು ಬಿಟ್ಟು ವಿಷ ಕೊಡಿ ಎಂಬುದು ರಾಜಕಾರಣನಾ? ಜನರೇ ಆಶೀರ್ವಾದ ಮಾಡಬೇಕು. ನಾವೇ ಕೇಳಿಕೊಳ್ಳಬಾರದು.
ಇದನ್ನೂ ಓದಿ : ಗೂಂಡಾಗಿರಿಗೆ ನಾವು ಹೆದರುವವರಲ್ಲ.. ಹುಷಾರ್ ! : ಸಿದ್ದರಾಮಯ್ಯ
ಜೆಡಿಎಸ್ ಅವರು ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ ಆರ್ ಆರ್ ನಗರ ಕ್ಷೇತ್ರದಲ್ಲಿ ಎಚ್ಚರಿಕೆಯಿಂದ ಇರಬೇಕು. ಆ ಗಿರಾಕಿಗಳು ಯಾವಾಗ ಬೇಕಿದ್ದರೂ ಮೈತ್ರಿ ಮಾಡಿಕೊಳ್ಳುತ್ತಾರೆ. ಜೆಡಿಎಸ್ ನವರು ಯಾವತ್ತು ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬರಲ್ಲ.
ಅವರು ಬೇರೆಯವರ ಹೆಗಲ ಮೇಲೆ ಕುಳಿತು ಆಡಳಿತ ನಡೆಸುವವರು. ಜೆಡಿಎಸ್ ನವರು ಭಾವನಾತ್ಮಕವಾಗಿ ವೋಟ್ ಕೇಳುತ್ತಾರೆ. ಈ ಬಾರಿಯ ಚುನಾವಣೆಯಲ್ಲಿ ನಮಗೂ ಬಿಜೆಪಿಗೂ ನೇರಾ ಪೈಪೋಟಿ. ಜೆಡಿಎಸ್ ಈ ಬಾರಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ವ್ಯಂಗ್ಯವಾಡಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel