ಸಿದ್ದರಾಮಯ್ಯರ ಕಾಮಾಲೆ ಕಣ್ಣಿಗೆ ಕಂಡಿದ್ದೆಲ್ಲ ಹಳದಿ : ನಳಿನ್ ಕುಮಾರ್ ಕಟೀಲ್
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ “ಕಾಮಾಲೆ ಕಣ್ಣಿಗೆ ಕಂಡಿದ್ದೆಲ್ಲ ಹಳದಿ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟೀಕಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಕೋವಿಡ್ ಮತ್ತು ಕೋವಿಡೋತ್ತರ ಸಂದರ್ಭಗಳಲ್ಲಿ ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ.
ಅವರ ಕಾರ್ಯವೈಖರಿಯನ್ನು ದೇಶದ ಜನರು ಮತ್ತು ವಿಶ್ವದ ನಾಯಕರು ಮೆಚ್ಚಿಕೊಂಡಿದ್ದಾರೆ. ಅದಕ್ಕಾಗಿಯೇ ಅವರಿಗೆ ಹತ್ತಾರು ಪ್ರಶಸ್ತಿಗಳು ಒಲಿದುಬಂದಿವೆ.
ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ನೆಲಕಚ್ಚಿರುವುದು ಮಾತ್ರವಲ್ಲದೆ, ತಾವೂ ಸೋತಿದ್ದರಿಂದ ಸಿದ್ದರಾಮಯ್ಯ ಅವರು ಇಂಥ ವಿವೇಚನಾರಹಿತ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ಕಟೀಲ್ ತಿಳಿಸಿದ್ದಾರೆ.
ರಾಜ್ಯದಲ್ಲೂ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸರಕಾರವು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ.
ಇದು ಉಪ ಚುನಾವಣೆಗಳು, ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಗೆಲುವಿನ ಮೂಲಕ ಸಾಬೀತಾಗಿದೆ.
ಸತತ ಸೋಲಿನಿಂದ ಕಂಗೆಟ್ಟಿರುವ ಸಿದ್ದರಾಮಯ್ಯ ಅವರು ಇಂದು ನರೇಂದ್ರ ಮೋದಿ ಅವರ ಕುರಿತು ಹತಾಶೆಯಿಂದ ಈ ಟೀಕೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.