Siddaramaiah: ಸಿದ್ರಾಮುಲ್ಲಾಖಾನ್ ಬಿಜೆಪಿಯ ಚಾರಿತ್ರ್ಯಹನನದ ರಾಜಕೀಯ ಸರಕು – ಸಿದ್ದರಾಮಯ್ಯ…
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನ ಸಿದ್ರಾಮುಲ್ಲಾಖಾನ್ ಎಂದು ಹೆಸರು ಬದಲಿಸಿ ಕರೆದ ಬಿಜೆಪಿ ಕರ್ನಾಟಕದ ಮಾತಿಗೆ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯ ಟ್ವೀಟ್ ಮಾಡಿ “ಸುಳ್ಳು, ಅಪಪ್ರಚಾರ ಮತ್ತು ಚಾರಿತ್ರ್ಯಹನನವನ್ನೇ ರಾಜಕೀಯ ಪ್ರಚಾರದ ಸರಕನ್ನಾಗಿ ಮಾಡಿಕೊಂಡ ಬಿಜೆಪಿ ಕರ್ನಾಟಕ ನನ್ನ ಹೆಸರಿಗೆ ಮುಸ್ಲಿಂ ಹೆಸರು ಸೇರಿಸಿ ನಡೆಸುತ್ತಿರುವ ಅಪಪ್ರಚಾರದಲ್ಲಿ ಅಚ್ಚರಿಪಡುವಂತಹದ್ದೇನಿಲ್ಲ.
ಶೂನ್ಯ ಸಾಧನೆ, ಭ್ರಷ್ಟಾಚಾರ, ಅನಾಚಾರಗಳ ಮಸಿ ಬಳಿದುಕೊಂಡ ಮುಖ ತೋರಿಸಿ ಮತಯಾಚನೆ ಮಾಡಲಿಕ್ಕಾಗುತ್ತದೆಯೇ? ಮೈತುಂಬ ಕಪ್ಪು ಬಳಿದುಕೊಂಡ ದುಷ್ಟರಿಗೆ ಬಿಳಿಬಟ್ಟೆ ನೋಡಿದಾಕ್ಷಣ ಕಪ್ಪು ಬಳಿಯೋಣ ಎಂದು ಮನಸ್ಸಾಗುವುದು ಸಹಜ ಗುಣ. ಇದು ಅವರ ಸೋಲು, ಹತಾಶೆ ಮತ್ತು ಅಸಹಾಯಕತೆಯನ್ನು ಸೂಚಿಸುತ್ತದೆ. ಒಂದು ಕಾಲದಲ್ಲಿ ಒಂದಷ್ಟು ಸಭ್ಯಸ್ಥರು ಇದ್ದ ಬಿಜೆಪಿ ಕರ್ನಾಟಕ ಇಂತಹ ನೈತಿಕ ಅಧ:ಪತನಕ್ಕೆ ಬಿದ್ದಿರುವುದರ ಬಗ್ಗೆ ಎಲ್ಲರೂ ಸಂತಾಪ ಸೂಚಿಸೋಣ.
ಸಿದ್ರಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಂ ಹೆಸರು ಸೇರಿಸಿರುವ ಬಗ್ಗೆ ನನಗೇನು ಬೇಸರವಿಲ್ಲ. ಗೋವಿಂದ ಭಟ್ಟರ ಶಿಷ್ಯರಾದ ಶಿಶುನಾಳ ಷರೀಪ್, ಸಂತ ರಮಾನಂದರ ಶಿಷ್ಯರಾದ ಕವಿ ಕಬೀರರ ಪರಂಪರೆ ನಮ್ಮದು. ಆದ್ದರಿಂದ ಮುಸ್ಲಿಂ ಹೆಸರನ್ನು ನನ್ನ ಹೆಸರಿಗೆ ಜೋಡಿಸಿ ಜಾತ್ಯತೀತತೆಯ ನನ್ನ ನಂಬಿಕೆಯನ್ನು ಪುರಸ್ಕರಿಸಿದ್ದಾರೆ.
ಮುಖ್ಯಮಂತ್ರಿಯಾಗಿ ಜನರಿಗಾಗಿ ಮಾಡಿರುವ ಸೇವೆಯನ್ನು ಗುರುತಿಸಿ ಬಹಳಷ್ಟು ಜನ ನನ್ನನ್ನು ‘ಅನ್ನರಾಮಯ್ಯ’, ರೈತರಾಮಯ್ಯ, ಕನ್ನಡ ರಾಮಯ್ಯ, ದಲಿತರಾಮಯ್ಯ ಎಂದೆಲ್ಲಾ ಕರೆಯುತ್ತಾರೆ. ಅದೇ ರೀತಿ ಮುಸ್ಲಿಂ ಸಮುದಾಯಕ್ಕೆ ಮಾಡಿರುವ ಕೆಲಸವನ್ನು ಗುರುತಿಸಿ ನನ್ನನ್ನು ‘ಸಿದ್ರಮುಲ್ಲಾ ಖಾನ್’ ಎಂದು ಕರೆದರೆ ಅದಕ್ಕೂ ಖುಷಿಪಡುವೆ.
ಹಿಂದೂ ಕೋಮುವಾದದಷ್ಟೇ ಸ್ಪಷ್ಟತೆ ಮತ್ತು ಬದ್ಧತೆಯಿಂದ ನಾನು ಮುಸ್ಲಿಂ ಮತ್ತಿತರ ಧರ್ಮಗಳ ಕೋಮುವಾದವನ್ನೂ ವಿರೋಧಿಸುತ್ತಾ ಬಂದಿದ್ದೇನೆ. ಬಿಜೆಪಿ ಕರ್ನಾಟಕ ರೀತಿಯಲ್ಲಿ ರಾಜಕೀಯ ಕಾರಣಕ್ಕಾಗಿ ಒಳ್ಳೆಯವರು-ಕೆಟ್ಟವರು ಎಂಬ ಭೇದವಿಲ್ಲದೆ ಸಾರಾಸಗಟಾಗಿ ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡ ಕೋಮುವಾದದ ರಾಜಕೀಯವನ್ನು ನಾನು ಮಾಡಿದವನಲ್ಲ.
ಮುಸ್ಲಿಂ ಬಂಧುಗಳ ಮೂಲಭೂತ ಅವಶ್ಯಕತೆಗಳಾದ ಭದ್ರತೆ, ಶಿಕ್ಷಣ, ಆರೋಗ್ಯ, ಉದ್ಯೋಗಳನ್ನು ಒದಗಿಸಲು ಮುಂಗಡಪತ್ರದಲ್ಲಿ ನ್ಯಾಯಬದ್ಧವಾದ ಪಾಲನ್ನು ಎತ್ತಿಟ್ಟು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದ್ದೇನೆ. ಈ ಬಗ್ಗೆ ನನಗೆ ಹೆಮ್ಮೆಯೂ ಇದೆ, ಅಭಿಮಾನವೂ ಇದೆ.
ಟಿಪ್ಪು ಸುಲ್ತಾನ ಜಯಂತಿಯನ್ನು ವಿವಾದವನ್ನಾಗಿ ಮಾಡಿ ಕರ್ನಾಟಕ ಬಿಜೆಪಿ ಹುಟ್ಟುಹಾಕಿದ ವಿವಾದ ಮತ್ತು ಗಲಭೆಗಳು ರಾಜಕೀಯ ಪ್ರೇರಿತವಾದುದು ಎಂದು ರಾಜ್ಯದ ಜನರಿಗೆ ಮನದಟ್ಟಾಗಿದೆ. ಬಿಜೆಪಿಯ ಮುಖ್ಯಮಂತ್ರಿಗಳಿಂದ ಹಿಡಿದು ಸಚಿವ-ಶಾಸಕರ ವರೆಗೆ ಎಲ್ಲರೂ ಬಗೆಬಗೆಯ ವೇಷಧರಿಸಿ ಟಿಪ್ಪು ಜಯಂತಿ ಆಚರಿಸಿರುವುದನ್ನು ಜನ ನೋಡಿದ್ದಾರೆ.
ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಆಗಿದ್ದಾಗ ಟಿಪ್ಪುವಿನ ಬಗ್ಗೆ 400 ಪುಟಗಳ ಪುಸ್ತಕ ಬರೆಸುವ ಜೊತೆಗೆ ಟಿಪ್ಪುವನ್ನು ಕೊಂಡಾಡಿ ಮುನ್ನುಡಿಯನ್ನೂ ಬರೆದಿದ್ದರು. ವಿಧಾನಮಂಡಲದ ವಜ್ರಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ತಮ್ಮ ಭಾಷಣದಲ್ಲಿ ಟಿಪ್ಪು ಸುಲ್ತಾನನ ಸಾಧನೆಗಳನ್ನು ಉಲ್ಲೇಖಿಸಿ ಶ್ಲಾಘಿಸಿದ್ದರು.
ನಾನು ಮುಖ್ಯಮಂತ್ರಿಯಾಗಿದ್ದಾಗ ಹಿಂದೂ ಯುವಕರ ಕೊಲೆ ನಡೆದಿತ್ತು ಎಂಬ ಸುಳ್ಳು ಪ್ರಚಾರವನ್ನೂ ಬಿಜೆಪಿ ನಡೆಸುತ್ತಿದೆ. ಶೋಭ ಕರಂದ್ಲಾಜೆ ಅವರು ರಾಜ್ಯದಲ್ಲಿ 24 ಹಿಂದೂಗಳ ಹತ್ಯೆಗಳು ನಡೆದಿವೆ ಎಂದು ಕೇಂದ್ರ ಗೃಹಸಚಿವರಾದ ರಾಜ್ ನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದರು. ಅದರಲ್ಲಿ ಜೀವಂತವಿದ್ದ ವ್ಯಕ್ತಿಯ ಹೆಸರನ್ನೂ ಸೇರಿಸಲಾಗಿತ್ತು.
ಬಿಜೆಪಿಯವರು ಹೇಳುತ್ತಿರುವ ಹನ್ನೊಂದು ಹಿಂದೂಗಳ ಹತ್ಯೆಯಲ್ಲಿ ಆರೋಪಿಗಳಾಗಿದ್ದವರು ಎಸ್ಡಿಪಿಐ ಮತ್ತು ಪಿಎಫ್ಐ ಸದಸ್ಯರು. ಅವರ ವಿರುದ್ಧ ಪ್ರಕರಣ ದಾಖಲಿಸಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಪರೇಶ್ ಮೇಸ್ತಾ ಎಂಬ ಯುವಕನ ಸಾವು ಹತ್ಯೆಯಲ್ಲ ಎಂದು ಸಿಬಿಐ ಇತ್ತೀಚೆಗೆ ಹೇಳಿರುವುದು ಬಿಜೆಪಿ ಕರ್ನಾಟಕ ಸುಳ್ಳುಗಳನ್ನು ಬಯಲುಮಾಡಿದೆ.
ನಮ್ಮ ಸರ್ಕಾರದ ಅವಧಿಯಲ್ಲಿ 11 ಮುಸ್ಲಿಂ ಯುವಕರ ಹತ್ಯೆಯೂ ನಡೆದಿತ್ತು. ಈ ಹತ್ಯೆಗಳ ಎಲ್ಲ ಆರೋಪಿಗಳು ಬಜರಂಗದಳ ಮತ್ತಿತರ ಸಂಘಪರಿವಾರದ ಸಂಘಟನೆಗಳ ಕಾರ್ಯಕರ್ತರಾಗಿದ್ದಾರೆ. ಅವರ ವಿರುದ್ಧವೂ ಪ್ರಕರಣಗಳನ್ನು ದಾಖಲಿಸಿತ್ತು. ಈ ಪ್ರಕರಣಗಳ ಸಮಗ್ರ ಮಾಹಿತಿಯನ್ನು ಅಂದಿನ ಗೃಹಸಚಿವರಾಗಿದ್ದ ರಾಮಲಿಂಗಾ ರೆಡ್ಡಿ ಅವರು ಪುಸ್ತಕ ರೂಪದಲ್ಲಿ ಪ್ರಕಟಿಸಿದ್ದಾರೆ.
ಕರ್ನಾಟಕದ ಜನತೆ ಪ್ರಜ್ಞಾವಂತರಿದ್ದಾರೆ, ಸರಿ-ತಪ್ಪುಗಳನ್ನು ಅರ್ಥಮಾಡಿಕೊಳ್ಳುವಷ್ಟು ವಿವೇಕವುಳ್ಳವರಾಗಿದ್ದಾರೆ. ಆದ್ದರಿಂದ ಅಪಪ್ರಚಾರ ನಡೆಸಿದಷ್ಟು ಅಪಪ್ರಚಾರ ನಡೆಸಿದವರೇ ರಾಜ್ಯದ ಜನರ ಮುಂದೆ ಬತ್ತಲಾಗುತ್ತಾರೆ ಎನ್ನುವುದು ನನಗೆ ಗೊತ್ತು.
ನನ್ನ ವಿರುದ್ಧದ ಅಪಪ್ರಚಾರವನ್ನು ನಿಲ್ಲಿಸಬೇಕೆಂದು ನಾನೇನು ಮನವಿ ಮಾಡುವುದಿಲ್ಲ. ಆದರೆ ಇಂತಹ ಅಪಪ್ರಚಾರಗಳಿಗೆ ಹೆದರಿ ಬಿಜೆಪಿ ಸರ್ಕಾರದ ದುರಾಡಳಿತ, ಭ್ರಷ್ಟಾಚಾರ ಮತ್ತು ಕೋಮುವಾದದ ರಾಜಕಾರಣದ ವಿರುದ್ಧದ ನನ್ನ ಹೋರಾಟವನ್ನು ನಾನು ನಿಲ್ಲಿಸುತ್ತೇನೆ ಎಂದು ತಿಳಿದುಕೊಂಡರೆ ಅದು ಮೂರ್ಖತನ ಅಷ್ಟೆ ಎಂದು ಟ್ವೀಟ್ ಮಾಡಿದ್ದಾರೆ.
Siddaramaiah : Siddramaullah Khan is the political commodity of BJP’s character assassination – Siddaramaiah…