ನನ್ನ ಟೀಕಿಸಿದರೆ ಪ್ರಚಾರ ಸಿಗುತ್ತೆ ಎಂದು ಟೀಕಿಸ್ತಾರೆ : ಕಟೀಲ್ ಗೆ ಸಿದ್ದರಾಮಯ್ಯ ಟಾಂಗ್
ಬೆಂಗಳೂರು : ನಾನು ಈ ಬಾರಿ ಮಾತ್ರವಲ್ಲ ಹಿಂದೆಯೂ ಪಾಲಿಕೆ ಚುನಾವಣೆಯ ಪ್ರಚಾರಕ್ಕೆ ಹೋಗಿಲ್ಲ. ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಲ್ಲವೇ? ಅವರು ಎಷ್ಟು ಕಡೆ ಪ್ರಚಾರಕ್ಕೆ ಹೋಗಿದ್ದಾರೆ. ಅವರನ್ನು ಅವರ ಪಕ್ಷದಲ್ಲಿ ಕೇಳುವವರಿಲ್ಲ. ನನ್ನನ್ನು ಟೀಕಿಸಿದರೆ ಪ್ರಚಾರ ಸಿಗುತ್ತೆ ಎಂದು ಟೀಕಿಸುತ್ತಾರೆ ಅಷ್ಟೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಟಾಂಗ್ ನೀಡಿದ್ದಾರೆ.
ಮೂರು ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶದ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ರಾಜ್ಯದಲ್ಲಿ ಅಧಿಕಾರದಲ್ಲಿರುವ ಪಕ್ಷಕ್ಕೆ ಇಂತಹ ಚುನಾವಣೆಗಳಲ್ಲಿ ಹೆಚ್ಚು ಅನುಕೂಲಗಳಿವೆ. ಬಿಜೆಪಿಯ ಸಂಪನ್ಮೂಲಕ್ಕೆ ನಾವು ಸಾಟಿಯಲ್ಲ, ಅದೇ ರೀತಿ ಆಡಳಿತ ಯಂತ್ರವನ್ನು ಅವರು ದುರುಪಯೋಗಪಡಿಸಿಕೊಂಡಿದ್ದಾರೆ. ಕಲ್ಬುರ್ಗಿಯಲ್ಲಿ ನಮ್ಮ ಶಾಸಕಿಯ ಸಂಬಂಧಿ ಮೇಲೆ ಹಲ್ಲೆ ನಡೆಸಿದ್ದಾರೆ. ಹೀಗಿದ್ದರೂ ನಮ್ಮ ಸಾಧನೆ ಸಮಾಧಾನಕರ ಎಂದಿದ್ದಾರೆ.
ಬೆಳಗಾವಿ ಮಹಾನಗರ ಪಾಲಿಕೆಯ ಫಲಿತಾಂಶ ಅನಿರೀಕ್ಷಿತ. 58 ಸ್ಥಾನಗಳಲ್ಲಿ 9 ಸ್ಥಾನಗಳನ್ನು ಮಾತ್ರ ನಾವು ಗೆದ್ದಿದ್ದು, ಬಿಜೆಪಿ ಪಕ್ಷ ಬಹುಮತ ಗಳಿಸಿದೆ. ಇಲ್ಲಿನ ಪಾಲಿಕೆ ವ್ಯಾಪ್ತಿಯಲ್ಲಿ ನಮ್ಮ ಪಕ್ಷದ ಶಾಸಕರು ಹಾಗೂ ಸಂಸದರು ಇಲ್ಲದಿರುವುದು ಕೂಡಾ ನಮ್ಮ ಹಿನ್ನಡೆಗೆ ಕಾರಣ.
ಹುಬ್ಬಳ್ಳಿ ಧಾರವಾಡದಲ್ಲಿ ಬಹುಮತ ಗಳಿಸುವ ನಿರೀಕ್ಷೆಯಿತ್ತು, ಅತಂತ್ರ ಫಲಿತಾಂಶ ಬಂದಿದೆ. ಕೇಂದ್ರ ಸಚಿವರು, ಮುಖ್ಯಮಂತ್ರಿಗಳು, ಹಲವು ಮಂದಿ ಶಾಸಕರ ಹೊರತಾಗಿಯೂ ಬಿಜೆಪಿಯದ್ದು ದೊಡ್ಡ ಗೆಲುವಲ್ಲ, ಕೆಲವೇ ಕ್ಷೇತ್ರಗಳ ಅಂತರದಲ್ಲಿ ನಾವು ಬಹುಮತ ಕಳೆದುಕೊಂಡದ್ದು ಕಡಿಮೆ ಸಾಧನೆಯೂ ಅಲ್ಲ.
ಮಹಾನಗರ ಪಾಲಿಕೆಗಳ ಚುನಾವಣಾ ಫಲಿತಾಂಶ ಜನರ ಒಲವು ಬಿಜೆಪಿ ಪರವಾಗಿರುವುದನ್ನು ತೋರಿಸುತ್ತದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ಅವರ ರಾಜಕೀಯ ಜ್ಞಾನದ ಕೊರತೆಯನ್ನು ತೋರಿಸುತ್ತದೆ. ಬೆಳಗಾವಿ ಬಿಟ್ಟರೆ ಬೇರೆಲ್ಲಿ ಬಿಜೆಪಿ ಬಹುಮತ ಪಡೆದಿದೆಯಂತೆ?
ನಾನು ಚುನಾವಣಾ ಪ್ರಚಾರಕ್ಕೆ ಹೋಗದಿರುವುದು ಚುನಾವಣೆಗೆ ಮೊದಲೇ ಸೋಲೊಪ್ಪಿಕೊಂಡಂತೆ ಎಂಬ ಕಟೀಲ್ ಹೇಳಿಕೆ ಎಂದಿನಂತೆ ಒಂದು ಬಾಲಿಷ ಹೇಳಿಕೆ. ಅವರ ಮಾತಿನ ಪ್ರಕಾರ ಬಿಜೆಪಿ ಗೆಲುವಿನ ಕಾರಣ ನಾನು ಎಂದಾಗುವುದಿಲ್ಲವೇ?
ನಾನು ಈ ಬಾರಿ ಮಾತ್ರವಲ್ಲ ಹಿಂದೆಯೂ ಪಾಲಿಕೆ ಚುನಾವಣೆಯ ಪ್ರಚಾರಕ್ಕೆ ಹೋಗಿಲ್ಲ. ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಲ್ಲವೇ? ಅವರು ಎಷ್ಟು ಕಡೆ ಪ್ರಚಾರಕ್ಕೆ ಹೋಗಿದ್ದಾರೆ. ಅವರನ್ನು ಅವರ ಪಕ್ಷದಲ್ಲಿ ಕೇಳುವವರಿಲ್ಲ. ನನ್ನನ್ನು ಟೀಕಿಸಿದರೆ ಪ್ರಚಾರ ಸಿಗುತ್ತೆ ಎಂದು ಟೀಕಿಸುತ್ತಾರೆ ಅಷ್ಟೆ.
ತಾಲಿಬಾನಿಗಳಿಂದ ಭಾರತದಲ್ಲಿ ತೈಲ ಬೆಲೆಯೇರಿಕೆ ಆಗುತ್ತಿದೆ ಎಂಬ ಅರವಿಂದ ಬೆಲ್ಲದ್ ಹೇಳಿಕೆ ದಡ್ಡತನದ ಪರಮಾವಧಿ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗದೆ ಇದ್ದಾಗ ದೇಶದೊಳಗೆ ಮಾತ್ರ ತೈಲಬೆಲೆ ಏರಿದರೆ ಅದಕ್ಕೆ ತಾಲಿಬಾನ್ ಹೇಗೆ ಕಾರಣವಾಗುತ್ತೆ?
ತಾಲೂಕು ಹಾಗೂ ಜಿಲ್ಲಾ ಪಂಚಾಯತ ಚುನಾವಣೆಗೆ ಸಂಬಂಧಿಸಿದ ಮೀಸಲಾತಿ ಆಯೋಗ ರಚನೆಯ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಈಗಲೇ ಚುನಾವಣೆ ನಡೆಸಲು ಬಿಜೆಪಿ ಸರ್ಕಾರಕ್ಕೆ ಧೈರ್ಯವಿಲ್ಲ. ಸೋಲಿನ ಭಯದಿಂದ ಚುನಾವಣೆ ಮುಂದೂಡಲು ಈ ರೀತಿಯ ನಾಟಕ ಮಾಡುತ್ತಿದೆ ಎಂದು ಟೀಕೆ ಮಾಡಿದ್ದಾರೆ.