ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಜೋರಾಗಿರುವ ನಡುವೆಯೇ ಮಾಜಿ ಸಚಿವ KN ರಾಜಣ್ಣ ಮಹತ್ವದ ಹೇಳಿಕೆ ನೀಡಿದ್ದಾರೆ. ರಾಜ್ಯ ಸಚಿವ ಸಂಪುಟ ಪುನಾರಚನೆ ನಡೆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಥಾನಕ್ಕೆ ಯಾವುದೇ ಅಡ್ಡಿ ಅಥವಾ ಆತಂಕ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜಣ್ಣ, ನಾಯಕತ್ವ ಬದಲಾವಣೆ ಕುರಿತ ಗೊಂದಲಕ್ಕೆ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟನೆ ನೀಡಬೇಕಿದೆ ಎಂದರು. ಸಿದ್ದರಾಮಯ್ಯ ಅವರನ್ನು ಮುಂದುವರಿಸಲಾಗುತ್ತದೆಯೇ ಅಥವಾ ಬೇರೆ ನಿರ್ಧಾರವಾಗುತ್ತದೆಯೇ ಎಂಬುದರ ಬಗ್ಗೆ ಹೈಕಮಾಂಡ್ ಅಧಿಕೃತವಾಗಿ ಹೇಳಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ನಿರಂತರವಾಗಿ ನಾಯಕತ್ವ ಬದಲಾವಣೆ ಚರ್ಚೆಗಳು ನಡೆಯುತ್ತಿರುವುದರಿಂದ ಸರ್ಕಾರದ ಕಾರ್ಯಕ್ಷಮತೆ ಮೇಲೆ ಪರಿಣಾಮ ಬೀಳಬಹುದು. ಇದೇ ಗೊಂದಲ ಮುಂದುವರಿದರೆ ಆಡಳಿತವನ್ನು ಪರಿಣಾಮಕಾರಿಯಾಗಿ ನಡೆಸುವುದು ಕಷ್ಟವಾಗುತ್ತದೆ ಎಂದು ಅವರು ಎಚ್ಚರಿಸಿದರು.
ಇದೇ ವೇಳೆ, ಈ ರೀತಿಯ ಒಳರಾಜಕೀಯ ಚರ್ಚೆಗಳು ವಿರೋಧ ಪಕ್ಷಗಳಿಗೆ ಲಾಭವಾಗುವ ಸಾಧ್ಯತೆ ಇದೆ. ಹೀಗೆ ಗೊಂದಲ ಸೃಷ್ಟಿಯಾದರೆ ಅದು ವಿಪಕ್ಷಗಳಿಗೆ ಹಾಸಿಗೆ ಹಾಕಿಕೊಟ್ಟಂತಾಗುತ್ತದೆ ಎಂದು ರಾಜಣ್ಣ ಅಭಿಪ್ರಾಯಪಟ್ಟರು.
ರಾಜ್ಯ ಕಾಂಗ್ರೆಸ್ನಲ್ಲಿ ಸಚಿವ ಸಂಪುಟ ವಿಸ್ತರಣೆ ಹಾಗೂ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ತೀವ್ರವಾಗಿರುವ ಸಮಯದಲ್ಲಿ ರಾಜಣ್ಣ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.








