ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಪತ್ನಿ ಹಾಗೂ ಪುತ್ರ ಡಾ.ಯತೀಂದ್ರ ಅವರಿಗೂ ಕೊರೊನಾ ಆತಂಕ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಯತೀಂದ್ರ ಹಾಗೂ ಕುಟುಂಬದ ಎಲ್ಲಾ ಸದಸ್ಯರಿಗೂ ಕೊರೊನಾ ಟೆಸ್ಟ್ ಮಾಡಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.
ಕಳೆದ ಕೆಲ ದಿನಗಳ ಹಿಂದಷ್ಟೇ ಮೈಸೂರಿನ ಹುಟ್ಟೂರಿಗೆ ತೆರಳಿದ್ದ ಸಿದ್ದರಾಮಯ್ಯ, ಪುತ್ರ ರಾಕೇಶ್ ವಾರ್ಷಿಕ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಆಪ್ತರು ಹಾಗೂ ಕುಟುಂಬ ಸದಸ್ಯರು ಸಿದ್ದರಾಮಯ್ಯ ಅವರ ಸಂಪರ್ಕಕ್ಕೆ ಬಂದಿದ್ದರು. ಈ ಹಿನ್ನೆಲೆಯಲ್ಲಿ ಕುಟುಂಬದ ಎಲ್ಲಾ ಸದಸ್ಯರಿಗೂ ಕೊರೊನಾ ಟೆಸ್ಟ್ ಮಾಡಲು ತೀರ್ಮಾನಿಸಲಾಗಿದೆ.
ಸಿದ್ದು ಸಂಪರ್ಕದಲ್ಲಿದ್ದ ಕೈ ನಾಯಕರಿಗೂ ಆತಂಕ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರ ಜತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಇತರೆ ನಾಯಕರಿಗೂ ಕೊರೊನಾ ಆತಂಕ ಶುರುವಾಗಿದೆ.
ಪ್ರಮುಖವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕಾರ್ಯಧ್ಯಕ್ಷರಾದ ಸಲೀಂ ಅಹಮದ್, ಈಶ್ವರ್ ಖಂಡ್ರೆ, ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಮೈಸೂರು ಮತ್ತು ಮಂಡ್ಯ ಭೇಟಿ ವೇಳೆ ಸಿದ್ದರಾಮಯ್ಯ ಜತೆ ಸಂಪರ್ಕ ಹೊಂದಿದ ಇತರೆ ನಾಯಕರಿಗೂ ಕೊರೊನಾ ಆತಂಕ ವ್ಯಕ್ತವಾಗಿದೆ.
ಜುಲೈ 27ರಂದು ಬೆಂಗಳೂರಿನಲ್ಲಿ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಈ ಎಲ್ಲಾ ನಾಯಕರು ಪಾಲ್ಗೊಂಡಿದ್ದರು. ಈಗ ಈ ಎಲ್ಲಾ ನಾಯಕರೂ ಸ್ವಯಂ ಹೋಂ ಕ್ವಾರಂಟೈನ್ ಆಗುವ ಅಗತ್ಯ ಎದುರಾಗಿದೆ. ಅದರೆ, ಇದುವರೆಗೂ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ಕಲಬುರಗಿ ಪ್ರವಾಸದಲ್ಲಿರುವ ಡಿಕೆಶಿ
ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಉತ್ತರ ಕರ್ನಾಟಕದ ಪ್ರವಾಸ ಕೈಗೊಂಡಿರುವ ಡಿ.ಕೆ ಶಿವಕುಮಾರ್ ಇಂದು ಕಲಬುರಗಿಗೆ ಭೇಟಿ ನೀಡಿದ್ದಾರೆ. ಬೆಂಗಳೂರಿನಿಂದ ವಿಮಾನ ಮೂಲಕ ಕಲಬುರಗಿಗೆ ತೆರಳಿದ ಡಿ.ಕೆ ಶಿವಕುಮಾರ್ ಧಾರ್ಮಿಕ ಕ್ಷೇತ್ರ ಗಾಣಗಾಲಪುರಕ್ಕೆ ಭೇಟಿ ನೀಡಲಿದ್ದಾರೆ.
ಸಿದ್ದರಾಮಯ್ಯ ಅವರ ಜತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಕಾರಣ ಡಿ.ಕೆ ಶಿವಕುಮಾರ್ ಹೋಂಕ್ವಾರಂಟೈನ್ಗೆ ಒಳಗಾಗಬೇಕಿತ್ತು. ಆದರೆ, ಡಿಕೆಶಿ ಕಲಬುರಗಿ ಪ್ರವಾಸದಲ್ಲಿದ್ದು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮಂಗಳಮುಖಿಯರು ರಕ್ಷಾ ಬಂಧನ ಕಟ್ಟಿ ಅವರನ್ನು ಸ್ವಾಗತಿಸಿದ್ದಾರೆ. ಹೀಗಾಗಿ ಇವರಿಗೂ ಕೂಡ ಕೊರೊನಾ ಆತಂಕ ಶುರುವಾಗಿದೆ.