ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಿಂದಾಗಿ ಇಲ್ಲಿಯವರೆಗೆ 52 ಜನ ಸಾವನ್ನಪ್ಪಿದ್ದು, ಸಾಕಷ್ಟು ಪ್ರಮಾಣದಲ್ಲಿ ಆಸ್ತಿ ಪಾಸ್ತಿ, ಬೆಳೆ ಹಾನಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅಲ್ಲದೇ, ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಕರ್ತವ್ಯ ಲೋಪವೆಸಗಿದರೆ ಕ್ರಮ ಕಟ್ಟಿಟ್ಟ ಬುತ್ತಿ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿ ವಿಪತ್ತು ನಿರ್ವಹಣೆ ಕುರಿತು ಚರ್ಚಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಆರಂಭವಾಗಿದೆ. ಏಪ್ರಿಲ್ ನಿಂದ ಜೂನ್ ವರೆಗೆ ಈ ಮಳೆಯಾಗಲಿದ್ದು, ಈ ಬಾರಿ ವಾಡಿಕೆಗಿಂತ ಶೇ. 10ರಷ್ಟು ಹೆಚ್ಚಾಗಿದೆ. ಇದುವರೆಗೆ ಸುಮಾರು 52 ಜನರು, 331 ಜಾನುವಾರು ಸಾವನ್ನಪ್ಪಿದ್ದು, 20 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ ಮತ್ತು 814 ಮನೆಗಳಿಗೆ ಹಾನಿಯಾಗಿದೆ ಎಂದು ಹೇಳಿದ್ದಾರೆ.
ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದ್ದು, ಮರ ಬಿದ್ದು ಸಾವನ್ನಪ್ಪಿದವರು, ಗುಡುಗು ಸಿಡಿಲಿನಿಂದ ಸಾವನ್ನಪ್ಪಿದವರು ಅಥವಾ ಮಳೆ ನೀರಿನಿಂದ ಕೊಚ್ಚಿಹೋದ 52 ಮಂದಿಯ ಕುಟುಂಬಕ್ಕೆ ಈಗಾಗಲೇ 5 ಲಕ್ಷ ರೂ. ಪರಿಹಾರ ನೀಡಲಾಗಿದೆ ಎಂದು ಹೇಳಿದ್ದಾರೆ.